ಸಿದ್ದಾಪುರ : ಕಾಡಾನೆ ದಾಳಿಗೆ ಕಾರ್ಮಿಕನೋರ್ವ ಮೃತಪಟ್ಟಿರುವ ದುರ್ಘಟನೆ ಸಂಭವಿಸಿದೆ.
ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸಮೀಪದ ಮಾಲ್ದಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಂಡಿ ಗ್ರಾಮದ ನಿವಾಸಿ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯೆ ನಬೀಸ ಅವರ ಪತಿ ಲತೀಫ್ (68) ಮೃತ ವ್ಯಕ್ತಿಯಾಗಿದ್ದಾರೆ.
ಇಲ್ಲಿಗೆ ಸಮೀಪದ ಪುಲಿಯೇರಿ ಗ್ರಾಮದ ಗೌರಿಬೆಟ್ಟ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಲತೀಫ್ ಅವರ ಮೇಲೆ ಒಂಟಿ ಸಲಗ ದಾಳಿ ನಡೆಸಿದೆ. ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ತಕ್ಷಣ ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
ಸಿದ್ದಾಪುರ ಸುತ್ತಮುತ್ತಲಿನಲ್ಲಿ ಕಳೆದ ಹಲವು ದಿನಗಳಿಂದ ಕಾಡಾನೆಗಳು ಬೀಡು ಬಿಟ್ಟಿದ್ದು, ಸಾರ್ವಜನಿಕರಿಗೆ ತೀವ್ರ ಆತಂಕ ಉಂಟಾಗಿದೆ. ಕೆಲ ದಿನಗಳ ಹಿಂದೆ ಶಾಲಾ ವಾಹನದ ಮೇಲೆ ಒಂಟಿ ಸಲಗ ದಾಳಿ ಮಾಡಲು ಯತ್ನಿಸಿದ್ದ ಘಟನೆ ಕೂಡ ನಡೆದಿತ್ತು. ಇದೇ ಒಂಟಿ ಸಲಗ ಇದೀಗ ಕಾರ್ಮಿಕನ ಜೀವ ಬಲಿ ಪಡೆದಿದೆ ಎಂದು ಆರೋಪಿಸಿದ ಸ್ಥಳೀಯರು, ಅರಣ್ಯ ಇಲಾಖೆಯ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಒಂಟಿ ಸಲಗವನ್ನು ಕೂಡಲೇ ಸೆರೆಹಿಡಿಯಬೇಕು ಎಂದು ಅವರು ಒತ್ತಾಯಿಸಿದರು.
ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರದ ಶವಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು.
ಅರಣ್ಯ ಇಲಾಖೆಯ ಅಧಿಕಾರಿಗಳಾದ ಶಿವರಾಂ, ಗಂಗಾಧರ್, ಸಂಜಯ್, ಸರ್ಕಲ್ ಇನ್ಸ್ಪೆಕ್ಟರ್ ರಾಜು ಹಾಗೂ ಸಿದ್ದಾಪುರ ಠಾಣಾಧಿಕಾರಿ ಮಂಜುನಾಥ್ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
PublicNext
29/01/2026 08:54 pm
LOADING...