ಮಡಿಕೇರಿ : ಪ್ರವೇಶ ಪತ್ರ ಇಲ್ಲ ಎನ್ನುವ ಕಾರಣದಿಂದ ಬೆಟ್ಟಗೇರಿಯ ಇಬ್ಬರು ವಿದ್ಯಾರ್ಥಿಗಳಿಗೆ ಎಸ್ಎಸ್ಎಲ್ಸಿ ಪರೀಕ್ಷೆಗೆ ಅವಕಾಶವನ್ನು ನಿರಾಕರಿಸಿರುವ ಅಧಿಕಾರಿಗಳ ಕ್ರಮವನ್ನು ವಿರೋಧಿಸಿರುವ ಗ್ರಾಮಸ್ಥರು ಮತ್ತು ಮಕ್ಕಳ ಪೋಷಕರು, ಮಾ.23ರಂದು ನಡೆಯುವ ಎರಡನೇ ಪರೀಕ್ಷೆ ಬರೆಯಲು ಈ ಮಕ್ಕಳಿಗೆ ಅವಕಾಶ ನೀಡಬೇಕು, ಇಲ್ಲವಾದಲ್ಲಿ ಧರಣಿ ಮುಷ್ಕರ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಸುದ್ದಿ ಗೋಷ್ಠಿಯಲ್ಲಿ ಬೆಟ್ಟಗೇರಿ ಗ್ರಾಮಸ್ಥರಾದ ಹೊಸೂರು ಗಿರೀಶ್ ಮಾತನಾಡಿ, ಬೆಟ್ಟಗೇರಿ ಪ್ರೌಢಶಾಲೆಯಲ್ಲಿ 15 ವಿದ್ಯಾರ್ಥಿಗಳಿಗೆ ಎಸ್ಎಸ್ಎಲ್ಸಿ ಪರೀಕ್ಷೆಗೆ ಪ್ರವೇಶ ಪತ್ರ ಬಂದಿದ್ದರೂ, ಇಬ್ಬರು ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶ ಪತ್ರ ಬಂದಿಲ್ಲ. ಮಕ್ಕಳ ಭವಿಷ್ಯದ ಹಿತ ದೃಷ್ಟಿಯಿಂದ ಪರೀಕ್ಷೆಗೆ ಅವಕಾಶ ನೀಡಬೇಕಿದ್ದ ಅಧಿಕಾರಿಗಳು, ಅನುಮತಿ ನೀಡದಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಬೆಟ್ಟಗೇರಿ ಶಾಲೆಯ ಇಬ್ಬರು ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರ ದೊರಕದಿರುವುದಕ್ಕೆ ಕಾರಣರಾದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ ಅವರು, ಮುಂದಿನ ಸೋಮವಾರ ನಡೆಯುವ ಪರೀಕ್ಷೆಗೆ ಮೊದಲ ಪರೀಕ್ಷೆ ವಂಚಿತ ಇಬ್ಬರು ಮಕ್ಕಳಿಗೆ ಅವಕಾಶ ನೀಡಬೇಕೆಂದು ಪುನರುಚ್ಚರಿಸಿದರು.
ಪರೀಕ್ಷೆಗೆ ಅವಕಾಶ ನಿರಾಕರಣೆಯ ಬಗ್ಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹತ್ತಾರು ಸಬೂಬುಗಳನ್ನು ನೀಡುತ್ತಾರೆ. ಆದರೆ, ಮಕ್ಕಳ ಭವಿಷ್ಯದ ಹಿತ ದೃಷ್ಟಿಯಿಂದ ಅವರಿಗೆ ಪರೀಕ್ಷೆಗೆ ಅವಕಾಶ ಕಲ್ಪಿಸಿಕೊಡುವುದು ಅವರ ಕರ್ತವ್ಯವಾಗುತ್ತದೆಂದು ಸ್ಪಷ್ಟಪಡಿಸಿದರು.
Kshetra Samachara
21/03/2026 03:29 pm
LOADING...