ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಾಗರ: ಭಾರಿ ಮಳೆಗೆ ಧರೆಗುರುಳಿದ ಬೃಹತ್ ಮರ - ಸಂಚಾರ ವ್ಯತ್ಯಯ, ಸಾರ್ವಜನಿಕರಿಗೆ ಎಚ್ಚರಿಕೆ

ಸಾಗರ: ನಗರದಲ್ಲಿ ಶನಿವಾರ ಸಂಜೆ ದಿಢೀರನೆ ಮಳೆರಾಯ ಅಬ್ಬರಿಸಿದ್ದಾನೆ. ಸರಿಸುಮಾರು ಎರಡು ಗಂಟೆಗಳ ಕಾಲ ಗುಡುಗು ಹಾಗೂ ಸಿಡಿಲು ಸಹಿತ ಸುರಿದ ಭಾರಿ ಮಳೆಗೆ ಇಡೀ ನಗರದ ಜನಜೀವನ ಸಂಪೂರ್ಣ ತತ್ತರಿಸಿ ಹೋಗಿದೆ. ಬೇಸಿಗೆಯ ಬಿಸಿಲಿನಿಂದ ಕಂಗೆಟ್ಟಿದ್ದ ಜನರಿಗೆ ಮಳೆಯು ತಂಪು ನೀಡಿದೆಯಾದರೂ, ನಗರದ ಹಲವೆಡೆ ಮಳೆಯ ಆರ್ಭಟ ಅವಾಂತರಗಳನ್ನು ಸೃಷ್ಟಿಸಿದೆ.

ನಗರದ ಸರ್ಕಾರಿ ಆಸ್ಪತ್ರೆಯ ಪಕ್ಕದ ರಸ್ತೆಯಲ್ಲಿ ಅನಾಹುತವೊಂದು ಸಂಭವಿಸಿದ್ದು, ಸರ್ಕಾರಿ ಆಸ್ಪತ್ರೆಯ ಕಾಂಪೌಂಡ್ ಒಳಭಾಗದಲ್ಲಿ ಇದ್ದ ಬೃಹತ್ ಗಾತ್ರದ ಹುಣಸೆ ಮರವೊಂದು ಭಾರಿ ಗಾಳಿಗೆ ಸಿಲುಕಿ ಧರೆಗೆ ಉರುಳಿದೆ. ಮರವು ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ಈ ಭಾಗದಲ್ಲಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಮರ ಬೀಳುವ ರಭಸಕ್ಕೆ ವಿದ್ಯುತ್ ತಂತಿಗಳು ತುಂಡಾಗಿ ರಸ್ತೆಯ ಮೇಲೆ ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಮರ ಮತ್ತು ವಿದ್ಯುತ್ ತಂತಿಗಳು ರಸ್ತೆಯ ಮೇಲೆ ಬಿದ್ದಿರುವುದರಿಂದ ಸೇಂಟ್ ಜೋಸೆಫ್ ದೇವಾಲಯದ ಮುಂಭಾಗದಿಂದ ಸರ್ಕಾರಿ ಆಸ್ಪತ್ರೆಗೆ ತೆರಳುವ ಸಾರ್ವಜನಿಕರು ಹಾಗೂ ವಾಹನ ಸವಾರರು ತೀವ್ರ ಸಂಕಷ್ಟ ಎದುರಿಸುವಂತಾಗಿದೆ.

ಸದ್ಯ ವಿದ್ಯುತ್ ತಂತಿಗಳು ಹರಿದು ಬಿದ್ದಿರುವುದರಿಂದ ರಸ್ತೆಯಲ್ಲಿ ಸಂಚರಿಸುವಾಗ ಸಾರ್ವಜನಿಕರು ಹೆಚ್ಚಿನ ಎಚ್ಚರಿಕೆ ವಹಿಸಬೇಕು ಎಂದು ಸ್ಥಳೀಯ ಆಡಳಿತ ಸೂಚಿಸಿದೆ. ಕಾಮಗಾರಿ ಮುಗಿಯುವವರೆಗೆ ಈ ರಸ್ತೆಯನ್ನು ಬಳಸುವವರು ಪರ್ಯಾಯ ಮಾರ್ಗಗಳನ್ನು ಅನುಸರಿಸಲು ಮತ್ತು ವಿದ್ಯುತ್ ಕಂಬಗಳ ಬಳಿ ಸುಳಿಯದಂತೆ ಜಾಗರೂಕರಾಗಿರಲು ವಿನಂತಿಸಲಾಗಿದೆ.

Edited By : PublicNext Desk
Kshetra Samachara

Kshetra Samachara

25/04/2026 09:24 pm

Cinque Terre

1.86 K

Cinque Terre

0

ಸಂಬಂಧಿತ ಸುದ್ದಿ