ಬೆಂಗಳೂರು: ಹೊರ ವರ್ತುಲ ರಸ್ತೆಯ ಇಬ್ಲೂರು ಜಂಕ್ಷನ್ ಬಳಿ ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ನೀಲನಕ್ಷೆ ಸಿದ್ಧಪಡಿಸಲು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಹೊರ ವರ್ತುಲ ರಸ್ತೆಯ ಸಿಲ್ಕ್ ಬೋರ್ಡ್ ಜಂಕ್ಷನ್ ನಿಂದ ಕೆ.ಆರ್ ಪುರಂ ವರೆಗಿನ ರಸ್ತೆಯನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ. ಈ ಸಂಬಂಧ ಜಿಬಿಎ, ಬಿ-ಸ್ಮೈಲ್, ಮೆಟ್ರೋ, ಪೂರ್ವ ಹಾಗೂ ದಕ್ಷಿಣ ಪಾಲಿಕೆಗಳ ಅಧಿಕಾರಿಗಳೊಡನೆ ಇಂದು ಜಂಟಿಯಾಗಿ ತಪಾಸಣೆ ನಡೆಸಿದ ವೇಳೆ ಅವರು ಮಾತನಾಡಿದರು.
ಇಬ್ಲೂರು ಜಂಕ್ಷನ್ ಬಳಿ ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣ ಮಾಡಿದಲ್ಲಿ ಸಂಚಾರ ದಟ್ಟಣೆ ಕಡಿಮೆಯಾಗಲಿದೆ. ಈ ಹಿನ್ನೆಲೆಯಲ್ಲಿ ನೂತನ ತಂತ್ರಜ್ಞಾನ ಬಳಸಿಕೊಂಡು ಕಡಿಮೆ ಅವಧಿಯಲ್ಲಿ ಮೇಲ್ಸೇತುವೆ ನಿರ್ಮಿಸಲು ನೀಲನಕ್ಷೆ ಸಿದ್ಧಪಡಿಸಲು ಸೂಚಿಸಿದರು.
ಇಬ್ಲೂರು ಜಂಕ್ಷನ್ ಬಳಿ ಸುಮಾರು 800 ಮೀಟರ್ ಉದ್ದದ ಮೇಲ್ಸೇತುವೆ ನಿರ್ಮಾಣದ ಅಗತ್ಯವಿದ್ದು, ಯೋಜನೆಯ ಅಂದಾಜು ವೆಚ್ಚ, ಕಾಮಗಾರಿ ಪೂರ್ಣಗೊಳ್ಳಲು ಬೇಕಾಗುವ ಅವಧಿ ಹಾಗೂ ನಿರ್ಮಾಣ ಮಾದರಿ ಕುರಿತು ಸಮಗ್ರ ಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ದಕ್ಷಿಣ ನಗರ ಪಾಲಿಕೆ ಹಾಗೂ ಮೆಟ್ರೋ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ ಸಿಲ್ಕ್ ಬೋರ್ಡ್ ಜಂಕ್ಷನ್ನಲ್ಲಿ ಹೆಚ್.ಆರ್.ಪಿ.ಸಿ ಅಳವಡಿಸುವುದು, ಪ್ರವಾಹ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವುದು ಸೇರಿದಂತೆ ಸಮಗ್ರ ಅಭಿವೃದ್ಧಿಗೆ ಕ್ರಮವಹಿಸಬೇಕು. ಸದ್ಯ ಜಂಕ್ಷನ್ನಲ್ಲಿ ಮೆಟ್ರೋ ಪೈಲ್ ಕ್ಯಾಪ್ ಕಾಮಗಾರಿ ಪ್ರಗತಿಯಲ್ಲಿದ್ದು, ವಾಹನ ಸಂಚಾರಕ್ಕೆ ಯಾವುದೇ ಅಡಚಣೆ ಉಂಟಾಗದಂತೆ ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸಲು ಸೂಚಿಸಿದರು.
ಈ ಸಂದರ್ಭದಲ್ಲಿ ನಗರ ಪಾಲಿಕೆಗಳ ಆಯುಕ್ತರುಗಳಾದ ರಮೇಶ್ ಕೆ.ಎನ್., ರಮೇಶ್ ಡಿ.ಎಸ್., ಮೆಟ್ರೋ ವ್ಯವಸ್ಥಾಪಕ ನಿರ್ದೇಶಕರಾದ ರವಿಶಂಕರ್, ಅಭಿವೃದ್ಧಿ ಅಪರ ಆಯುಕ್ತರಾದ ಲೋಖಂಡೆ ಸ್ನೇಹಲ್ ಸುಧಾಕರ್, ಡಿ.ಸಿ.ಪಿ ಗೋಪಾಲ ಎಂ. ಬ್ಯಾಕೋಡ, ಸಾಹಿಲ್ ಬಾಗ್ಲಾ, ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ: ಬಿ.ಎಸ್ ಪ್ರಹ್ಲಾದ್, ಮುಖ್ಯ ಅಭಿಯಂತರರಾದ ಬಸವರಾಜ್ ಕಬಾಡೆ, ಮಾಲತಿ, ರವಿ, ಲೋಕೇಶ್, ಪೊಲೀಸ್, ಮೆಟ್ರೋ ಮತ್ತು ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
Kshetra Samachara
03/02/2026 10:08 pm