ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಅನಿಲ ಕೊರತೆ ವದಂತಿ; ವಿನಾಕಾರಣ ಗೊಂದಲ ಸೃಷ್ಟಿಸಬೇಡಿ- ಸಚಿವ ಕೆ.ಎಚ್. ಮುನಿಯಪ್ಪ

​ಬೆಂಗಳೂರು: ರಾಜ್ಯದಲ್ಲಿ ಎದುರಾಗಿರುವ ಎಲ್‌ಪಿಜಿ (LPG) ಅನಿಲ ಸಮಸ್ಯೆಯ ಕುರಿತು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ಅವರು ದೇವನಹಳ್ಳಿಯಲ್ಲಿ ಸ್ಪಷ್ಟನೆ ನೀಡಿದ್ದಾರೆ.

ಗ್ಯಾಸ್ ವಿತರಣೆಯಲ್ಲಿ ಯಾವುದೇ ಗಂಭೀರ ವ್ಯತ್ಯಯವಾಗಿಲ್ಲ, ವಿನಾಕಾರಣ ಗೊಂದಲ ಸೃಷ್ಟಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

​"ಜಾಗತಿಕ ಮಟ್ಟದಲ್ಲಿ ಯುದ್ಧದ ವಾತಾವರಣವಿರುವುದರಿಂದ ಕೆಲವು ತಾಂತ್ರಿಕ ಸಮಸ್ಯೆಗಳು ಎದುರಾಗಿವೆ. ಚುನಾವಣೆ ನೀತಿ ಸಂಹಿತೆಯ ಕಾರಣದಿಂದ ಅಧಿಕಾರಿಗಳ ಸಭೆ ನಡೆಸಲು ಸಾಧ್ಯವಾಗಿರಲಿಲ್ಲ. ಬರುವ ಏಪ್ರಿಲ್ 5ರಂದು ಈ ಬಗ್ಗೆ ಉನ್ನತ ಮಟ್ಟದ ಸಭೆ ನಡೆಸಿ ಪರಿಶೀಲಿಸಲಾಗುವುದು"

​ಪ್ರಸ್ತುತ ನಗರ ಪ್ರದೇಶಗಳಲ್ಲಿ ಪ್ರತಿ 25 ದಿನಕ್ಕೊಮ್ಮೆ ಹಾಗೂ ಗ್ರಾಮೀಣ ಭಾಗಗಳಲ್ಲಿ ಪ್ರತಿ 45 ದಿನಕ್ಕೊಮ್ಮೆ ಸಿಲಿಂಡರ್ ವಿತರಿಸಲಾಗುತ್ತಿದೆ. ಇದರಲ್ಲಿ ಯಾವುದೇ ಬದಲಾವಣೆ ಅಥವಾ ತೊಂದರೆ ಇಲ್ಲ. "ದಿನಕ್ಕೆ ಸುಮಾರು 3 ಸಾವಿರ ಆಟೋ ಗ್ಯಾಸ್ ಸಿಲಿಂಡರ್‌ಗಳನ್ನು ಪೂರೈಸಲಾಗುತ್ತಿದೆ. ಈ ಮೊದಲು ಆಟೋ ಚಾಲಕರು ಖಾಸಗಿ ಕಂಪನಿಗಳಿಂದ ಅನಿಲ ಪಡೆಯುತ್ತಿದ್ದರು. ಈಗ ಅಲ್ಲಿ ದರ ಹೆಚ್ಚಾದ ಕಾರಣ ಸರ್ಕಾರಿ ಬಂಕ್‌ಗಳಿಗೆ ಬರುತ್ತಿದ್ದಾರೆ. ಹೀಗಾಗಿ ಸಣ್ಣ ಮಟ್ಟದ ಒತ್ತಡ ಕಂಡುಬಂದಿದೆ" ಎಂದರು.

​ "ಸರ್ಕಾರಿ ಕಂಪನಿಗಳ ಗ್ರಾಹಕರಿಗೆ ಯಾವುದೇ ತೊಂದರೆಯಾಗಿಲ್ಲ. ಖಾಸಗಿ ಕಂಪನಿಗಳೂ ಸಹ ಗ್ರಾಹಕರಿಂದ ಹೆಚ್ಚಿನ ಹಣ ವಸೂಲಿ ಮಾಡುವಂತಿಲ್ಲ. ಒಂದು ವೇಳೆ ಅಕ್ರಮವಾಗಿ ದರ ಹೆಚ್ಚಿಸಿದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು" ಎಂದು ಎಚ್ಚರಿಕೆ ನೀಡಿದರು.

​"ಸದ್ಯ ಲಭ್ಯವಿರುವ ಸಂಪನ್ಮೂಲವನ್ನು ಸಾರ್ವಜನಿಕರು ಮಿತವಾಗಿ ಬಳಸಬೇಕು. ಅನಿಲ ಕೊರತೆಯ ಬಗ್ಗೆ ಹರಡುತ್ತಿರುವ ಸುಳ್ಳು ಸುದ್ದಿಗಳಿಗೆ ಕಿವಿಗೊಡಬಾರದು" ಎಂದು ಕಿವಿಮಾತು ಹೇಳಿದರು.

Edited By : Vinayak Patil
PublicNext

PublicNext

02/04/2026 08:23 pm

Cinque Terre

12.68 K

Cinque Terre

0