ಸಕಲೇಶಪುರ ತಾಲೂಕು ವ್ಯಾಪ್ತಿಯ ದೇವಾಲಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೋಡಚಹಳ್ಳಿ (ಹಕ್ಕೆರಿ) ಪ್ರದೇಶದಲ್ಲಿ ಅರಣ್ಯ ಇಲಾಖೆಗೆ ಸೇರಿದ ಸರ್ವೇ ನಂ. 28 ಜಾಗದಲ್ಲಿ ಅಕ್ರಮವಾಗಿ ಗುಡಿಸಲುಗಳು ನಿರ್ಮಾಣವಾಗಿರುವುದು ಬೆಳಕಿಗೆ ಬಂದಿದ್ದು, ಈ ಘಟನೆ ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ.
ಮೂಲಗಳ ಪ್ರಕಾರ, ತಮಿಳುನಾಡು ಮೂಲದ ಕೆಲವರು ಅನಧಿಕೃತವಾಗಿ ಈ ಅರಣ್ಯ ಪ್ರದೇಶದಲ್ಲಿ ನೆಲೆಸಿರುವ ಶಂಕೆ ವ್ಯಕ್ತವಾಗಿದ್ದು, ಪ್ರಕರಣದ ಕುರಿತು ಸಮಗ್ರ ಮತ್ತು ಪಾರದರ್ಶಕ ತನಿಖೆ ನಡೆಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ) ಒತ್ತಾಯಿಸಿದೆ.
ಇದೇ ವೇಳೆ ಸ್ಥಳೀಯ ರೈತರಿಗೆ ಕರ್ನಾಟಕ ಅರಣ್ಯ ಕಾಯ್ದೆ 1963ರ ಕಲಂ 64(ಎ) ಅಡಿಯಲ್ಲಿ ನೋಟಿಸ್ ಜಾರಿಯಾಗುತ್ತಿರುವುದರಿಂದ ರೈತರಲ್ಲಿ ಭೀತಿ ಮತ್ತಷ್ಟು ಹೆಚ್ಚಾಗಿದೆ. ಒಂದೆಡೆ ರೈತರಿಗೆ ನೋಟಿಸ್ ನೀಡಲಾಗುತ್ತಿರುವಾಗ, ಇನ್ನೊಂದೆಡೆ ಅಕ್ರಮ ವಾಸಸ್ಥಳಗಳಿಗೆ ವಿದ್ಯುತ್, ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಒದಗಿಸಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದು ಕರವೇ ಆರೋಪಿಸಿದೆ.
ಈ ಪ್ರಕರಣದ ಹಿಂದೆ ಪ್ರಭಾವಿ ವ್ಯಕ್ತಿಗಳು ಹಾಗೂ ಸಂಬಂಧಿತ ಇಲಾಖಾ ಸಿಬ್ಬಂದಿಗಳ ಕೈವಾಡವಿರಬಹುದೆಂಬ ಶಂಕೆಯನ್ನು ಸಂಘಟನೆ ವ್ಯಕ್ತಪಡಿಸಿದ್ದು, ಸಂಪೂರ್ಣ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದೆ.
ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳದಿದ್ದಲ್ಲಿ ಉಪವಿಭಾಗಾಧಿಕಾರಿ ಕಚೇರಿ ಎದುರು ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳುವುದಾಗಿ ಕರವೇ ಎಚ್ಚರಿಕೆ ನೀಡಿದೆ.
ಈ ಬೆಳವಣಿಗೆ ಅರಣ್ಯ ಸಂರಕ್ಷಣೆ, ಕಾನೂನು ಪಾಲನೆ ಮತ್ತು ಸ್ಥಳೀಯರ ಹಕ್ಕುಗಳ ಕುರಿತು ಗಂಭೀರ ಚರ್ಚೆಗೆ ಕಾರಣವಾಗಿದ್ದು, ಸಂಬಂಧಿತ ಇಲಾಖೆಗಳು ಸೂಕ್ತ ಕ್ರಮ ಕೈಗೊಳ್ಳುವತ್ತ ಸಾರ್ವಜನಿಕರ ನಿರೀಕ್ಷೆ ಹೆಚ್ಚಾಗಿದೆ.
PublicNext
25/04/2026 04:00 pm
LOADING...