ಮೂಡಿಗೆರೆ: ಹಿಂದೂ ಕಾರ್ಯಕರ್ತರ ಮೇಲೆ ದಾಖಲಾಗಿರುವ ಸುಳ್ಳು ಪ್ರಕರಣಗಳನ್ನು ಖಂಡಿಸಿ ಹಾಗೂ ಲವ್ ಜಿಹಾದ್ ಮತ್ತು ಅಕ್ರಮ ಗೋಸಾಗಾಟದಂತಹ ಚಟುವಟಿಕೆಗಳನ್ನು ತಡೆಯುವಂತೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ಮತ್ತು ಬಿಜೆಪಿ ಮುಖಂಡರು ಬೃಹತ್ ಪ್ರತಿಭಟನೆ ನಡೆಸಿದರು. ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ನೂರಾರು ಕಾರ್ಯಕರ್ತರು, ಬಳಿಕ ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಹಿರಿಯ ಮುಖಂಡ ಎಂ.ಆರ್. ಜಗದೀಶ್ ಅವರು, ರಾಜ್ಯ ಸರ್ಕಾರವು ಪೊಲೀಸರ ಮೂಲಕ ಹಿಂದೂ ಕಾರ್ಯಕರ್ತರ ಮೇಲೆ ಉದ್ದೇಶಪೂರ್ವಕವಾಗಿ ಸುಳ್ಳು ಪ್ರಕರಣಗಳನ್ನು ದಾಖಲಿಸುತ್ತಿದೆ ಎಂದು ಆರೋಪಿಸಿದರು.
ಅನ್ಯ ಧರ್ಮದ ಶಕ್ತಿಗಳು ಅಪ್ರಾಪ್ತ ಬಾಲಕರನ್ನು ಬಳಸಿಕೊಂಡು ಹಿಂದೂ ಹುಡುಗಿಯರ ಮೇಲೆ ಲವ್ ಜಿಹಾದ್ ನಡೆಸುತ್ತಿವೆ ಮತ್ತು ಹಿಂದೂಗಳ ಮೇಲೆ ನಿರಂತರ ದೌರ್ಜನ್ಯಗಳು ನಡೆಯುತ್ತಿವೆ ಎಂದು ಅವರು ಆತಂಕ ವ್ಯಕ್ತಪಡಿಸಿದರು. ಬಿಜೆಪಿ ತಾಲೂಕು ಅಧ್ಯಕ್ಷ ಗಜೇಂದ್ರ ಕೊಟ್ಟಿಗೆಹಾರ ಮಾತನಾಡಿ, ತಾಲೂಕಿನಲ್ಲಿ ಅಕ್ರಮ ಗೋಸಾಗಾಟ ಎಗ್ಗಿಲ್ಲದೆ ಸಾಗುತ್ತಿದೆ ಮತ್ತು ಬಾಂಗ್ಲಾ ವಲಸಿಗರಿಂದ ಅಕ್ರಮ ಚಟುವಟಿಕೆಗಳು ಹೆಚ್ಚಾಗುತ್ತಿವೆ ಎಂದು ದೂರಿದರು. ಲವ್ ಜಿಹಾದ್ನಿಂದ ಬಾಲಕಿಯನ್ನು ರಕ್ಷಿಸಲು ಹೋದ ಹಿಂದೂ ಸಂಘಟನೆಗಳ ಮುಖಂಡರ ಮೇಲೆ ದಾಖಲಿಸಿರುವ ಸುಳ್ಳು ಕೇಸ್ಗಳನ್ನು ಕೂಡಲೇ ವಾಪಸ್ ಪಡೆಯಬೇಕು ಹಾಗೂ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾ ವಲಸಿಗರನ್ನು ಸ್ಥಳಾಂತರಿಸಬೇಕು ಎಂದು ಅವರು ಒತ್ತಾಯಿಸಿದರು. ಈ ಪ್ರತಿಭಟನೆಯಲ್ಲಿ ವಿವಿಧ ಹಿಂದೂಪರ ಸಂಘಟನೆಗಳ ಪ್ರಮುಖರು ಮತ್ತು ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.
Kshetra Samachara
31/03/2026 06:51 pm
LOADING...