ನೆಲಮಂಗಲ: ಅಂತರಾಷ್ಟ್ರೀಯ ಮಾದಕ ದ್ರವ್ಯಗಳ ಸೇವನೆ ಹಾಗೂ ಅಕ್ರಮ ಕಳ್ಳಸಾಗಾಣಿಕೆ ವಿರೋಧಿ ದಿನಾಚರಣೆಯ ಅಂಗವಾಗಿ ನೆಲಮಂಗಲ ನಗರದಲ್ಲಿ ಜಾಗೃತಿ ಮೆರವಣಿಗೆ ಹಾಗೂ ಮ್ಯಾರಥಾನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ನೆಲಮಂಗಲ ಅಂಬೇಡ್ಕರ್ ಕ್ರೀಡಾಂಗಣದಿಂದ ವಾಕಥಾನ್ ಮತ್ತು ಮ್ಯಾರಥಾನ್ಗೆ ಚಾಲನೆ ನೀಡಲಾಯಿತು. ನೆಲಮಂಗಲ ಉಪವಿಭಾಗದ ಡಿವೈಎಸ್ಪಿ ಜಗದೀಶ್, ಜಾಗೃತಿ ಅಭಿಯಾನಕ್ಕೆ ವಿಶೇಷ ಒತ್ತು ನೀಡಿದ್ದು ನೆಲಮಂಗಲ ಉಪವಿಭಾಗದ ಪೊಲೀಸರು,ಸಿದ್ಧಾರ್ಥ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳು, ಇತರೆ ಸಂಘ ಸಂಸ್ಥೆಗಳು ಜಾಥಾದಲ್ಲಿ ಭಾಗವಹಿಸಿದರು.
ಯುವ ಪೀಳಿಗೆಗೆ ಮಾದಕ ವ್ಯಸನದ ದುಷ್ಪರಿಣಾಮಗಳ ಬಗ್ಗೆ ಜಾಥಾ ಮೂಲಕ ಅರಿವು ಮೂಡಿಸಲಾಯಿತು. “ಮಾದಕ ದ್ರವ್ಯಗಳಿಂದ ದೂರವಿರಿ”, “ಆರೋಗ್ಯಯುತ ಸಮಾಜ ನಿರ್ಮಿಸೋಣ” ಎಂಬ ಘೋಷಣೆಗಳನ್ನು ಕೂಗಿ ವಿದ್ಯಾರ್ಥಿಗಳು ಜಾಗೃತಿ ಸಂದೇಶ ಸಾರಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು,ಮಾದಕ ವ್ಯಸನ ಯುವ ಜನರ ಭವಿಷ್ಯಕ್ಕೆ ದೊಡ್ಡ ಅಪಾಯವಾಗಿದ್ದು, ಸಮಾಜದ ಪ್ರತಿಯೊಬ್ಬರೂ ಮಾದಕ ದ್ರವ್ಯಗಳ ವಿರುದ್ಧ ಹೋರಾಟದಲ್ಲಿ ಕೈಜೋಡಿಸಬೇಕೆಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಜೊತೆಗೆ ನೆಲಮಂಗಲ ಉಪವಿಭಾಗದ ಪೊಲೀಸರು ಸಕ್ರಿಯವಾಗಿ ಭಾಗವಹಿಸಿ ಜಾಗೃತಿ ಮೂಡಿಸಿದರು.
PublicNext
01/03/2026 05:56 pm
LOADING...