ಬೆಂಗಳೂರು: ದೇಶದ ಹಲವೆಡೆ ಕೊರೋನಾ ಪ್ರಕರಣಗಳು ಹೆಚ್ಚಗುತ್ತಿದ್ದು, ಕಳೆದ ಹದಿನೈದು ದಿನಗಳಲ್ಲಿ ಪ್ರಕರಣಗಳ ಸಂಖ್ಯೆ ಸಾವಿರದ ಗಡಿ ದಾಟಿದೆ. ಕೇರಳ, ಮಹಾರಾಷ್ಟ್ರ ಹಾಗೂ ದೆಹಲಿಯಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗಿದೆ. ರಾಜ್ಯದಲ್ಲಿಯೂ ಸಕ್ರಿಯ ಪ್ರಕರಣಗಳ ಸಂಖ್ಯೆ ಶತಕದ ಗಡಿ ಮೀರಿದೆ. ಕೆಲವೆಡೆ ಸಾವಿನ ವರದಿಯೂ ಆಗಿದೆ.
ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಚ್ಚರಗೊಂಡಿದ್ದು, ಕೊರೋನಾ ಸೋಂಕು ಹರಡುವುದನ್ನು ತಡೆಯಲು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಎಲ್ಲಾ ಆಸ್ಪತ್ರೆಗಳಿಗೆ ಹೃದಯ ಹಾಗೂ ಉಸಿರಾಟ ಸಂಬಂಧಿ ಸಮಸ್ಯೆಗಳಿರುವ ರೋಗಿಗಳನ್ನು ತಪಾಸಣೆಗೆ ಒಳಪಡಿಸುವಂತೆ ಸೂಚಿಸಲಾಗಿದೆ. ಜೊತೆಗೆ ಮುನ್ನೆಚ್ಚರಿಕೆ ಕ್ರಮಗಳಿಗೆ ಸಂಬಂಧಿಸಿದ ಮಾರ್ಗಸೂಚಿಗಳನ್ನು ಆಸ್ಪತ್ರೆ ಹಾಗೂ ಶಾಲೆಗಳಿಗೆ ಕಳುಹಿಸಲಾಗಿದೆ.
ಆರೋಗ್ಯ ಇಲಾಖೆಗೆ ಕೋವಿಡ್ ಪರೀಕ್ಷಾ ಕಿಟ್ಗಳನ್ನು ಮುಂಚಿತವಾಗಿ ಸಂಗ್ರಹಿಸಿಡುವಂತೆ ಸರ್ಕಾರ ಸೂಚನೆ ನೀಡಿದೆ. ಜನರಲ್ಲಿ ಜಾಗೃತಿ ಮೂಡಿಸಲು ವಿವಿಧ ಸಂಘ-ಸಂಸ್ಥೆಗಳು, ಹಿರಿಯ ನಾಗರಿಕರು ಮತ್ತು ಕೊರೋನಾಕ್ಕೆ ಹೆಚ್ಚು ತುತ್ತಾಗುವ ಸಾಧ್ಯತೆ ಇರುವವರ ಮೇಲೆ ಗಮನಹರಿಸಿ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಬೇಕೆಂದು ಕರೆ ನೀಡಲಾಗಿದೆ.
ಸಾಮಾನ್ಯ ಜನತೆ ಈ ಬಗ್ಗೆ ಹೆಚ್ಚು ಆತಂಕಪಡುವ ಅಗತ್ಯವಿಲ್ಲ. ಆದರೆ ನಿರ್ಲಕ್ಷ್ಯವೂ ತಕ್ಕದ್ದಲ್ಲ. ಕರೋನಾವೈರಸ್ ಗಾಳಿಯಲ್ಲಿ ಹರಡುವ ಸೋಂಕು ಅಲ್ಲ. ಬದಲಾಗಿ ಸೋಂಕಿತ ವ್ಯಕ್ತಿಯ ಸಂಪರ್ಕದಿಂದ ಹರಡುವುದರಿಂದ, ಸಾಮಾಜಿಕ ಅಂತರ ಕಾಪಾಡುವುದು ಮುಖ್ಯ.
ಸರ್ಕಾರ ಮಾಸ್ಕ್ ಕಡ್ಡಾಯಗೊಳಿಸುವುದಕ್ಕಾಗಿ ಕಾಯದೆ, ಈಗಿನಿಂದಲೇ ಮಾಸ್ಕ್ ಧರಿಸುವುದು ರೂಢಿಸಿಕೊಂಡರೆ ಉತ್ತಮ. ಶ್ವಾಸಕೋಶ, ಹೃದಯ, ಕಿಡ್ನಿ, ಮಧುಮೇಹ, ನ್ಯುಮೋನಿಯಾ ಇತ್ಯಾದಿ ಸಮಸ್ಯೆ ಇರುವವರು, 60 ವರ್ಷ ಮೇಲ್ಪಟ್ಟವರು ಹಾಗೂ ಸಣ್ಣ ಮಕ್ಕಳು ತಮ್ಮ ಆರೋಗ್ಯದ ಕಡೆ ಹೆಚ್ಚು ಗಮನಹರಿಸಬೇಕು.
PublicNext
30/05/2025 07:33 am