ಗುಂಡ್ಲುಪೇಟೆ: ಜಿಲ್ಲಾಧಿಕಾರಿ ಶ್ರೀ ರೂಪಾ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜು ಅವರೊಂದಿಗೆ ನಡೆದ ಸಂಧಾನ ಯಶಸ್ವಿಯಾಗಿದ್ದು, ಕಳೆದ 12 ದಿನಗಳಿಂದ ನಡೆಯುತ್ತಿದ್ದ ರೈತರ ಅಹೋರಾತ್ರಿ ಧರಣಿ ಕೊನೆಗೂ ಅಂತ್ಯಗೊಂಡಿದೆ. ಸಾಮೂಹಿಕ ನಾಯಕತ್ವದ ರೈತ ಸಂಘದ ಸದಸ್ಯರು ತಮ್ಮ ಧರಣಿಯನ್ನು ಕೈಬಿಟ್ಟಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನಾಡಿದ್ದು ಗುಂಡ್ಲುಪೇಟೆ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಈ ಸಂಧಾನ ನಡೆಸಲಾಯಿತು. ರೈತರ ಬೇಡಿಕೆಗಳಿಗೆ ಸ್ಪಂದಿಸುವ ಭರವಸೆಯನ್ನು ಜಿಲ್ಲಾಧಿಕಾರಿ ಶ್ರೀ ರೂಪಾ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜು ನೀಡಿದ್ದು, ಇದಕ್ಕೆ ಒಪ್ಪಿದ ರೈತ ಸಂಘ ಸದಸ್ಯರು ಹಲವು ಷರತ್ತುಗಳೊಂದಿಗೆ ಮುಷ್ಕರಕ್ಕೆ ವಿರಾಮ ಹೇಳಿದ್ದಾರೆ.
ರೈತರ ಪ್ರಮುಖ ಬೇಡಿಕೆಗಳು
ಧರಣಿನಿರತ ರೈತರು ಮುಂದಿಟ್ಟ ಪ್ರಮುಖ ಷರತ್ತುಗಳೆಂದರೆ: ಅಕ್ರಮ ಗಣಿಗಾರಿಕೆಗೆ ಕಡಿವಾಣ ಹಾಕುವುದರ ಜೊತೆಗೆ, ಗಡಿ ಭಾಗದ ಖನಿಜ ಸಂಪತ್ತನ್ನು ಲೂಟಿ ಮಾಡುತ್ತಿರುವ ಕೇರಳದ ಉದ್ಯಮಿಗಳಿಗೆ ಬ್ರೇಕ್ ಹಾಕಬೇಕು. ಓವರ್ಲೋಡ್ ಮತ್ತು ಅತಿ ವೇಗವಾಗಿ ಚಲಿಸುವ ಟಿಪ್ಪರ್ಗಳ ವಿರುದ್ಧ ಯಾವುದೇ ಮೃದು ಧೋರಣೆ ತೋರದೆ, ನಿಯಮ ಉಲ್ಲಂಘಿಸಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಹಾಗೆಯೇ, ಅಕ್ರಮ ರೆಸಾರ್ಟ್ಗಳ ಬಗ್ಗೆ ಕ್ರಮ ಕೈಗೊಳ್ಳಬೇಕು. ಕಳೆದ ಹತ್ತು ವರ್ಷಗಳಿಂದ ಬಂಡೀಪುರದಲ್ಲಿ ಕಾರ್ಯನಿರ್ವಹಿಸುತ್ತಿರುವ ಆರ್ಎಫ್ಒಗಳಾದ ಮಲ್ಲೇಶ್, ಮಹದೇವ್, ಪುನೀತ್ ಹಾಗೂ ಎಸಿಎಫ್ ನವೀನ್ ಕುಮಾರ್ ಅವರನ್ನು ವರ್ಗಾವಣೆ ಮಾಡಲು ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ರೈತರು ಆಗ್ರಹಿಸಿದರು.
ಜಿಲ್ಲಾಧಿಕಾರಿಗಳ ಭರವಸೆ
ರೈತರ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಜಿಲ್ಲಾಧಿಕಾರಿ ಶ್ರೀ ರೂಪಾ, ಮುಖ್ಯಮಂತ್ರಿಗಳ ಕಾರ್ಯಕ್ರಮ ಮುಗಿದ ಕೂಡಲೇ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ಸಮಕ್ಷಮದಲ್ಲಿ ಸಭೆ ಕರೆದು ಚರ್ಚಿಸಲಾಗುವುದು ಎಂದು ಭರವಸೆ ನೀಡಿದರು. ರೈತರಿಗೆ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಅಲ್ಲದೆ, ಕೆರೆಗಳಿಗೆ ನೀರು ತುಂಬಿಸುವ ಕುರಿತಾಗಿಯೂ ಮಾತುಕತೆ ನಡೆಸುವ ಭರವಸೆ ನೀಡಿದರು.
PublicNext
19/04/2026 08:14 pm