ನಂಜನಗೂಡು: ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆ ಮತ್ತು ವರುಣಾ ವಿಧಾನಸಭಾ ಕ್ಷೇತ್ರದಲ್ಲಿಯೇ ಸಾರ್ವಜನಿಕ ಶಿಕ್ಷಣ ಉಳಿಸಲು ಕೆಪಿಎಸ್ ಮ್ಯಾಗ್ನೆಟ್ ವಿರೋಧಿಸಿ ಎಐಡಿಎಸ್ಒ ಬೃಹತ್ ಪ್ರತಿಭಟನಾ ಸಮಾವೇಶ ನಡೆಸಿದೆ.
ನಂಜನಗೂಡು ನಗರದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ಎಐಡಿಎಸ್ಒ ವತಿಯಿಂದ ತಾಲ್ಲೂಕಿನ ಗ್ರಾಮಗಳ ಸರ್ಕಾರಿ ಶಾಲಾ ಮಕ್ಕಳು ಮತ್ತು ಪೋಷಕರ ನೇತೃತ್ವದಲ್ಲಿ ನಂಜನಗೂಡು ತಾಲ್ಲೂಕು ಮಟ್ಟದ ಪ್ರತಿಭಟನಾ ಸಮಾವೇಶದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಸಾರ್ವಜನಿಕ ಶಿಕ್ಷಣ ಉಳಿಸಬೇಕು. 40 ಸಾವಿರ ಸರ್ಕಾರಿ ಶಾಲೆಗಳನ್ನು ಕೊಲ್ಲುವ ಹುನ್ನಾರ ನಡೆಸಲಾಗುತ್ತಿದೆ. ಸರ್ಕಾರಿ ಶಾಲೆಗಳನ್ನು ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ಮುಚ್ಚಲು ಮುಂದಾಗಿದೆ. ಕೆಪಿಎಸ್ ಮ್ಯಾಗ್ನೆಟ್ ಯೋಜನೆಯನ್ನು ರದ್ದುಗೊಳಿಸಬೇಕು. ಶಾಲೆಗಳನ್ನು ಖಾಸಗೀಕರಣ ಮಾಡಲು ಹೊರಟಿರುವ ಸರ್ಕಾರಗಳ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದರು.
ಸರ್ಕಾರಿ ಶಾಲೆಗಳನ್ನು ಬಿಡುವುದಿಲ್ಲ, ಸಾರ್ವಜನಿಕ ಶಿಕ್ಷಣವನ್ನು ಉಳಿಸುತ್ತೇವೆ ಎಂದು ಕರೆ ನೀಡಿದರು. ವರುಣಾ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಹದಿನಾರು ಗ್ರಾಮದಲ್ಲಿ ಕೆಪಿಎಸ್ ಮ್ಯಾಗ್ನೆಟ್ ಶಾಲೆ ತೆರೆದು ಹದಿನಾರು ಮೊಳೆ, ಮೂಡಹಳ್ಳಿ, ಮಲ್ಲರಾಜನಹುಂಡಿ, ಮಾದಯ್ಯನಹುಂಡಿ, ಆಲತ್ತೂರು ಗ್ರಾಮಗಳ ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸಲಾಗುತ್ತಿದೆ.
ಹೊರಳವಾಡಿ ಗ್ರಾಮದಲ್ಲಿ ಕೆಪಿಎಸ್ ಮ್ಯಾಗ್ನೆಟ್ ಶಾಲೆ ತೆರೆದು, ಇಮ್ಮಾವು, ಉಪ್ಪಲಿಗರ ಹುಂಡಿ, ಹುಳಿಮಾವು, ತೊರೆಮಾವು, ಬೊಕ್ಕಹಳ್ಳಿ, ಕೆಂಪಿ ಸಿದ್ದನ ಹುಂಡಿ ಗ್ರಾಮಗಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳ ಉಪಾಧ್ಯಾಯರು ಮತ್ತು ಪರಿಕರಗಳ ಸಮೇತ ವಿಲೀನಗೊಳಿಸುತ್ತಿರುವುನ್ನು ಖಂಡಿಸಿ ಎಲ್ಲಾ ಗ್ರಾಮಗಳ ಸರ್ಕಾರಿ ಶಾಲಾ ಮಕ್ಕಳು ಮತ್ತು ಪೋಷಕರು ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಪ್ರತಿಭಟನಾ ಸಮಾವೇಶದಲ್ಲಿ ಎಐಡಿಎಸ್ಒ ರಾಜ್ಯ ಉಪಾಧ್ಯಕ್ಷರಾದ ಸಿಎಂ ಅಪೂರ್ವ, ಉಮಾದೇವಿ, ಸ್ವಾತಿ, ರಾಜ್ಯ ಖಜಾಂಚಿ ಸುಭಾಷ್ ಬೆಟ್ಟದ ಕೊಪ್ಪ, ಜಿಲ್ಲಾ ಕಾರ್ಯದರ್ಶಿ ನಿತಿನ್, ಚಂದ್ರಶೇಖರ ಮೇಟಿ, ರೈತ ಸಂಘದ ಪ್ರಧಾನ ಕಾರ್ಯದರ್ಶಿ ಹೆಜ್ಜಿಗೆ ಪ್ರಕಾಶ್, ಬಸವರಾಜು, ಉಗ್ರ ನರಸಿಂಹಗೌಡ, ದಸಂಸ ಸಂಚಾಲಕ ಮೂಡಹಳ್ಳಿ ಪ್ರಸಾದ್ ಸೇರಿದಂತೆ ಹಲವರು ಭಾಗವಹಿಸಿದ್ದರು.
PublicNext
01/02/2026 07:38 pm