ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಟೋ ರಿಕ್ಷಾಗಳಿಗೆ ಎಲ್ಪಿಜಿ ಅನಿಲದ ತೀವ್ರ ಕೊರತೆ ಮತ್ತು ಅನಿಯಂತ್ರಿತ ಬೆಲೆ ಏರಿಕೆಯನ್ನು ಖಂಡಿಸಿ ಆಟೋ ರಿಕ್ಷಾ ಚಾಲಕರ ಯೂನಿಯನ್ (ರಿ) ಪದಾಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳಿಗೆ ಗುರುವಾರ ಮನವಿ ಸಲ್ಲಿಸಿದರು.
"ಜಿಲ್ಲೆಯಲ್ಲಿ ಎಲ್ಪಿಜಿ ಅನಿಲದ ಬೆಲೆ ಶೇ. 50ರಿಂದ 60ರಷ್ಟು ಏರಿಕೆಯಾಗಿದೆ. ಇದರಿಂದ ಆಟೋ ಚಾಲಕರ ದೈನಂದಿನ ಜೀವನ ಅಸ್ತವ್ಯಸ್ತಗೊಂಡಿದೆ. ಬೆಲೆ ಏರಿಕೆಯನ್ನು ತಕ್ಷಣ ನಿಯಂತ್ರಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
"ಅನಿಲ ಪಂಪ್ಗಳಲ್ಲಿ ಸರಿಯಾದ ಸರಬರಾಜು ಇಲ್ಲದೆ ಚಾಲಕರು ಗಂಟೆಗಟ್ಟಲೆ ಸಾಲಿನಲ್ಲಿ ನಿಲ್ಲುವಂತಾಗಿದೆ. ಇದರಿಂದ ದಿನದ ದುಡಿಮೆಯೂ ಇಲ್ಲದೆ ಚಾಲಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಬಗ್ಗೆ ಅಧಿಕಾರಿಗಳಿಗೆ ತಿಳಿದಿದ್ದರೂ ಯಾವುದೇ ಕ್ರಮ ಕೈಗೊಳ್ಳದಿರುವುದು ಅವರ ನಿರ್ಲಕ್ಷ್ಯವನ್ನು ಎತ್ತಿ ತೋರಿಸುತ್ತದೆ ಎಂದು ಸಂಘಟನೆ ಆಕ್ರೋಶ ವ್ಯಕ್ತಪಡಿಸಿದೆ.
ಸಮಸ್ಯೆಗಳು ಬಗೆಹರಿಯದಿದ್ದರೆ ಮುಂದಿನ ದಿನಗಳಲ್ಲಿ ಜಿಲ್ಲಾದ್ಯಂತ ಉಗ್ರ ಹೋರಾಟ ನಡೆಸುವುದಾಗಿ ಯೂನಿಯನ್ ಎಚ್ಚರಿಸಿದೆ.
ಮನವಿ ಸಲ್ಲಿಸುವ ಸಂದರ್ಭದಲ್ಲಿ ಯೂನಿಯನ್ ಅಧ್ಯಕ್ಷ ಅಬ್ದುಲ್ ಜಲೀಲ್ ಕೆ., ಪ್ರಧಾನ ಕಾರ್ಯದರ್ಶಿ ಶಫೀಕ್ ಬೋಳಿಯಾರ್, ಪದಾಧಿಕಾರಿಗಳಾದ ಶಖೀಕ್ ಸಾಲೆತ್ತೂರು, ಸಿದ್ದೀಕ್ ಕೊಡಕ್ಕಲ್, ಇಕ್ಬಾಲ್ ಮಾಡೂರು ಹಾಗೂ ಸಿರಾಜ್ ಇರಾ ಉಪಸ್ಥಿತರಿದ್ದರು.
PublicNext
03/04/2026 11:47 am