ತುಮಕೂರು: ಜಿಲ್ಲಾಧಿಕಾರಿಗಳೊಂದಿಗೆ ಬೆಟ್ಟಿಂಗ್ ಆಡಿದ್ದ ಪ್ರಕರಣದಲ್ಲಿ ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಜನಪ್ರತಿನಿಧಿಗಳ ನ್ಯಾಯಾಲಯ ಮಹತ್ವದ ಆದೇಶ ಹೊರಡಿಸಿದೆ.
ಬೆಟ್ಟಿಂಗ್ ಪ್ರಕರಣದ ವಿವರ
ತುಮಕೂರಿನಲ್ಲಿ ಕಳೆದ ಅಕ್ಟೋಬರ್ 2025 ರಂದು ಪಿಯು ಕಾಲೇಜು ವಿದ್ಯಾರ್ಥಿಗಳ ರಾಜ್ಯಮಟ್ಟದ ಕಬಡ್ಡಿ ಪಂದ್ಯಾವಳಿಯ ಫೈನಲ್ ಪಂದ್ಯ ನಡೆದಿತ್ತು. ವಿಜಯಪುರ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ನಡುವೆ ನಡೆದ ಈ ಪಂದ್ಯಾವಳಿಯಲ್ಲಿ, ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರು ಜಿಲ್ಲಾಧಿಕಾರಿ ಶುಭಕಲ್ಯಾಣ್ ಅವರೊಂದಿಗೆ 500 ರೂ. ಬೆಟ್ಟಿಂಗ್ ಕಟ್ಟಿದ್ದರು. ಈ ಬೆಟ್ಟಿಂಗ್ನಲ್ಲಿ ಪರಮೇಶ್ವರ ಸೋತಿದ್ದರು. ಈ ವಿಚಾರವನ್ನು ಅವರೇ ಸಾರ್ವಜನಿಕವಾಗಿ ಬಹಿರಂಗಪಡಿಸಿದ್ದರು.
ಸಾಮಾಜಿಕ ಕಾರ್ಯಕರ್ತನ ಹೋರಾಟ
ಗೃಹ ಸಚಿವರ ಈ ಬಹಿರಂಗ ಹೇಳಿಕೆಯನ್ನು ಆಧರಿಸಿ, ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸುವಂತೆ ದೂರು ನೀಡಲಾಗಿತ್ತು. ಆದರೆ, ಪೊಲೀಸರು ಎಫ್ಐಆರ್ ದಾಖಲಿಸದ ಹಿನ್ನೆಲೆಯಲ್ಲಿ, ಸಾಮಾಜಿಕ ಹೋರಾಟಗಾರ ಹಂದ್ರಾಳ್ ನಾಗಭೂಷಣ ಅವರು ನ್ಯಾಯಾಲಯದ ಮೆಟ್ಟಿಲೇರಿದ್ದರು. ಈ ವಿಚಾರವು ಡಾ.ಜಿ. ಪರಮೇಶ್ವರ ಅವರಿಗೆ ಸಾರ್ವಜನಿಕವಾಗಿ ತೀವ್ರ ಮುಜುಗರ ತಂದಿತ್ತು.
ರಾಜಕೀಯ ಟೀಕೆ
ಇತ್ತೀಚೆಗೆ ತುಮಕೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, ಕೆಆರ್ಎಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಭಟ್ಟರಹಳ್ಳಿ ಮಲ್ಲಿಕಾರ್ಜುನ ಅವರು ಈ ಬೆಟ್ಟಿಂಗ್ ವಿಷಯವನ್ನು ಪ್ರಸ್ತಾಪಿಸಿ, ಗೃಹ ಸಚಿವರು ಹಾಗೂ ಜಿಲ್ಲಾಡಳಿತದ ಕಾರ್ಯವೈಖರಿಯನ್ನು ತೀವ್ರವಾಗಿ ಟೀಕಿಸಿದ್ದರು.
ನ್ಯಾಯಾಲಯದ ಆದೇಶ
ಹಂದ್ರಾಳ್ ನಾಗಭೂಷಣ್ ಸಲ್ಲಿಸಿದ್ದ ಈ ದೂರನ್ನು ವಿಚಾರಣೆ ನಡೆಸಿದ ಬೆಂಗಳೂರಿನ 42ನೇ ಎಸಿಜೆಎಂ ನ್ಯಾಯಾಲಯದ ನ್ಯಾಯಮೂರ್ತಿ ಕೆ.ಎನ್. ಶಿವಕುಮಾರ್ ಅವರು, ಗೃಹ ಸಚಿವರ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸಲು ಆದೇಶಿಸಿದ್ದಾರೆ. ಈ ಕುರಿತು ಸೂಕ್ತ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ತುಮಕೂರಿನ ಕೊಡಿಗೇನಹಳ್ಳಿ ಪೊಲೀಸ್ ಠಾಣೆಗೆ ನ್ಯಾಯಾಲಯ ನಿರ್ದೇಶನ ನೀಡಿದೆ.
PublicNext
22/04/2026 09:02 am