ಕಾರವಾರ: ಆಕೆ ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ರಾಜ್ಯದೆಲ್ಲೆಡೆ ತನ್ನ ಭಕ್ತರನ್ನ ಹೊಂದಿದ ಫೇಮಸ್ ದೇವತೆ. ಭಕ್ತರ ಸಂಕಟ ದೂರ ಮಾಡಿ ಇಷ್ಟಾರ್ಥ ಸಿದ್ಧಿಸುವ ಶಕ್ತಿ ದೇವತೆ. ಆದ್ರೆ ಆ ದೇವಿ ವರ್ಷದಲ್ಲಿ ಕೇವಲ 7 ದಿನ ಮಾತ್ರ ದರ್ಶನ ಕೊಡ್ತಾಳೆ. ಅಷ್ಟೆ ಅಲ್ಲದೆ ದೇವಿಯ ಫೋಟೋ ಕೂಡ ಯಾರೂ ತೆಗೆಯುವಂತಿಲ್ಲ. ದೇವಿಯ ದರ್ಶನಕ್ಕಾಗಿ ದೇವಸ್ಥಾನಕ್ಕೆ ಬರಬೇಕಿರುವ ಹಿನ್ನಲೆ ನಿನ್ನೆಯಿಂದ ಭಕ್ತರ ದಂಡವೇ ಹರಿದು ಬರುತ್ತಿದೆ ಈ ಕುರಿತ ವರದಿ ಇಲ್ಲಿದೆ.
ಸಾಮಾನ್ಯವಾಗಿ ದೇವಸ್ಥಾನ ಅಂದ್ರೆ ಅಲ್ಲಿ ಪ್ರತಿನಿತ್ಯ ತ್ರಿಕಾಲ ಪೂಜೆ, ಭಕ್ತರಿಗೆ ದರ್ಶನ, ಇನ್ನೂ ವಿವಿಧ ಧಾರ್ಮಿಕ ಚಟುವಟಿಕೆಗಳು ನಡೆಯುತ್ತಿರುತ್ತದೆ. ಆದ್ರೆ ವರ್ಷವಿಡೀ ದೇವಸ್ಥಾನದ ಬಾಗಿಲು ಮುಚ್ಚಿ ವರ್ಷದಲ್ಲಿ ಕೇವಲ ಏಳು ದಿನ ಮಾತ್ರ ಭಕ್ತರಿಗೆ ದರ್ಶನ ಕೊಡುವ ದೇವಾಲಯದ ಬಗ್ಗೆ ಎಲ್ಲಾದ್ರೂ ಕೇಳಿದ್ದೀರಾ? ಹೌದು ಉತ್ತರಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಹಣಕೋಣ ಗ್ರಾಮದಲ್ಲಿರುವ ಸಾತೇರಿ ಅನ್ನೋ ದೇವಸ್ಥಾನದಲ್ಲಿ ದೇವಿಯ ದರ್ಶನಕ್ಕೆ ವರ್ಷದಲ್ಲಿ ಏಳು ದಿನ ಮಾತ್ರ ಅವಕಾಶ ಮಾಡಿಕೊಡಲಾಗುತ್ತದೆ. ಸಾತೇರಿದೇವಿ ತನ್ನ ಜಾತ್ರಾ ಮಹೋತ್ಸವದಲ್ಲಿ ಮಾತ್ರ ಭಕ್ತರಿಗೆ ದರ್ಶನವನ್ನ ಕೊಡುವ ಪ್ರತೀತಿ ಸಹ ಇದೆ. ಈ ಬಾರಿ ಸಹ ಅದ್ದೂರಿಯಾಗಿ ಸಾತೇರಿ ದೇವಿಯ ಜಾತ್ರಾ ಮಹೋತ್ಸವ ನಡೆಯಿತು.
ಇನ್ನು ವರ್ಷದಲ್ಲಿ ಕೇವಲ ಏಳು ದಿನ ಮಾತ್ರ ದರ್ಶನದ ಅವಕಾಶವಿರುವ ಈ ಸಾತೇರಿ ದೇವಿಗೆ ಪೌರಾಣಿಕ ಇತಿಹಾಸವೇ ಇದೆ. ಹಣಕೋಣದಲ್ಲಿರುವ ಸಾತೇರಿ ದೇವಿ ತನ್ನ ಭಕ್ತರ ಕಷ್ಟಗಳನ್ನು ನಿವಾರಿಸಿ, ಸಹಾಯ ಸಹಕಾರದ ಅಗತ್ಯವಿದ್ದರೆ ಭಕ್ತರ ಸಮ್ಮುಖದಲ್ಲಿ ಪ್ರತ್ಯಕ್ಷಳಾಗಿ ಕಷ್ಟಗಳನ್ನ ನಿವಾರಿಸುತ್ತಿದ್ದಳಂತೆ. ಒಮ್ಮೆ ದೇವಿ ಬಾವಿಯ ಪಕ್ಕದಲ್ಲಿ ಸ್ನಾನ ಮಾಡಿ ಕೂದಲನ್ನ ಬಾಚಿಕೊಳ್ಳುವಾಗ ಒಬ್ಬ ದುಷ್ಟನ ಕಣ್ಣು ದೇವಿಯ ಮೇಲೆ ಬಿದ್ದು ದೇವಿಯ ಬಳಿ ಬಂದಾಗ ಆಕೆ ರಕ್ಷಣೆಗಾಗಿ ಬಾವಿಗೆ ಹಾರಿ ಅದೃಶ್ಯಳಾದಳಂತೆ. ಬಳಿಕ ಊರಿನ ಹಿರಿಯನೊಬ್ಬನಿಗೆ ದೇವಿ ಕನಸಿನಲ್ಲಿ ಬಂದು ತಾನು ಬಾವಿಯಲ್ಲಿ ಅದೃಶ್ಯಳಾಗಿದ್ದು ತಾನು ನೆಲೆಸಿರುವ ಸ್ಥಳದಲ್ಲೇ ಸಣ್ಣ ಗುಡಿಯೊಂದನ್ನು ಕಟ್ಟಿಕೊಡುವಂತೆ ಹೇಳಿ ವರ್ಷದಲ್ಲಿ 7 ದಿನಗಳ ಕಾಲ ಮಾತ್ರ ತನ್ನ ದರ್ಶನ ನೀಡುವುದಾಗಿ ತಿಳಿಸಿದ್ದಳಂತೆ. ಅದರಂತೆ ನಂತರದ ದಿನಗಳಲ್ಲಿ ಈ ಜಾಗದಲ್ಲಿ ಚಿಕ್ಕ ಗುಡಿ ಕಟ್ಟಲಾಯಿತು. ಈ ದೇವಿಯ ಪೋಟೋ ಮಾರಾಟ ಮಾಡುವುದಾಗಲಿ, ಮೊಬೈಲ್, ಕ್ಯಾಮೆರಾಗಳಲ್ಲಿ ಚಿತ್ರಿಸಿಕೊಳ್ಳುವುದಕ್ಕಾಗಲೀ ದೇವಸ್ಥಾನದಲ್ಲಿ ಅವಕಾಶವಿರುವುದಿಲ್ಲ.
ಒಟ್ಟಿನಲ್ಲಿ ಈ ಬಾರಿ ಸಹ ಸಾತೇರಿ ದೇವಿಯ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ನಡೆಯಿತು.
ಪ್ರವೀಣ್ ಹೊಸಂತೆ. ಪಬ್ಲಿಕ್ ನೆಕ್ಸ್ಟ್ ಕಾರವಾರ
PublicNext
04/09/2025 10:24 pm