ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ಪ್ರಸಕ್ತ ವರ್ಷ ಮಳೆಯಿಂದ ಹಾನಿಗೀಡಾದ ಬೆಳೆಯ ಸಮೀಕ್ಷಾ ವರದಿಯನ್ನು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಸರ್ಕಾರಕ್ಕೆ ಸಲ್ಲಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು, ಧಾರವಾಡ ಜಿಲ್ಲೆಯಲ್ಲಿ ಈ ಬಾರಿ ಸುರಿದ ವಿಪರೀತ ಮಳೆಯಿಂದಾಗಿ 97 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆದ ಬೆಳೆಗಳು ನಾಶವಾಗಿವೆ. ಜೀವಹಾನಿ ಕುರಿತೂ ಸರ್ಕಾರದ ನಿಯಮಾವಳಿ ಪ್ರಕಾರ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ. ಬೆಳೆಹಾನಿ ಬಗ್ಗೆ ಜಂಟಿ ಸಮೀಕ್ಷೆ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ. ಪ್ರಾಥಮಿಕ ವರದಿಯಂತೆ 93 ಸಾವಿರ ಹೆಕ್ಟೇರ್ ಪ್ರದೇಶದಲ್ಲಿನ ಬೆಳೆ ಹಾನಿ ಕುರಿತು ವರದಿ ಸಲ್ಲಿಸಲಾಗಿತ್ತು. 80 ಸಾವಿರ ಹೆಕ್ಟೇರ್ ಪ್ರದೇಶದಲ್ಲಿನ ಹೆಸರು ಬೆಳೆ ಮಳೆಯಿಂದ ಹಾನಿಗೀಡಾಗಿದೆ. 11 ಸಾವಿರ ಹೆಕ್ಟೇರ್ ಪ್ರದೇಶದಲ್ಲಿನ ಉದ್ದಿನ ಬೆಳೆ ನಾಶವಾಗಿದೆ. ತೋಟಗಾರಿಕಾ ಬೆಳೆಗಳಾದ ಈರುಳ್ಳಿ, ಮೆಣಸಿನಕಾಯಿ ಬೆಳೆಗಳೂ ಹಾನಿಗೀಡಾಗಿವೆ. ಈ ಬಗ್ಗೆಯೂ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ ಎಂದರು.
ಒಂದು ವಾರಗಳ ಕಾಲ ತಕರಾರಿಗೆ ಆನ್ಲೈನ್ನಲ್ಲಿ ಅವಕಾಶ ಕಲ್ಪಿಸಲಾಗಿದೆ. ಈಗಾಗಲೇ 2 ಸಾವಿರ ತಕರಾರುಗಳು ಬಂದಿವೆ. ಆಯಾ ಇಲಾಖೆಯ ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿದ್ದಾರೆ. ಅಂತಿಮ ವರದಿ ಪ್ರಕಾರ 97 ಸಾವಿರ ಹೆಕ್ಟೇರ್ ಪ್ರದೇಶದಲ್ಲಿನ ಬೆಳೆಗಳು ಹಾನಿಗೀಡಾಗಿವೆ. ಒಂದು ವಾರದಲ್ಲಿ ಪರಿಹಾರ ತಂತ್ರಾಂಶದಲ್ಲಿ ರೈತರ ಖಾತೆಗೆ ಪರಿಹಾರ ಬಿಡುಗಡೆ ಮಾಡಲಾಗುವುದು. ನಾವು ಮಾಡಿದ ಕೆಲಸಕ್ಕೆ ಸಿಎಂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನಮ್ಮ ಜಿಲ್ಲೆಗೆ 85 ಕೋಟಿ ಪರಿಹಾರ ಬೇಕಾಗುತ್ತದೆ. ಈಗಾಗಲೇ 22 ಕೋಟಿ ಪರಿಹಾರ ಮೊತ್ತವನ್ನು ಸರ್ಕಾರ ನಮಗೆ ಹಾಕಿದೆ. ಇನ್ನುಳಿದ ಪರಿಹಾರದ ಮೊತ್ತವನ್ನು ಸರ್ಕಾರ ಕೊಡಬೇಕಿದೆ ಎಂದರು.
Kshetra Samachara
09/09/2025 06:05 pm