ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿತ್ರದುರ್ಗದಲ್ಲಿ ಕುಡಿಯುವ ನೀರಿಗೆ ಹಾಹಾಕಾರ: 15 ದಿನಕ್ಕೊಮ್ಮೆ ನೀರು, ಡಿಸಿ ಕೆಂಡಾಮಂಡಲ!

ಚಿತ್ರದುರ್ಗ: ನಗರದಲ್ಲಿ ಕೇವಲ 15 ದಿನಗಳಿಗೊಮ್ಮೆ ಕುಡಿಯುವ ನೀರು ಸರಬರಾಜು ಮಾಡುತ್ತಿರುವುದಕ್ಕೆ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರು ನಗರಸಭೆ ಅಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಗರಸಭೆ ಮತ್ತು ಬೆಸ್ಕಾಂ ಅಧಿಕಾರಿಗಳ ಜಂಟಿ ಸಭೆ ನಡೆಸಿ ಅವರು ಈ ಕುರಿತು ಮಾತನಾಡಿದರು.

ನಗರಕ್ಕೆ ಕುಡಿಯುವ ನೀರು ಪೂರೈಕೆಯಾಗುವ ಮೂಲಗಳಲ್ಲಿ ಯಾವುದೇ ತೊಂದರೆ ಇಲ್ಲ. ಸಾಕಷ್ಟು ಪ್ರಮಾಣದ ನೀರು ಲಭ್ಯವಿದೆ. ಆದರೂ ನಗರಕ್ಕೆ ಸಮರ್ಪಕವಾಗಿ ನೀರು ಪೂರೈಕೆಯಾಗದಿರುವುದಕ್ಕೆ ತಾಂತ್ರಿಕ ಕಾರಣಗಳಿಗಿಂತಲೂ ಅಧಿಕಾರಿಗಳ ಬೇಜವಾಬ್ದಾರಿಯೇ ಮುಖ್ಯ ಕಾರಣವಾಗಿದೆ ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಕಿಡಿಕಾರಿದರು.

ನಗರಸಭೆ ಅಧಿಕಾರಿಗಳು ಪದೇ ಪದೇ ವಿದ್ಯುತ್ ವ್ಯತ್ಯಯದಿಂದಾಗಿ ವಿ.ವಿ. ಸಾಗರದಿಂದ ನೀರು ಎತ್ತಲು ಸಾಧ್ಯವಾಗುತ್ತಿಲ್ಲ ಎಂದು ನೆಪ ಹೇಳುತ್ತಿದ್ದಾರೆ. ಆದರೆ ತಿಂಗಳಿನಲ್ಲಿ ಕೆಲ ದಿನಗಳು ಮಾತ್ರ ದಿನಕ್ಕೆ ಅರ್ಧ ಗಂಟೆ ಅಥವಾ ಒಂದು ಗಂಟೆಯಷ್ಟೇ ವಿದ್ಯುತ್ ವ್ಯತ್ಯಯವಾಗಿದೆ. ಇದು ನಗರದಲ್ಲಿ 15 ದಿನಗಳ ಕಾಲ ನೀರು ಸರಬರಾಜು ಮಾಡದೇ ಇರಲು ಕಾರಣವಾಗಲು ಸಾಧ್ಯವಿಲ್ಲ ಎಂದು ಜಿಲ್ಲಾಧಿಕಾರಿಗಳು ಸ್ಪಷ್ಟಪಡಿಸಿದರು. ಅಲ್ಲದೆ, ನಗರಸಭೆಯಲ್ಲಿ ಅಧಿಕಾರಿಗಳು ಯಾರು ಹಣ ನೀಡುತ್ತಾರೋ ಅವರಿಗೆ ಮಾತ್ರ ಸರಿಯಾಗಿ ನೀರು ಬಿಡುತ್ತಾರೆ ಎಂಬ ದೂರುಗಳು ಕೇಳಿಬರುತ್ತಿವೆ. ಇಂತಹ ತಾರತಮ್ಯ ಎಸಗುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಟಿ. ವೆಂಕಟೇಶ್ ಎಚ್ಚರಿಸಿದರು.

