ಶಿವಮೊಗ್ಗ: ಬಿಹಾರ ಮುಖ್ಯಮಂತ್ರಿ ನಿತೀಶ್ಕುಮಾರ್ ಅವರು ಆಯುಷ್ ಮಹಿಳಾ ವೈದ್ಯರ ಪ್ರಮಾಣಪತ್ರ ವಿತರಣೆ ಸಂದರ್ಭದಲ್ಲಿ ಮಹಿಳೆಯ ಧಾರ್ಮಿಕ ವಸ್ತ್ರವಾದ ಹಿಜಾಬನ್ನು ಸಾರ್ವಜನಿಕವಾಗಿ ವೇದಿಕೆಯಲ್ಲಿ ಎಳೆದು ಅವಮಾನಿಸಿರುವುದನ್ನು ಖಂಡಿಸಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಬುಧವಾರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ವಿಭಾಗದ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.
ನಿತೀಶ್ಕುಮಾರ್ ಅವರು ಸಾರ್ವಜನಿಕ ವೇದಿಕೆಯಲ್ಲಿಯೇ ಧಾರ್ಮಿಕ ವಸ್ತ್ರ ಹಿಜಾಬನ್ನು ಕೈಯಿಂದ ಎಳೆದು ಅವಮಾನಿಸಿದ್ದಾರೆ. ಈ ಘಟನೆ ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಮತ್ತು ಆತಂಕಕ್ಕೆ ಕಾರಣವಾಗಿದೆ. ಅಲ್ಲದೆ, ಸಂವಿಧಾನ ಕಲಂ 14, 15, 21 ಮತ್ತು 25ಕ್ಕೆ ವಿರುದ್ಧವಾಗಿದೆ. ಮಹಿಳೆಯ ಗೌರವ, ಸ್ವಾತಂತ್ರ್ಯ ಹಾಗೂ ಧಾರ್ಮಿಕ ಹಕ್ಕುಗಳ ಮೇಲೆ ಗಂಭೀರ ದಾಳಿಯಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಒಬ್ಬ ಮುಖ್ಯಮಂತ್ರಿಯಾಗಿ ಸಂವಿಧಾನಾತ್ಮಕ ಹುದ್ದೆಯಲ್ಲಿದ್ದರೂ ಕೂಡ ಒಬ್ಬ ಮಹಿಳೆಯ ಮೇಲೆ ಈ ರೀತಿ ವರ್ತಿಸಿ ಅವಮಾನಿಸಿರುವುದು ಅತ್ಯಂತ ಖಂಡನೀಯವಾಗಿದೆ. ಭಾರತ ಧರ್ಮನಿರಪೇಕ್ಷ ಮತ್ತು ಪ್ರಜಾಸತ್ತಾತ್ಮಕ ರಾಷ್ಟ್ರವಾಗಿದೆ. ಈ ರೀತಿ ನಡೆದುಕೊಂಡಿರುವುದು ಘೋರ ಅಪರಾಧವಾಗಿದೆ. ಆದ್ದರಿಂದ ಈ ಘಟನೆಯ ಬಗ್ಗೆ ಸಂಪೂರ್ಣ ತನಿಖೆಗೆ ಆದೇಶಿಸಬೇಕು ಮತ್ತು ನಿತೀಶ್ ಕುಮಾರ್ ಅವರು ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು. ಸಂವಿಧಾನ ಉಲ್ಲಂಘನೆಯ ಹಿನ್ನಲೆಯಲ್ಲಿ ಅವರ ವಿರುದ್ಧ ಅಗತ್ಯ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
PublicNext
18/12/2025 07:45 am
LOADING...