ಚಿಕ್ಕಮಗಳೂರು : ಶಾಸಕ ಹೆಚ್.ಡಿ. ತಮ್ಮಯ್ಯ ಅವರು ತಮ್ಮ ಅಧಿಕಾರಾವಧಿ ಪೂರ್ಣಗೊಳ್ಳುವ ಮೊದಲು ಭದ್ರಾ ಉಪಕಣಿವೆ ಯೋಜನೆ, ಹೈಟೆಕ್ ಬಸ್ ನಿಲ್ದಾಣ, ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಪೂರ್ಣಗೊಳಿಸಿ ಸಾರ್ವಜನಿಕರ ಸೇವೆಗೆ ಮುಕ್ತಗೊಳಿಸುವುದು ತಮ್ಮ ಕನಸಾಗಿದೆ ಎಂದು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಯೋಜನೆಗಳ ಸಾಕಾರಕ್ಕೆ ಜಿಲ್ಲಾ ಉಸ್ತುವಾರಿ ಸಚಿವರೂ ಸೇರಿದಂತೆ ರಾಜ್ಯ ಸರಕಾರ ಸಂಪೂರ್ಣ ಸಹಕಾರ ನೀಡಿದೆ. ರಾಜ್ಯ ಸರಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದ್ದು, ಇದರ ಪರಿಣಾಮ ರಾಜ್ಯದ ಜನರ ತಲಾದಾಯವು ಹೆಚ್ಚಾಗಿದೆ. ಇಡೀ ದೇಶದಲ್ಲೇ ಕರ್ನಾಟಕವೇ ಅತಿ ಹೆಚ್ಚು ತಲಾದಾಯ ಹೊಂದಿರುವ ರಾಜ್ಯವಾಗಿದೆ ಎಂದರು.
ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಈಗಾಗಲೇ ಅಗತ್ಯ ಅನುದಾನ ಒದಗಿಸಲಾಗಿದ್ದು, ಸ್ತನ ಕ್ಯಾನ್ಸರ್ ಪತ್ತೆಗೆ ಮ್ಯಾಮೋಗ್ರಾಫಿ ವಿಭಾಗವನ್ನು ಜಿಲ್ಲಾಸ್ಪತ್ರೆಯ ಆವರಣದಲ್ಲಿ ಪ್ರಾರಂಭಿಸಲಾಗಿದೆ. ವೈದ್ಯಕೀಯ ವಿಜ್ಞಾನಗಳ ಕಾಲೇಜಿಗೂ ಅನುದಾನ ಮಂಜೂರಾಗಿದೆ ಎಂದು ವಿವರಿಸಿದರು.
ಹಿಂದಿನ ಶಾಸಕರ ಅವಧಿಯಲ್ಲಿ ಶತಮಾನೋತ್ಸವ ಕ್ರೀಡಾಂಗಣದ ಅಭಿವೃದ್ಧಿ ಕಾಮಗಾರಿ ನೆನೆಗುದಿಗೆ ಬಿದ್ದಿದ್ದರೂ, ತಮ್ಮ ಅವಧಿಯಲ್ಲಿ ಅದಕ್ಕೆ ಪುನಃ ಚೈತನ್ಯ ತುಂಬಲಾಗುತ್ತಿದೆ ಎಂದು ತಿಳಿಸಿದರು. ಭದ್ರಾ ಉಪಕಣಿವೆ ಯೋಜನೆ ಮೂಲಕ ಕೆರೆ ತುಂಬಿಸುವ ಕಾರ್ಯ, ಹೈಟೆಕ್ ಬಸ್ ನಿಲ್ದಾಣ, ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಅಭಿವೃದ್ಧಿ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಪೂರ್ಣಗೊಳಿಸಿ ಜಿಲ್ಲೆಯ ಜನತೆಗೆ ಆರೋಗ್ಯ, ಮೂಲಸೌಕರ್ಯ ಹಾಗೂ ಕ್ರೀಡಾ ಕ್ಷೇತ್ರಗಳಲ್ಲಿ ಹೊಸ ಯುಗ ಆರಂಭವಾಗಲಿದೆ ಎಂದು ಶಾಸಕ ತಮ್ಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.
PublicNext
09/09/2025 06:12 pm