ಬೈಂದೂರು : ಶೈಕ್ಷಣಿಕ, ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಸಲ್ಲಿಸಿದ ನಿಸ್ವಾರ್ಥ ಸೇವೆ ಮತ್ತು ರಾಜಕೀಯದಲ್ಲಿ ತೋರಿದ ಸರಳತೆಯಿಂದ ಜನಮೆಚ್ಚುಗೆ ಗಳಿಸಿರುವ ಕಂಡ್ಲೂರು ದಸ್ತಗಿರಿ ಸಾಹೇಬ್ ಅವರಿಗೆ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ) ವತಿಯಿಂದ ನೀಡಲಾಗುವ ಪ್ರತಿಷ್ಠಿತ ಕರ್ನಾಟಕ ಸಾರ್ವಭೌಮ ಪ್ರಶಸ್ತಿ-2026ಕ್ಕೆ ಆಯ್ಕೆ ಮಾಡಲಾಗಿದೆ.
ಪ್ರಶಸ್ತಿ ಆಯ್ಕೆ ಪ್ರಕ್ರಿಯೆ
ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾಧ್ಯಕ್ಷ ಪ್ರಭಾಕರ್ ಪೂಜಾರಿ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ಜಿಲ್ಲೆಯ ಹಿರಿಯರು ಮತ್ತು ಪದಾಧಿಕಾರಿಗಳು ಸರ್ವಾನುಮತದಿಂದ ಈ ನಿರ್ಧಾರ ಕೈಗೊಂಡಿದ್ದಾರೆ. 2026ರಲ್ಲಿ ನೀಡಲಾಗುವ ಕರ್ನಾಟಕ ಸಾರ್ವಭೌಮ ಪ್ರಶಸ್ತಿಯನ್ನು ಕುಂದಾಪುರ ತಾಲೂಕಿನ ಕಂಡ್ಲೂರು ಮೂಲದ ದಸ್ತಗಿರಿ ಸಾಹೇಬ್ ಅವರಿಗೆ ನೀಡಲು ಆಯ್ಕೆ ಮಾಡಲಾಯಿತು.
ಮಾತನಾಡಿದ ದಸ್ತಗಿರಿ ಸಾಹೇಬ್, ಕನ್ನಡ ಸಂಘಟನೆಯು ಇಂತಹ ಅದ್ಭುತ ಪ್ರಶಸ್ತಿ ನೀಡಿ ನನ್ನ ಜವಾಬ್ದಾರಿಯನ್ನು ಇನ್ನಷ್ಟು ಹೆಚ್ಚಿಸಿದೆ. ಚಿಕ್ಕ ವಯಸ್ಸಿನಿಂದಲೇ ಶಿವಮೊಗ್ಗ ಮತ್ತು ಬೆಂಗಳೂರು ಭಾಗದಲ್ಲಿ ಕನ್ನಡ ರಕ್ಷಣಾ ವೇದಿಕೆಯ ಬಾವುಟ ಹಿಡಿದು ಹೋರಾಟ ಮಾಡಿದ್ದ ನನಗೆ, ಈಗ ಕನ್ನಡಿಗರ ಸೇವೆ ಮಾಡಲು ಮತ್ತೊಂದು ಅವಕಾಶ ಸಿಕ್ಕಿದೆ. ಕರ್ನಾಟಕ ರಕ್ಷಣಾ ವೇದಿಕೆ ಮತ್ತು ಜನರಿಗಾಗಿ ಹಗಲು ರಾತ್ರಿ ಎನ್ನದೆ ಸೇವೆ ಸಲ್ಲಿಸುತ್ತೇನೆ ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಕರವೇ ಜಿಲ್ಲಾಧ್ಯಕ್ಷ ಅ. ರಾ. ಪ್ರಭಾಕರ್ ಪೂಜಾರಿ, ಪುರುಷೋತ್ತಮ್ ಪೂಜಾರಿ ಕೊಡಪಾಡಿ, ಕುಂದಾಪುರ ತಾಲೂಕು ಅಧ್ಯಕ್ಷ ಸಂತೋಷ್ ಶೆಟ್ಟಿ ಪಡುಮುಂಡು, ಬೈಂದೂರು ತಾಲೂಕು ಅಧ್ಯಕ್ಷ ರಾಜೇಶ್ ಪೂಜಾರಿ, ಕುಂದಾಪುರ ತಾಲೂಕು ಪ್ರಧಾನ ಕಾರ್ಯದರ್ಶಿ ಕೃಷ್ಣ ಮೊಗವೀರ, ಕುಂದಾಪುರ ಮಾಜಿ ಅಧ್ಯಕ್ಷ ರಾಘವೇಂದ್ರ ಶೆಟ್ಟಿ, ನಾಗರಾಜ್ ಕೆಂಚನೂರು, ಗೋಪಾಲ್ ಕಾವ್ರಾಡಿ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.
Kshetra Samachara
21/03/2026 08:08 pm