ಸಿದ್ದಾಪುರ : ತಾಲ್ಲೂಕಿನ ಹಲಗೇರಿಯ ಅಂಬೇಡ್ಕರ್ ಭವನದಲ್ಲಿ ಬುಧವಾರ ಕೋಡ್ಕಣಿ ಹೋಬಳಿ ಮಟ್ಟದ ಜನಸ್ಪಂದನ ಸಭೆ ಹಾಗೂ ಬಗರ್ ಹುಕುಂ ಹಕ್ಕುಪತ್ರ ವಿತರಣಾ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಶಾಸಕ ಭೀಮಣ್ಣ ನಾಯ್ಕ್ ಅವರು, ಜನರಿಗೆ ನ್ಯಾಯ ಕೊಡಿಸುವಲ್ಲಿ ಜನಪ್ರತಿನಿಧಿಗಳು ಸ್ಪಂದಿಸಬೇಕು ಎಂದು ಕರೆ ನೀಡಿದರು.
ಹಲಗೇರಿ, ವಾಜಗೋಡ, ಇಟಗಿ, ಕ್ಯಾದಗಿ, ದೊಡ್ಮನೆ, ಬಿಳಗಿ, ಸೋವಿನಕೊಪ್ಪ, ಮನಮನೆ, ಕೋರ್ಲಕೈ ಗ್ರಾಮ ಪಂಚಾಯ್ತಿ ವ್ಯಾಪ್ತಿಯ 300ಕ್ಕೂ ಅಧಿಕ ಸಾರ್ವಜನಿಕರು ಸಭೆಗೆ ಆಗಮಿಸಿ, ಕ್ಷೇತ್ರದ ಶಾಸಕರ ಮುಂದೆ ತಮ್ಮ ಅಹವಾಲುಗಳನ್ನು ತೋಡಿಕೊಂಡರು. ರಸ್ತೆಗಳ ದುರಸ್ತಿ, ಕುಡಿಯುವ ನೀರಿನ ಸೌಲಭ್ಯ, ವಸತಿ ಮತ್ತು ಸಮುದಾಯ ಭವನಗಳ ನಿರ್ಮಾಣ ಸೇರಿದಂತೆ ಹತ್ತಾರು ಸಮಸ್ಯೆಗಳಿಗೆ ಪರಿಹಾರ ಕೋರಿ ಅರ್ಜಿಗಳನ್ನು ಸಲ್ಲಿಸಿದರು.
ಶಾಸಕ ಭೀಮಣ್ಣ ನಾಯ್ಕ್ ಮಾತನಾಡಿ, ಜನಸ್ಪಂದನ ಸಭೆಗಳು ಕೇವಲ ಕಾಟಾಚಾರಕ್ಕೆ ಸೀಮಿತವಾಗಬಾರದು. ಸರ್ಕಾರದ ಸೌಲಭ್ಯಗಳು ಸರಿಯಾಗಿ ಸಿಗದೆ ಇರುವವರ ಸಮಸ್ಯೆಗಳನ್ನು ಸಭೆಯಲ್ಲಿ ಆಲಿಸಿ, ಸೂಕ್ತ ಪರಿಹಾರ ಒದಗಿಸುವುದು ನಮ್ಮ ಆದ್ಯತೆ. ಸಾರ್ವಜನಿಕರು ತಮ್ಮ ಕುಂದುಕೊರತೆಗಳನ್ನು ಲಿಖಿತವಾಗಿ ನೀಡಬೇಕು ಎಂದು ತಿಳಿಸಿದರು.
ಕಳೆದ ಎರಡುವರೆ ವರ್ಷಗಳಿಂದ ಜನರ ಜತೆಗೆ ಇರುವ ನಾನು ಮುಂದಿನ ದಿನಗಳಲ್ಲೂ ಸಾರ್ವಜನಿಕರ ಮಧ್ಯೆಯೇ ಇರುತ್ತೇನೆ. ಹಿಂದೆ ಆಡಳಿತ ನಡೆಸಿದವರು ಜನರ ನೋವಿಗೆ ಸರಿಯಾಗಿ ಸ್ಪಂದಿಸಿದ್ದರೆ, ಇಷ್ಟೊಂದು ಅರ್ಜಿ ಆಲಿಸುವ ಪ್ರಮೇಯವೇ ಬರುತ್ತಿರಲಿಲ್ಲ ಎಂದು ಹಿಂದಿನ ಆಡಳಿತವನ್ನು ಟೀಕಿಸಿದರು.
ಇದೇ ವೇಳೆ, ಶಾಸಕರು ಬಗರ್ ಹುಕುಂ ಫಲಾನುಭವಿಗಳಿಗೆ ಹಕ್ಕುಪತ್ರಗಳನ್ನು ವಿತರಿಸಿದರು. ಜತೆಗೆ ಕಾರ್ಮಿಕ ಇಲಾಖೆಯ ವತಿಯಿಂದ ಕಾರ್ಮಿಕರಿಗೆ ಅಗತ್ಯ ಕಿಟ್ಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ.ಜಿ. ನಾಗರಾಜ, ಬಗರ್ ಹುಕುಂ ಸಮಿತಿ ಸದಸ್ಯರಾದ ಎಸ್.ಕೆ. ಭಾಗವತ್, ಗಾಯತ್ರಿ ನೇತ್ರೇಕರ್, ಫಕೀರಪ್ಪ ವಾಲ್ಮೀಕಿ, ತಾಲ್ಲೂಕು ದಂಡಾಧಿಕಾರಿ ಎಂ.ಆರ್. ಕುಲಕರ್ಣಿ, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ದೇವರಾಜ ಹಿತ್ತಲಕೊಪ್ಪ, ಸಿಪಿಐ ಜೆ.ಬಿ. ಸೀತಾರಾಮ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
Kshetra Samachara
21/01/2026 08:09 pm