ಶಿವಮೊಗ್ಗ: ಕಳೆದ ಎರಡೂವರೆ ವರ್ಷಗಳಿಂದ ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ವಿರುದ್ಧ ನಿರಂತರವಾಗಿ ಅಪಪ್ರಚಾರ ನಡೆಸುತ್ತಲೇ ಬಂದಿದೆ. ರಾಜ್ಯದ ವೈಫಲ್ಯಗಳನ್ನು ಮುಚ್ಚಿಹಾಕಲು ಕೇಂದ್ರದ ವಿರುದ್ಧ ಬೊಟ್ಟು ಮಾಡುವುದೇ ಕಾಂಗ್ರೆಸ್ ಸರ್ಕಾರದ ನಿತ್ಯದ ಕೆಲಸವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದರು.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, 16ನೇ ಹಣಕಾಸು ಆಯೋಗದ ಮೂಲಕ ರಾಜ್ಯಗಳಿಗೆ ಜಿಡಿಪಿಗೆ ಅನುಗುಣವಾಗಿ ಹೆಚ್ಚಿನ ಅನುದಾನ ನೀಡಲು ಕೇಂದ್ರ ಸರ್ಕಾರ ನಿರ್ಧಾರ ಕೈಗೊಂಡಿದ್ದು, ಕರ್ನಾಟಕದ ಪಾಲು ಶೇಕಡಾ 3.65ರಿಂದ 4.13ಕ್ಕೆ ಹೆಚ್ಚಾಗಿದೆ. ಇದರಿಂದ ಪ್ರತಿವರ್ಷ 7,387 ಕೋಟಿ ರೂಪಾಯಿ ಹೆಚ್ಚುವರಿ ಅನುದಾನ ಸಿಗಲಿದ್ದು, ಮುಂದಿನ ವರ್ಷಕ್ಕೆ ಒಟ್ಟು 63,050 ಕೋಟಿ ರೂಪಾಯಿ ರಾಜ್ಯಕ್ಕೆ ಲಭ್ಯವಾಗಲಿದೆ. ಆದರೂ ಸಿದ್ದರಾಮಯ್ಯ ಅವರು ವಾಸ್ತವವನ್ನು ಮರೆಮಾಚಿ ಜನರನ್ನು ತಪ್ಪು ದಾರಿಯಲ್ಲಿ ನಡೆಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದರು.
ಸಿದ್ದರಾಮಯ್ಯ ಅವರು ವಿಭಜಕ ಮನಸ್ಥಿತಿಯಿಂದ ಹೊರಬರಬೇಕು. ವೀರಶೈವ–ಲಿಂಗಾಯಿತರನ್ನು ವಿಭಜಿಸಲು ಯತ್ನಿಸಿದ್ದ ಮನಸ್ಥಿತಿಯೇ ಈಗ ದೇಶದ ಒಕ್ಕೂಟ ವ್ಯವಸ್ಥೆಯ ಮೇಲೂ ದಾಳಿ ಮಾಡುವ ಮಟ್ಟಕ್ಕೆ ತಲುಪಿದೆ. ಒಕ್ಕೂಟ ವ್ಯವಸ್ಥೆಯನ್ನು ದುರ್ಬಲಗೊಳಿಸುವ ಮಾತುಗಳು ದೇಶದ ಏಕತೆಗೆ ಧಕ್ಕೆಯಾಗುತ್ತವೆ. ಇದು ರಾಜ್ಯಕ್ಕೂ ರಾಷ್ಟ್ರಕ್ಕೂ ಅಪಾಯಕಾರಿ ರಾಜಕಾರಣವಾಗಿದೆ ಎಂದರು.
PublicNext
02/02/2026 05:56 pm
LOADING...