ನವದೆಹಲಿ: ಬೆಂಗಳೂರಿನಲ್ಲಿ 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸ್ಥಳ ನಿಗದಿ ಕುರಿತು ಸೇರಿದಂತೆ ಕರ್ನಾಟಕದ ವೈಮಾನಿಕ ವಲಯದ ಹಲವು ಬೇಡಿಕೆಗಳೊಂದಿಗೆ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ್ ನವದೆಹಲಿಯಲ್ಲಿ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕೆ.ರಾಮಮೋಹನ್ ನಾಯ್ಡು ಅವರನ್ನ ಭೇಟಿಯಾಗಿ ಮನವಿ ಸಲ್ಲಿಸಿದರು.
ಬೆಂಗಳೂರಿನ ಸಮೀಪ ಮತ್ತೊಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಲು ರಾಜ್ಯ ಸರಕಾರ ತೀರ್ಮಾನಿಸಿದೆ. ಇದಕ್ಕಾಗಿ ಆಯ್ಕೆ ಮಾಡಿದ್ದ ಮೂರು ಸ್ಥಳಗಳನ್ನು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಉನ್ನತ ಮಟ್ಟದ ತಂಡವು ಪರಿಶೀಲಿಸಿದೆ. ಹೀಗಾಗಿ ಒಂದು ಸ್ಥಳವನ್ನು ಆದಷ್ಟು ಶೀಘ್ರವೇ ಆಖೈರು ಮಾಡಿದರೆ, ರಾಜ್ಯವು ಮುಂದಿನ ಕೆಲಸ ಕೈಗೆತ್ತಿಕೊಳ್ಳಲು ಅನುಕೂಲವಾಗಲಿದೆ ಎಂದಿದ್ದಾರೆ. ಜೊತೆಗೆ, ವಿಜಯಪುರದಲ್ಲಿ ಉದ್ಘಾಟನೆಗೆ ಸಿದ್ಧವಾಗಿರುವ ವಿಮಾನ ನಿಲ್ದಾಣಕ್ಕೆ ಕೇಂದ್ರ ಪರಿಸರ ಇಲಾಖೆಯ ಅನುಮತಿ ಬಾಕಿರುವ ಬಗ್ಗೆಯೂ ಭೇಟಿ ವೇಳೆ ಚರ್ಚಿಸಿದರು.
ಕೇಂದ್ರ ಸಚಿವರ ಭೇಟಿ ವೇಳೆ ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಕಾರ್ಯದರ್ಶಿ ಡಾ.ಎನ್.ಮಂಜುಳಾ, ಕೆಎಸ್ಐಐಡಿಸಿ ವ್ಯವಸ್ಥಾಪಕ ನಿರ್ದೇಶಕಿ ಖುಷ್ಬೂ ಗೋಯಲ್ ಉಪಸ್ಥಿತಿರಿದ್ದರು.
PublicNext
24/07/2025 07:40 pm