ಚಿಕ್ಕಮಗಳೂರು : ವಿಧಾನಸಭಾ ಕ್ಷೇತ್ರದ ಸೀತಾಳಯ್ಯನಗಿರಿ, ಅತ್ತಿಗುಂಡಿ ಮತ್ತು ಕೈಮರಕ್ಕೆ ಸಂಪರ್ಕ ಕಲ್ಪಿಸುವ ಸುಮಾರು 3.50 ಕೋಟಿ ರೂಪಾಯಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಶಾಸಕ ಹೆಚ್.ಡಿ. ತಮ್ಮಯ್ಯ ಉದ್ಘಾಟಿಸಿದರು.
ಲೋಕೋಪಯೋಗಿ ಇಲಾಖೆಯ ವತಿಯಿಂದ ಪೂರ್ಣಗೊಂಡಿರುವ ಈ ಕಾಮಗಾರಿಗಳನ್ನು ಪರಿವೀಕ್ಷಿಸಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಿದ ನಂತರ ಅವರು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಬಡವರ ಬಗ್ಗೆ ಕಾಳಜಿ ಇಲ್ಲದ ಕೇಂದ್ರ ಸರ್ಕಾರವು ಧರ್ಮಗಳ ಮಧ್ಯೆ ವಿಷಬೀಜ ಬಿತ್ತಿ ಪ್ರಚೋದನಾಕಾರಿ ಭಾಷಣಗಳ ಮೂಲಕ ರಾಜಕಾರಣ ಮಾಡುತ್ತಿದೆ ಎಂದು ಶಾಸಕರು ಆರೋಪಿಸಿದರು.
ಚೀನಾ ಮಾದರಿಯಲ್ಲಿ ಅಗತ್ಯವಿರುವ ಅಡುಗೆ ಅನಿಲ ಮತ್ತು ಸಿಎನ್ಜಿ ಗ್ಯಾಸ್ ದಾಸ್ತಾನು ಮಾಡಿಕೊಳ್ಳುವಲ್ಲಿ ಕೇಂದ್ರ ವಿಫಲವಾಗಿದೆ. ಮಧ್ಯಪ್ರಾಚ್ಯ ದೇಶಗಳ ಯುದ್ಧದ ನೆಪವೊಡ್ಡಿ ಸಾಮಾನ್ಯ ಜನರಿಗೆ ಸಿಗಬೇಕಾದ ಗ್ಯಾಸ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು. ಭಾವನೆಗಳನ್ನು ಕೆರಳಿಸಿ ಸಮಾಜದಲ್ಲಿ ಬೆಂಕಿ ಹಚ್ಚುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ, ಆದರೆ ಒಮ್ಮೆ ಹತ್ತಿದ ಬೆಂಕಿಯನ್ನು ನಂದಿಸಲು ಅವರಿಂದಲೂ ಸಾಧ್ಯವಾಗುವುದಿಲ್ಲ ಎಂದು ಎಚ್ಚರಿಸಿದ ಅವರು, ಶಾಂತಿಯ ಮೌಲ್ಯಗಳನ್ನು ಎತ್ತಿಹಿಡಿಯುವ ಅಗತ್ಯವಿದೆ ಎಂದರು.
ಇದೇ ವೇಳೆ ರಾಜ್ಯದ ಕಾಂಗ್ರೆಸ್ ಸರ್ಕಾರದ ಸಾಧನೆಗಳನ್ನು ಶ್ಲಾಘಿಸಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪಂಚ ಗ್ಯಾರಂಟಿಗಳ ಮೂಲಕ ಬಡವರ ಬದುಕು ಕಟ್ಟಿಕೊಡುತ್ತಿದ್ದಾರೆ ಮತ್ತು ಅಭಿವೃದ್ಧಿ ಕಾಮಗಾರಿಗಳನ್ನು ಸಮರ್ಪಕವಾಗಿ ಜಾರಿಗೊಳಿಸುತ್ತಿದ್ದಾರೆ ಎಂದು ತಿಳಿಸಿದರು.
PublicNext
21/03/2026 08:06 pm
LOADING...