ವಿಜಯಪುರ: ರಾಜ್ಯ ಸರ್ಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಸಾವಿರಾರು ರೈತರು ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ಟ್ರ್ಯಾಕ್ಟರ್ ರ್ಯಾಲಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಬೆಂಗಳೂರು ರಾಜ್ಯ ಹೆದ್ದಾರಿ ರಸ್ತೆಯಲ್ಲಿರುವ ಟೋಲ್ ಕೇಂದ್ರದಲ್ಲಿ ಟ್ರ್ಯಾಕ್ಟರ್ ಗಳ ಮೂಲಕ ಆಗಮಿಸಿದ ಸಾವಿರಾರು ರೈತರು ಹಸಿರು ಶಾಲು ಧರಿಸಿ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದರು. ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಿಸದ ಸರ್ಕಾರಕ್ಕೆ ಧಿಕ್ಕಾರ, ರೈತ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ ಎಂಬಿತ್ಯಾದಿ ನಾಮ ಫಲಕಗಳನ್ನು ಪ್ರದರ್ಶಿಸಿ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಶಾಸಕ ಜನಾರ್ಧನ್ ರೆಡ್ಡಿ, ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್. ಪಾಟೀಲ ನಡಹಳ್ಳಿ ಸೇರಿದಂತೆ ಅನೇಕ ನಾಯಕರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು. ಸಾವಿರಾರು ರೈತರ ಸಮ್ಮುಖದಲ್ಲಿ ಸಾಗಿದ ಟ್ರ್ಯಾಕ್ಟರ್ ರ್ಯಾಲಿ ಟೋಲ್ ಕೇಂದ್ರದಿಂದ ಆರಂಭಗೊಂಡು ಗಣೇಶ ನಗರ, ಜಲನಗರ, ಜಮಖಂಡಿ ರಸ್ತೆ, ಬಬಲೇಶ್ವರ ನಾಕಾ, ಶಿವಾಜಿ ಮಹಾರಾಜರ ವೃತ್ತ, ಗಾಂಧಿ ವೃತ್ತ, ಬಸವೇಶ್ವರ ವೃತ್ತದ ಮೂಲಕ ಸಾಗಿ ಡಾ.ಅಂಬೇಡ್ಕರ್ ವೃತ್ತದ ಎದುರು ಸಮಾವೇಶಗೊಂಡಿತು.
ಈ ವೇಳೆ ಶಾಸಕ ಜನಾರ್ಧನ ರೆಡ್ಡಿ ಮಾತನಾಡಿ ರೈತರಿಗಾಗಿ ಒಂದು ಗಂಟೆ ಕೂಡಾ ಈ ಸರ್ಕಾರದ ಬಳಿ ಸಮಯವಿಲ್ಲ. ಈ ರಾಜ್ಯ ಸರ್ಕಾರ ರೈತರ ವಿಷಯದಲ್ಲಿ ಸಂಪೂರ್ಣ ಬೇಜವಾಬ್ದಾರಿ ತೋರಿದೆ ಎಂದು ಸರ್ಕಾರದ ವಿರುದ್ಧ ಗುಡುಗಿದರು.
PublicNext
04/12/2025 06:17 pm