ತುಮಕೂರು: ನಗರದ ಸ್ಟಾರ್ ಕನ್ವೆನ್ಷನ್ ಹಾಲ್ನಲ್ಲಿ ಸಮಾಜಮುಖಿ ಫೌಂಡೇಶನ್ ವತಿಯಿಂದ ಸೌಹಾರ್ದ ಇಫ್ತಾರ್ ಕೂಟವನ್ನು ಆಯೋಜಿಸಲಾಯಿತು.
ಫೌಂಡೇಶನ್ ಅಧ್ಯಕ್ಷ ಎಸ್.ಎಂ. ಇರ್ಫಾನ್ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ವಿವಿಧ ಸಮುದಾಯದ ನಾಯಕರು ಭಾಗವಹಿಸಿ ಏಕತೆ ಹಾಗೂ ಆರೋಗ್ಯಕರ ಜೀವನದ ಮಹತ್ವವನ್ನು ಒತ್ತಿಹೇಳಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕಿದ್ವಾಯಿ ಆಸ್ಪತ್ರೆಯ ಓರಲ್ ಕ್ಯಾನ್ಸರ್ ತಜ್ಞರಾದ ಡಾ. ನದಿಮುಲ್ ಹೋದ ಅವರು ಮಾತನಾಡಿ, ತಂಬಾಕು ಸೇವನೆಯಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳ ಬಗ್ಗೆ ಜನರಿಗೆ ಜಾಗೃತಿ ಮೂಡಿಸಿದರು. ತಂಬಾಕು ಸೇವನೆ ಮಾನವನ ಆರೋಗ್ಯಕ್ಕೆ ಬಹಳ ಅಪಾಯಕಾರಿ ಆಗಿದ್ದು, ವಿಶೇಷವಾಗಿ ಬಾಯಿ ಕ್ಯಾನ್ಸರ್ ಸೇರಿದಂತೆ ಅನೇಕ ಗಂಭೀರ ರೋಗಗಳಿಗೆ ಕಾರಣವಾಗುತ್ತದೆ ಎಂದು ಅವರು ಹೇಳಿದರು. ಯುವಕರು ಮತ್ತು ಸಾರ್ವಜನಿಕರು ತಂಬಾಕು ಸೇವನೆಯಂತಹ ದುಷ್ಪ್ರವೃತ್ತಿಯಿಂದ ದೂರವಿದ್ದು ಆರೋಗ್ಯಕರ ಜೀವನಶೈಲಿಯನ್ನು ಅನುಸರಿಸಬೇಕು ಎಂದು ಅವರು ಸಲಹೆ ನೀಡಿದರು.
ಸಮಾಜಮುಖಿ ಫೌಂಡೇಶನ್ ಅಧ್ಯಕ್ಷ ಎಸ್.ಎಂ. ಇರ್ಫಾನ್ ಮಾತನಾಡಿ, ಸಮಾಜಮುಖಿ ಫೌಂಡೇಶನ್ನ ಉದ್ದೇಶ ಸಮಾಜದಲ್ಲಿ, ವಿಶೇಷವಾಗಿ ಯುವಕರಲ್ಲಿ ಜಾಗೃತಿ ಮೂಡಿಸುವುದಾಗಿದೆ ಎಂದು ಹೇಳಿದರು. ಶಿಕ್ಷಣ, ಉದ್ಯೋಗಾವಕಾಶಗಳು ಹಾಗೂ ಸಮಾಜದಲ್ಲಿ ಸಕಾರಾತ್ಮಕ ಚಿಂತನೆಗಳನ್ನು ಬೆಳೆಸುವ ಕೆಲಸವನ್ನು ಫೌಂಡೇಶನ್ ಮುಂದುವರಿಸುತ್ತಿದ್ದು, ಇಂತಹ ಕಾರ್ಯಕ್ರಮಗಳ ಮೂಲಕ ಸಮಾಜದಲ್ಲಿ ಉತ್ತಮ ಸಂದೇಶ ನೀಡಲು ಪ್ರಯತ್ನಿಸುತ್ತಿದ್ದೇವೆ ಎಂದು ತಿಳಿಸಿದರು.
ಈ ವೇಳೆ ತುಮಕೂರಿನ ಕಾಂಗ್ರೆಸ್ ಮುಖಂಡ ಇಕ್ಬಾಲ್ ಅಹಮದ್ ಮಾತನಾಡಿ, ರಂಜಾನ್ ಉಪವಾಸವು ದೇಹ ಹಾಗೂ ಮನಸ್ಸನ್ನು ಶುದ್ಧಗೊಳಿಸುವುದರ ಜೊತೆಗೆ ಆರೋಗ್ಯಕ್ಕೂ ಸಹಾಯಕವಾಗುತ್ತದೆ ಎಂದು ಹೇಳಿದರು. ರಂಜಾನ್ ತಿಂಗಳಲ್ಲಿ ಮಾತ್ರವಲ್ಲದೆ ನಂತರವೂ ಆರೋಗ್ಯಕರ ಜೀವನಶೈಲಿಯನ್ನು ಅನುಸರಿಸುವುದು ಮುಖ್ಯವಾಗಿದೆ. ವಿಶೇಷವಾಗಿ ಯುವಕರು ದೇಶದ ಅಭಿವೃದ್ಧಿ ಹಾಗೂ ಸಮಾಜದ ಏಕತೆಗೆ ಕೈಜೋಡಿಸಬೇಕು ಎಂದು ಅವರು ಕರೆ ನೀಡಿದರು. ಈ ಸಂದರ್ಭದಲ್ಲಿ ಐದು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ಚಂದ್ರಶೇಖರ್ ಗೌಡ, ಕೆ.ಎಸ್.ಆರ್.ಪಿ ಕಮಾಂಡೆಂಟ್ ಎಸ್ಪಿ ಹಂಝ ಹುಸೇನ್, ಮೌಲಾನಾ ಉಸ್ಮಾನ್,
ಕಾರ್ಯಕ್ರಮದಲ್ಲಿ ವಿವಿಧ ಸಮುದಾಯದ ಮುಖಂಡರು, ಗಣ್ಯರು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು. ನಂತರ ಎಲ್ಲರೂ ಸೇರಿ ಇಫ್ತಾರ್ ಸೇವಿಸಿ ಪರಸ್ಪರ ಸೌಹಾರ್ದತೆಯ ಸಂದೇಶ ಹಂಚಿಕೊಂಡರು.
Kshetra Samachara
17/03/2026 11:32 am