ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ಮಂಗಳವಾರ ರಾತ್ರಿ ಸುರಿದ ಭಾರೀ ಮಳೆಯ ಪರಿಣಾಮ ಹಲವಾರು ಪ್ರದೇಶಗಳು ಜಲಾವೃತಗೊಂಡು ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ವಿಶೇಷವಾಗಿ ಕೆಳಮಟ್ಟದಲ್ಲಿರುವ ಮನೆಗಳಿಗೆ ನೀರು ನುಗ್ಗಿದ ಪರಿಣಾಮ ಜನರು ರಾತ್ರಿಯಿಡೀ ನಿದ್ರೆ ಇಲ್ಲದೆ ಕಳೆಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ನಗರದ ಶರಾವತಿನಗರ ಮತ್ತು ಹೊಸಮನೆ ಬಡಾವಣೆ ಸೇರಿದಂತೆ ಹಲವು ಪ್ರದೇಶಗಳಲ್ಲಿ ನೀರು ಮನೆಗಳಿಗೆ ನುಗ್ಗಿ ಸಾಮಾನ್ಯ ಜೀವನವೇ ಅಸ್ತವ್ಯಸ್ತಗೊಂಡಿದೆ. ಮಳೆ ನೀರು ಸರಾಗವಾಗಿ ಹರಿಯದ ಕಾರಣ, ಒಳಚರಂಡಿಗಳಲ್ಲಿ ಕಸ-ಕಡ್ಡಿಗಳು ತುಂಬಿಕೊಂಡು ನೀರಿನ ಹರಿವು ತಡೆಯಲ್ಪಟ್ಟಿದೆ. ಇದರಿಂದ ರಸ್ತೆಗಳಲ್ಲಿ ನಿಂತ ನೀರು ಮನೆಗಳೊಳಗೆ ನುಗ್ಗಿ ದೊಡ್ಡ ಮಟ್ಟದ ಸಮಸ್ಯೆ ಉಂಟಾಗಿದೆ.
ಸ್ಥಳೀಯರು ಹೇಳುವಂತೆ, ಒಳಚರಂಡಿ ವ್ಯವಸ್ಥೆಯ ಅವೈಜ್ಞಾನಿಕ ನಿರ್ಮಾಣ ಮತ್ತು ರಾಜಕಾಲುವೆಗಳ ಒತ್ತುವರಿ ಈ ಸಮಸ್ಯೆಗೆ ಪ್ರಮುಖ ಕಾರಣವಾಗಿದೆ. ರಸ್ತೆಗಳು ಮನೆಗಳಿಗಿಂತ ಮೇಲ್ಮಟ್ಟದಲ್ಲಿ ನಿರ್ಮಾಣವಾಗಿರುವುದರಿಂದ ಮಳೆ ನೀರು ನೇರವಾಗಿ ಮನೆಗಳಿಗೆ ಹರಿದು ಹೋಗುತ್ತಿದೆ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜಕಾಲುವೆಗಳ ಸ್ವಚ್ಛತೆ ಸರಿಯಾಗಿ ಮಾಡದಿರುವುದು, ಮಳೆಯ ಮುನ್ನ ಯಾವುದೇ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಇಂತಹ ಘಟನೆಗಳು ಶಿವಮೊಗ್ಗದಲ್ಲಿ ಹೊಸದೇನಲ್ಲ. ಹಿಂದೆ ಕೂಡ ಮಳೆಯ ಸಂದರ್ಭದಲ್ಲಿ ನೀರು ಮನೆಗಳಿಗೆ ನುಗ್ಗಿದ ಪ್ರಕರಣಗಳು ವರದಿಯಾಗಿವೆ ಮತ್ತು ಸ್ಮಾರ್ಟ್ ಸಿಟಿ ಕಾಮಗಾರಿಗಳ ಅವೈಜ್ಞಾನಿಕ ಅನುಷ್ಠಾನಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಒಟ್ಟಾರೆ, ಸ್ಥಳೀಯರು ಎಷ್ಟು ಮನವಿ ಸಲ್ಲಿಸಿದರೂ ಶಾಶ್ವತ ಪರಿಹಾರ ಕಲ್ಪಿಸುವಲ್ಲಿ ಅಧಿಕಾರಿಗಳ ಮನಸ್ಸು ಮಾಡಿಲ್ಲ, ಅಧಿಕಾರಿಗಳ ನಿರ್ಲಕ್ಷ್ಯದಿಂದಲೇ ಸಮಸ್ಯೆ ಮರುಕಳಿಸುತ್ತಿದೆ ಎಂದು ಸ್ಥಳೀಯರು ಆಳಲು ತೋಡಿಕೊಳ್ತಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಇನ್ನಾದರೂ ಈ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕಾಗಿದೆ..
ವೀರೇಶ್ ಜಿ ಹೊಸೂರು, ಪಬ್ಲಿಕ್ ನೆಕ್ಸ್ಟ್. ಶಿವಮೊಗ್ಗ
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
01/04/2026 02:35 pm