ನಂಜನಗೂಡು: ಮಾಘ ಹುಣ್ಣಿಮೆ ಹಿನ್ನೆಲೆಯಲ್ಲಿ ಇತಿಹಾಸ ಪ್ರಸಿದ್ಧ ದಕ್ಷಿಣ ಕಾಶಿ ನಂಜನಗೂಡು ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯಕ್ಕೆ ಲಕ್ಷಾಂತರ ಭಕ್ತರು ಆಗಮಿಸಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಬೆಳಿಗ್ಗೆ 4 ಗಂಟೆಗೆ ಭಕ್ತರು ಕಪಿಲಾ ನದಿಯಲ್ಲಿ ತೀರ್ಥ ಸ್ನಾನ ಮಾಡಿ, ದೇವರ ದರ್ಶನಕ್ಕಾಗಿ ಸರತಿ ಸಾಲಿನಲ್ಲಿ ನಿಂತಿದ್ದರು. ದೇವಾಲಯದ ಹೊರಗೆ ದೇವರಿಗೆ ಧೂಪ, ದೀಪದ ಸೇವೆ, ತುಲಾಭಾರ, ಉರುಳು ಸೇವೆಗಳನ್ನು ಸಲ್ಲಿಸುವ ಮೂಲಕ ಭಕ್ತರು ಹರಕೆ ಸಲ್ಲಿಸಿದರು. ದೇವಾಲಯದಲ್ಲಿ ಶ್ರೀ ನಂಜುಂಡೇಶ್ವರ ಸ್ವಾಮಿಗೆ ವಿವಿಧ ಪುಷ್ಪಗಳಿಂದ ಅಲಂಕರಿಸಲಾಗಿತ್ತು.
ಪಂಚತೀರ್ಥಗಳ ಅಭಿಷೇಕ, ಬಿಲ್ವಾರ್ಚನೆ, ಪಂಚಾಮೃತ ಅಭಿಷೇಕ, ಕ್ಷೀರಾಭಿಷೇಕ, ಶಾಲ್ಯಾನ್ನ ಅರ್ಪಣೆ ನೆರವೇರಿಸಲಾಯಿತು. ಮಹಾಮಂಗಳಾರತಿ ನಂತರ ಭಕ್ತರಿಗೆ ದರ್ಶನಕ್ಕೆ ಅನುವು ಮಾಡಿಕೊಡಲಾಯಿತು. ದಾಸೋಹ ಭವನದಲ್ಲಿ ದೇವಾಲಯಕ್ಕೆ ಆಗಮಿಸಿದ್ದ ಭಕ್ತರಿಗೆ ವಿಶೇಷ ಸಿಹಿ ಭೋಜನದ ವ್ಯವಸ್ಥೆ ಮಾಡಲಾಗಿತ್ತು. ದೇಶ ಮತ್ತು ವಿದೇಶಗಳಿಂದಲೂ ಭಕ್ತರು ಆಗಮಿಸಿದ್ದರು. ಅಲ್ಲದೆ, ಹೊರರಾಜ್ಯ ಹಾಗೂ ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ, ನೂಕು ನುಗ್ಗಲಿನಲ್ಲಿಯೇ ದೇವರ ದರ್ಶನ ಪಡೆದರು.
ಭಕ್ತರನ್ನು ನಿಯಂತ್ರಿಸಲು ಅಧಿಕಾರಿಗಳು ಮತ್ತು ಪೊಲೀಸರು ಹರಸಾಹಸ ಪಡಬೇಕಾಯಿತು. ಟ್ರಾಫಿಕ್ ಜಾಮ್ ನಲ್ಲಿ ಭಕ್ತಾದಿಗಳು ಪರದಾಡಿದ್ದು, ಆಂಬ್ಯುಲೆನ್ಸ್ ಗೂ ಟ್ರಾಫಿಕ್ ಜಾಮ್ ಬಿಸಿ ತಟ್ಟಿದೆ. ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯದ ಬಳಿ ಪ್ರತಿ ತಿಂಗಳು ಮತ್ತು ಪ್ರತಿದಿನ ಚಾಮರಾಜನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಕಂಡುಬರುತ್ತಿದ್ದು, ಬಸ್ ನಿಲ್ದಾಣವಿಲ್ಲದಿರುವುದೇ ಇದಕ್ಕೆ ಪ್ರಮುಖ ಕಾರಣವಾಗಿದೆ. ಇದರಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿಯೇ ಬಸ್ ನಿಲುಗಡೆಯಾಗುತ್ತಿರುವುದರಿಂದ ಟ್ರಾಫಿಕ್ ಜಾಮ್ ಕಂಡುಬರುತ್ತಿದೆ.
ಮಾಘ ಪೂರ್ಣಿಮೆ ಹಿನ್ನೆಲೆಯಲ್ಲಿ ನಂಜನಗೂಡಿನ ರೈಲ್ವೆ ನಿಲ್ದಾಣ, ಅಂಬೇಡ್ಕರ್ ಖಾಸಗಿ ಬಸ್ ನಿಲ್ದಾಣ, ಹಳೇ ಮತ್ತು ಹೈಟೆಕ್ ಕೆಎಸ್ಆರ್ ಟಿಸಿ ಬಸ್ ನಿಲ್ದಾಣಗಳಲ್ಲಿ ಹೆಚ್ಚು ಜನಸಂದಣಿ ಕಂಡು ಬಂತು. ಮುನ್ನೆಚ್ಚರಿಕೆ ಕ್ರಮವಾಗಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿತ್ತು.
PublicNext
01/02/2026 10:17 pm