ಹಾನಗಲ್ : ಪವಿತ್ರ ರಂಜಾನ್ ಹಿನ್ನೆಲೆಯಲ್ಲಿ ಇಲ್ಲಿನ ಈದ್ಗಾ ಮೈದಾನದಲ್ಲಿ ಶನಿವಾರ ಮುಸ್ಲಿಂ ಧರ್ಮೀಯರು ನಡೆಸಿದ ವಿಶೇಷ ಪ್ರಾರ್ಥನೆಯಲ್ಲಿ ಶಾಸಕ ಶ್ರೀನಿವಾಸ ಮಾನೆ ಭಾಗವಹಿಸಿ, ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.
ರಂಜಾನ್ ಹಬ್ಬ ಶಾಂತಿ, ಸಹಿಷ್ಣುತೆ ಮತ್ತು ಸಹೋದರತ್ವದ ಸಂದೇಶ ನೀಡುತ್ತದೆ. ಸಮಾಜದಲ್ಲಿ ಸೌಹಾರ್ದತೆ ಹಾಗೂ ಪರಸ್ಪರ ಗೌರವವನ್ನು ಬೆಳೆಸುವಲ್ಲಿ ಇಂತಹ ಹಬ್ಬಗಳ ಮಹತ್ವ ಅಪಾರವಾಗಿದೆ. ಎಲ್ಲರೂ ಒಗ್ಗಟ್ಟಿನಿಂದ ಬದುಕಿ ಸಮಾಜದ ಅಭಿವೃದ್ಧಿಗೆ ಕೈ ಜೋಡಿಸಬೇಕಿದೆ.
ಇಡೀ ಮಾನವ ಕುಲದ ಒಳಿತಿಗಾಗಿ ಸರ್ವರೂ ಪ್ರಾರ್ಥಿಸುವುದು ಅತ್ಯಂತ ಅವಶ್ಯ. ಮಾನವೀಯತೆಯಿಂದ ಪರಸ್ಪರ ಪ್ರೀತಿ, ವಿಶ್ವಾಸದಿಂದ ಬಾಳುವುದು ಮುಖ್ಯ ಎನ್ನುವ ಸಂಗತಿಯನ್ನು ಪ್ರತಿಯೊಬ್ಬರೂ ಅರಿಯಬೇಕಿದೆ. ಯಾವ ಧರ್ಮವೂ ದ್ವೇಷ ಬೋಧಿಸುವುದಿಲ್ಲ. ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸಿವೆ.
ಇದನ್ನು ತಿಳಿದು ಬಾಳಿದರೆ ಸಮಾಜದಲ್ಲಿ ಶಾಂತಿ, ಸೌಹಾರ್ದತೆ ನೆಲೆಸಲಿದೆ.ವಿವಿಧತೆಯಲ್ಲಿ ಏಕತೆ ಇರುವ ಭಾರತದಲ್ಲಿ ಪ್ರತಿಯೊಬ್ಬರೂ ಸಹ ಒಂದಾಗಿ, ಒಗ್ಗಟ್ಟಿನಿಂದ ಬದುಕಬೇಕಿದೆ. ಧರ್ಮಗಳ ನಿಜ ಸಾರ ಅರಿತು ಬದುಕಿದರೆ ಸಮಾಜದಲ್ಲಿ ಒಡಕು ಮೂಡದು. ಮಾನವೀಯತೆಯ ಮೌಲ್ಯ ಅಳವಡಿಸಿಕೊಂಡು ಸೌಹಾರ್ದತೆಯ ಬದುಕು ಕಟ್ಟಿಕೊಳ್ಳಲು ಮುಂದಾಗಬೇಕಿದೆ ಎಂದು ಶಾಸಕ ಮಾನೆ ತಿಳಿಸಿದರು.
ಇದೇ ಸಂದರ್ಭದಲ್ಲಿ ಸಾವಿರಾರು ಸಂಖ್ಯೆಯ ಮುಸ್ಲಿಂ ಬಾಂಧವರು ವಿಶ್ವಶಾಂತಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಪ್ರಾರ್ಥನೆಯ ಬಳಿಕ ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು. ಅಂಜುಮನ್ ಇಸ್ಲಾಂ ಸಮಿತಿಯ ಪದಾಧಿಕಾರಿಗಳು, ಅನೇಕ ಮುಖಂಡರು ಇದ್ದರು.
PublicNext
21/03/2026 10:16 pm