ಗದಗ: ತಮ್ಮ ಸಮಸ್ಯೆಗಳನ್ನು ಹೇಳಿಕೊಂಡು ಸರಕಾರಿ ಕಚೇರಿಗಳಿಗೆ ಬರುವ ಸಾರ್ವಜನಿಕರೇ ಪ್ರಭುಗಳಾಗಿದ್ದು ಅವರ ಸೇವೆಗೆ ಅವಕಾಶ ಕಲ್ಪಿಸಲು ಜನತಾ ದರ್ಶನ ಕಾರ್ಯಕ್ರಮವು ಸೂಕ್ತ ವೇದಿಕೆಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ತಿಳಿಸಿದರು.
ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕಚೇರಿಗಳಿಗೆ ಬರುವ ಸಾರ್ವಜನಿಕರು ಗ್ರಾಹಕರಲ್ಲ. ಅವರು ಪ್ರಭುಗಳಾಗಿದ್ದಾರೆ. ಜನಸೇವೆಯೇ ಜನಾರ್ಧನ ಸೇವೆಯಾಗಿದ್ದು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವುದು ಇಲಾಖೆಯ ಅಧಿಕಾರಿಗಳ ಆದ್ಯ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ವಿಶೇಷ ಆಸಕ್ತಿಯಿಂದ ಕಾರ್ಯ ನಿರ್ವಹಿಸಬೇಕೆಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರದಿಂದ ಎಲ್ಲ ಕಡೆಗೆ ಜನತಾದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಸಚಿವ ಸಂಪುಟದಲ್ಲಿ ಜಿಲ್ಲಾ ಮಟ್ಟದ ಜನತಾ ದರ್ಶನಕ್ಕೆ ವಿಶೇಷ ಮಹತ್ವವಿದೆ. ಯಾವ ಕಚೇರಿಯಲ್ಲಿ ಸಾರ್ವಜನಿಕರು ತಮ್ಮ ಸಮಸ್ಯೆಗಳಿಗೆ ಸ್ಪಂದನೆ ಪಡೆದಿರುವುದಿಲ್ಲವೋ ಅಂತಹವರು ಜನತಾ ದರ್ಶನ ಕಾರ್ಯಕ್ರಮದಲ್ಲಿ ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎಂದು ಸಚಿವರು
ತಿಳಿಸಿದರು.
ಸುರೇಶ ಎಸ್ ಲಮಾಣಿ ಪಬ್ಲಿಕ್ ನೆಕ್ಸ್ಟ್ ಗದಗ
PublicNext
27/02/2026 10:23 pm