ಶಿವಮೊಗ್ಗ : ಶರಾವತಿ ಪಂಪ್ಡ್ ಸ್ಟೋರೇಜ್ ವಿರೋಧಿಸಿ ಪರಿಸರಕ್ಕಾಗಿ ನಾವು, ರಾಷ್ಟ್ರಭಕ್ತರ ಬಳಗ ಹಾಗೂ ವಿವಿಧ ಪರಿಸರ ಸಂಘಟನೆಗಳ ಸಹಯೋಗದಲ್ಲಿ ಏ.16ರಂದು ಶಿವಮೊಗ್ಗ ನಗರದಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ಹಮ್ಮಿಕೊಳ್ಳಲಾಗುವುದು ಎಂದು ಮಾಜಿ ಉಪಮುಖ್ಯಮಂತ್ರಿ, ರಾಷ್ಟ್ರಭಕ್ತ ಬಳಗದ ಸಂಚಾಲಕ ಕೆ.ಎಸ್. ಈಶ್ವರಪ್ಪ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರಿಸರ ವಿನಾಶದ ಶರಾವತಿ ಪಂಪ್ಡ್ ಸ್ಟೋರೇಜ್ಗೆ ಸಂಬಂಧಿಸಿದಂತೆ ಕೆಪಿಸಿಎಲ್ ಬೇಜವಾಬ್ದಾರಿಯಾಗಿ ನಡೆದುಕೊಳ್ಳುತ್ತಿದೆ. ಇಲ್ಲಿಯವರೆಗೆ ಯೋಜನೆ ಕುರಿತು ವಿವರ ಮಾಹಿತಿ ಕೊಡುವಂತೆ ನಾಲ್ಕೈದು ಬಾರಿ ಡಿಸಿ ಮೂಲಕ ಮನವಿ ಸಲ್ಲಿಸಿದರೂ ಯಾವುದೇ ಮಾಹಿತಿ ನೀಡುತ್ತಿಲ್ಲ. ಜಿಲ್ಲಾಧಿಕಾರಿಗಳು ಕೆಪಿಸಿಎಲ್ಗೆ ವಿವರ ನೀಡುವಂತೆ ಕೇಳಿಕೊಂಡರೂ ಮಾಹಿತಿ ನೀಡುತ್ತಿಲ್ಲ. ಕೆಪಿಸಿಎಲ್ನ ಈ ಬೇಜಾಬ್ದಾರಿಯನ್ನು ಮಾನ್ಯ ಉಚ್ಛ ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದ ಅವರು, ಏ.7ರ ಒಳಗಾಗಿ ತಮ್ಮ ಪತ್ರದ ಬಗ್ಗೆ ಉತ್ತರ ಕೊಡಿ ಇಲ್ಲವಾದಲ್ಲಿ ಲಿಖಿತ ರೂಪದಲ್ಲಿ ಉತ್ತರ ಕೊಡಿ ಎಂದು ಜಿಲ್ಲಾಧಿಕಾರಿಗಳು ಕೆಪಿಸಿಎಲ್ಗೆ ತಾಕೀತು ಮಾಡಿದ್ದಾರೆ ಎಂದರು.
ಈ ಯೋಜನೆಯಲ್ಲಿ ಯಾವುದೇ ಉನ್ನತ ಸ್ಥರದ ಮಂತ್ರಿಗಳು ಪಾಲುದಾರರಾಗಿ ಲೂಟಿ ಹೊಡೆಯಲು ನಾವು ಬಿಡುವುದಿಲ್ಲ. ಬಂಗಾರಮಕ್ಕಿ ಕ್ಷೇತ್ರದ ಶ್ರೀ ಮಾರುತಿ ಗುರೂಜಿಯವರು ಪ್ರಸ್ತಾವಿತ ಯೋಜನೆಯನ್ನು ಉಗ್ರವಾಗಿ ವಿರೋಧಿಸಿದ್ದಾರೆ. ಅಲ್ಲದೆ ಕೇಂದ್ರ ಸರ್ಕಾರವು ಈ ಯೋಜನೆಗೆ ಇನ್ನು ಅನುಮತಿ ನೀಡಿಲ್ಲ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದ್ದಾರೆ. ಈ ಮಧ್ಯದಲ್ಲಿ ರಾಜ್ಯ ಸರ್ಕಾರ ಯೋಜನೆಯ ಕುರಿತು ಟೆಂಡರ್ ಕರೆದಿದ್ದಾದರೂ ಏಕೆ ಎಂದು ಪ್ರಶ್ನಿಸಿದರು.
Kshetra Samachara
03/04/2026 06:32 pm