ಚಿಕ್ಕಮಗಳೂರು : ರಾಜ್ಯ ಸರ್ಕಾರ ಕಳೆದ ಎರಡೂವರೆ ವರ್ಷದ ಅವಧಿಯಲ್ಲಿ ಅಭಿವೃದ್ಧಿಯೊಂದಿಗೆ ಜನಸಾಮಾನ್ಯರ ಬದುಕಿಗೆ ಆಶ್ರಯವಾಗಿರುವ ಪಂಚ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನ ಮಾಡುತ್ತಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹಾಗೂ ಭದ್ರಾ ಕಾಡಾ ಅಧ್ಯಕ್ಷ ಡಾ. ಕೆ.ಪಿ. ಅಂಶುಮಂತ್ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಅಭಿವೃದ್ಧಿ ಶೂನ್ಯ” ಎಂದು ಆರೋಪ ಮಾಡುವ ಪ್ರತಿಪಕ್ಷ ಮುಖಂಡರು ಬಹಿರಂಗ ಚರ್ಚೆಗೆ ಬರಲಿ ಎಂದು ಸವಾಲು ಹಾಕಿದರು. ಆಡಳಿತ ಪಕ್ಷವನ್ನು ಟೀಕಿಸುವ ಬದಲು ಬಿಜೆಪಿಯವರು ರಚನಾತ್ಮಕ ವಿರೋಧ ಪಕ್ಷವಾಗಿ ಕಾರ್ಯನಿರ್ವಹಿಸಿ, ಕೇಂದ್ರದಿಂದ ರಾಜ್ಯಕ್ಕೆ ಸಿಗಬೇಕಾದ ನ್ಯಾಯಯುತ ಅನುದಾನಕ್ಕಾಗಿ ಹೋರಾಡಲಿ, ಅರಣ್ಯ–ಮಾನವ ಸಂಘರ್ಷ ಸಮಸ್ಯೆ ಪರಿಹಾರಕ್ಕೆ ದನಿಯಾಗಲಿ ಎಂದು ಎಚ್ಚರಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅವರು ಜವಾಬ್ದಾರಿಯುತ ಜನಪ್ರತಿನಿಧಿಯಾಗಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಗೃಹಜ್ಯೋತಿ ಸೇರಿದಂತೆ ವಿವಿಧ ವಿದ್ಯುತ್ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದ್ದಾರೆ. ಕಳೆದ ಎರಡು ವರ್ಷಗಳಲ್ಲಿ 45 ಬಾರಿ ಜಿಲ್ಲೆಗೆ ಭೇಟಿ ನೀಡಿ ಅಧಿಕಾರಿಗಳ ಸಭೆ ನಡೆಸಿ ಸಮಸ್ಯೆ ಪರಿಹರಿಸಲು ಪ್ರಯತ್ನಿಸಿದ್ದಾರೆ ಎಂದರು.
ಪ್ರಾಣಿಗಳ ದಾಳಿಯಿಂದ ಮೃತಪಟ್ಟವರು, ಅತಿವೃಷ್ಟಿಯಿಂದ ಮನೆ ಕಳೆದುಕೊಂಡವರಿಗೆ ಸಚಿವರು ವೈಯಕ್ತಿಕ ಸಹಾಯ ಒದಗಿಸಿದ್ದಾರೆ. ಕಸ್ತೂರಿರಂಗನ್ ವರದಿ ತಿರಸ್ಕರಣೆ, ಡೀಮ್ಡ್ ಅರಣ್ಯ ಹಾಗೂ ಸೆಕ್ಷನ್ 4(1) ಸಂಬಂಧಿಸಿದ ಟಾಸ್ಪೋರ್ಸ್ ರಚನೆಗಾಗಿ ರಾಜ್ಯದಿಂದ ಕೇಂದ್ರಕ್ಕೆ ಶಿಫಾರಸು ಸಲ್ಲಿಸಲಾಗಿದೆ ಎಂದು ತಿಳಿಸಿದರು.
PublicNext
09/09/2025 07:12 pm