ಗುಂಡ್ಲುಪೇಟೆ: ನಾಡಿದ್ದು ಗುಂಡ್ಲುಪೇಟೆಗೆ ಆಗಮಿಸಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಪ್ಪು ಬಾವುಟ ಪ್ರದರ್ಶಿಸಲು ರೈತರು ಸಿದ್ಧತೆ ನಡೆಸಿದ್ದಾರೆ. ಆದರೆ, ಈ ಪ್ರತಿಭಟನೆಗೆ ಮುಂದಾದ ರೈತರಿಗೆ ಪೊಲೀಸರು ಗಂಭೀರ ಎಚ್ಚರಿಕೆ ನೀಡಿದ್ದಾರೆ. "ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಪ್ಪು ಬಾವುಟ ಪ್ರದರ್ಶಿಸಲು ಮುಂದಾದರೆ ನಿಮ್ಮ ಮೇಲೆ ಕೇಸ್ ದಾಖಲಿಸಿ ತಕ್ಕ ಪಾಠ ಕಲಿಸಬೇಕಾಗುತ್ತದೆ" ಎಂದು ಪೊಲೀಸರು ಕರೆ ಮಾಡಿ ಬೆದರಿಕೆ ಹಾಕುತ್ತಿದ್ದಾರೆ ಎಂದು ರೈತ ಸಂಘದ ರಾಜ್ಯ ಉಪಾಧ್ಯಕ್ಷ ಡಾ. ಗುರುಪ್ರಸಾದ್ ಆರೋಪಿಸಿದ್ದಾರೆ.
ಪ್ರಜಾಪ್ರಭುತ್ವ ವ್ಯವಸ್ಥೆಯ ಕಗ್ಗೊಲೆ
ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಾ. ಗುರುಪ್ರಸಾದ್, ಪೊಲೀಸರು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಲು ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪೊಲೀಸರ ಮೂಲಕ ಬೆದರಿಕೆ ಹಾಕಿಸುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯ ಕಗ್ಗೊಲೆ ಮಾಡಲಾಗುತ್ತಿದೆ. ರೈತರ ಮನವಿಗಳನ್ನು ಕಸದ ಬುಟ್ಟಿಗೆ ಎಸೆದವರಿಗೆ ಮತ್ತೆ ಮನವಿ ನೀಡುವ ಅಗತ್ಯ ನಮಗಿಲ್ಲ. ರೈತ ವಿರೋಧಿ ನಿಲುವು ತಳೆದವರಿಗೆ ಕಪ್ಪು ಬಾವುಟ ಪ್ರದರ್ಶನ ಮಾಡುವುದರಲ್ಲಿ ಯಾವುದೇ ತಪ್ಪಿಲ್ಲ. "ನಿಮಗೆ ಸಿಎಂ ಭೇಟಿಗೆ ಅವಕಾಶ ಕಲ್ಪಿಸುತ್ತೇವೆ, ಚಳುವಳಿಯಿಂದ ಹಿಂದೆ ಸರಿಯಿರಿ" ಎಂದು ದೌರ್ಜನ್ಯ ತೋರುತ್ತಿದ್ದಾರೆ ಎಂದು ಅವರು ಆರೋಪಿಸಿದರು.
ಹೋರಾಟದ ದೃಢ ಸಂಕಲ್ಪ
ಭ್ರಷ್ಟಾಚಾರದ ವಿರುದ್ಧದ ಹೋರಾಟದಲ್ಲಿ ಜೈಲಿಗೆ ಹೋಗಲು ನಾವು ಹಿಂಜರಿಯುವುದಿಲ್ಲ ಎಂದು ಡಾ. ಗುರುಪ್ರಸಾದ್ ಸ್ಪಷ್ಟಪಡಿಸಿದರು. ಒಂದು ವೇಳೆ ರೈತರಿಗೆ ಯಾವುದೇ ಅನಾಹುತಗಳು ಸಂಭವಿಸಿದರೆ, ಅದಕ್ಕೆ ಪೊಲೀಸರೇ ನೇರ ಹೊಣೆಗಾರರಾಗುತ್ತಾರೆ ಎಂದು ಎಚ್ಚರಿಕೆ ನೀಡಿದರು.
ಶಿವಕುಮಾರ್ ಪಬ್ಲಿಕ್ ನೆಕ್ಸ್ಟ್ ಗುಂಡ್ಲುಪೇಟೆ
PublicNext
19/04/2026 03:59 pm
LOADING...