ಕಠ್ಮಂಡು: ನೇಪಾಳದಲ್ಲಿ ಭುಗಿಲೆದ್ದಿರುವ ಸಂಘರ್ಷ ತಾರಕಕ್ಕೇರಿದಂತೆಯೇ, ಪ್ರಧಾನಿ ಕೆ.ಪಿ. ಶರ್ಮಾ ಒಲಿ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿರುವುದಾಗಿ ವರದಿಯಾಗಿದೆ.
ಪ್ರಧಾನಿ ಕೆ.ಪಿ. ಶರ್ಮಾ ಒಲಿ ಇತ್ತೀಚೆಗೆ ಫೇಸ್ಬುಕ್, ಟ್ವಿಟ್ಟರ್ ಮತ್ತು ಇನ್ಸ್ಟಾಗ್ರಾಮ್ ಸೇರಿದಂತೆ ಹಲವು ಸಾಮಾಜಿಕ ಜಾಲತಾಣಗಳನ್ನು ನಿಷೇಧಿಸುವ ನಿರ್ಧಾರ ಕೈಗೊಂಡಿದ್ದರು. ಈ ಕ್ರಮ ದೇಶಾದ್ಯಂತ ಭಾರೀ ಪ್ರತಿಭಟನೆಗೆ ಕಾರಣವಾಯಿತು.
ಶಾಂತವಾಗಿ ಆರಂಭವಾದ ಪ್ರತಿಭಟನೆಗಳು ಹಂತ ಹಂತವಾಗಿ ಸಂಘರ್ಷವಾಗಿ ಮಾರ್ಪಟ್ಟಿದ್ದು, ರಾಜಕೀಯ ನಾಯಕರ ಮನೆ-ಕಚೇರಿಗಳ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು ಮನೆಗಳಿಗೆ ಬೆಂಕಿ ಹಚ್ಚಿ ತೀವ್ರ ಹಿಂಸಾಚಾರ ಎಸಗಿದ್ದಾರೆ. ಪರಿಸ್ಥಿತಿ ಹದಗೆಟ್ಟಂತೆ, ಒಲಿಯ ಸರ್ಕಾರದ ಹಲವು ಕ್ಯಾಬಿನೆಟ್ ಸಚಿವರು ತಮ್ಮ ಸ್ಥಾನಕ್ಕೆ ಈಗಾಗಲೇ ರಾಜೀನಾಮೆ ನೀಡಿದ್ದಾರೆ.
ಈ ಸಂಘರ್ಷದ ನಡುವೆ, ಪ್ರಧಾನಿ ಕೆ. ಪಿ. ಶರ್ಮಾ ಒಲಿ ದೇಶ ತೊರೆದಿದ್ದಾರೆ ಎಂಬ ವರದಿಗಳು ಬೆಳಕಿಗೆ ಬಂದಿವೆ. ಇದರಿಂದ ನೇಪಾಳದಲ್ಲಿ ಉದ್ವಿಗ್ನ ಪರಿಸ್ಥಿತಿ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆಗಳು ಹೆಚ್ಚಾಗಿವೆ.
ಈ ಘಟನೆಗೆ ಸಂಬಂಧಿಸಿದ ಹಲವು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗುತ್ತಿದ್ದು, ದೇಶದ ರಾಜಕೀಯ ಅನಿಶ್ಚಿತತೆ ಇನ್ನಷ್ಟು ಗಂಭೀರ ಸ್ವರೂಪ ಪಡೆದಿದೆ.
PublicNext
09/09/2025 07:21 pm