ರೈಸಿಂಗ್ ಮೇನ್ ಪೈಪ್‌ಲೈನ್‌ಗಳಿಗೆ ಅಕ್ರಮವಾಗಿ ಕನೆಕ್ಷನ್ ಪಡೆದಿರುವುದು ಮತ್ತು ರೈತರು ನೇರವಾಗಿ ಮೋಟಾರ್ ಹಚ್ಚಿ ನೀರು ಪಡೆಯುತ್ತಿರುವುದು ನಗರಕ್ಕೆ ನೀರು ತಲುಪಲು ಅಡ್ಡಿಯಾಗುತ್ತಿದೆ ಎಂಬ ವಿಷಯ ಸಭೆಯಲ್ಲಿ ಚರ್ಚೆಗೆ ಬಂತು. ಅಕ್ರಮ ಕನೆಕ್ಷನ್‌ಗಳನ್ನು ಕಡಿತಗೊಳಿಸಲು ಪೊಲೀಸ್ ಬಂದೋಬಸ್ತ್‌ನೊಂದಿಗೆ ತಹಶೀಲ್ದಾರ್ ಹಾಗೂ ನಗರಸಭೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಬೇಕು. ರಾತ್ರಿ ವೇಳೆ ಕಳ್ಳತನದಿಂದ ನೀರು ಪಡೆಯುವವರ ಮೇಲೆ ನಿಗಾ ಇಡಬೇಕು ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಸೂಚಿಸಿದರು.

ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾದಾಗ ಅದನ್ನು ಸರಿಪಡಿಸಲು ನಿರಂತರವಾಗಿ ಕೆಲಸ ಮಾಡಬೇಕು. ವಿದ್ಯುತ್ ಸಮಸ್ಯೆಯಿಂದ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾದರೆ, ಇನ್ನು ಮುಂದೆ ತಕ್ಷಣವೇ ವಿದ್ಯುತ್ ಸಂಪರ್ಕವನ್ನು ಪುನಃಸ್ಥಾಪಿಸಿ ನೀರು ಸರಬರಾಜು ಮಾಡಬೇಕು. ದಿನನಿತ್ಯ ನೂರಾರು ಜನ ಸಾರ್ವಜನಿಕರು ಕಚೇರಿಗೆ ಬಂದು ಕುಡಿಯುವ ನೀರಿನ ಸಮಸ್ಯೆಗಳನ್ನು ಹೇಳಿಕೊಳ್ಳುತ್ತಿದ್ದಾರೆ. ಸಾರ್ವಜನಿಕರಿಗೆ ಸಮರ್ಪಕವಾಗಿ ಉತ್ತರಿಸಲಾಗುತ್ತಿಲ್ಲ. ಅಧಿಕಾರಿಗಳ ಬೇಜವಾಬ್ದಾರಿಯನ್ನು ಸಹಿಸುವುದಿಲ್ಲ ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ನಗರಸಭೆ ಅಧಿಕಾರಿಗಳಿಗೆ ಕಠಿಣ ಎಚ್ಚರಿಕೆ ನೀಡಿದರು.

ಸಭೆಯಲ್ಲಿ ಬಿ.ಟಿ. ಕುಮಾರಸ್ವಾಮಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್, ನಗರಸಭೆ ಆಯುಕ್ತ ಲಕ್ಷ್ಮೀ, ಕುಡಿಯುವ ನೀರು ಪೂರೈಕೆ ಸಂಬಂಧಿಸಿದ ಎಇಇ ರಾಜು ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

16/03/2026 07:31 pm

Cinque Terre

1.32 K

Cinque Terre

0

ಸಂಬಂಧಿತ ಸುದ್ದಿ