ಬಳ್ಳಾರಿ: ಜಿಲ್ಲೆಯ ಕಂಪ್ಲಿ ಪಟ್ಟಣದ 4ನೇ ವಾರ್ಡ್ನಲ್ಲಿ ಭಾನುವಾರ ಸಿಲಿಂಡರ್ ಸ್ಫೋಟ ಸಂಭವಿಸಿ ಮನೆಗೆ ವ್ಯಾಪಕ ಹಾನಿಯಾಗಿದೆ. ಕಾಂಗ್ರೆಸ್ ಕಾರ್ಯಕರ್ತ ಯಲ್ಲಪ್ಪ ಅವರಿಗೆ ಸೇರಿದ ಮನೆಯಲ್ಲಿ ಈ ಅವಘಡ ಸಂಭವಿಸಿದ್ದು, ಸ್ಫೋಟದ ತೀವ್ರತೆಗೆ ಮನೆಯಲ್ಲಿದ್ದ ಸಾಮಾನುಗಳು ಸಂಪೂರ್ಣ ಸುಟ್ಟು ಕರಕಲಾಗಿವೆ.
ಮಾಹಿತಿ ಪ್ರಕಾರ, ಮನೆಯಲ್ಲಿ ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಕ್ಷಣಾರ್ಧದಲ್ಲೇ ಬೆಂಕಿ ವ್ಯಾಪಿಸಿಕೊಂಡು ಮನೆಯನ್ನು ಆವರಿಸಿತು. ಬೆಂಕಿಯ ಕೆನ್ನಾಲಿಗೆಗೆ ಮನೆಯ ಮೇಲ್ಛಾವಣಿ ಸಂಪೂರ್ಣ ಸುಟ್ಟು ಹೋಗಿದ್ದು, ಒಳಗಿದ್ದ ಪೀಠೋಪಕರಣಗಳು, ಗೃಹೋಪಯೋಗಿ ವಸ್ತುಗಳು ಹಾಗೂ ಇತರೆ ಸಾಮಾನುಗಳು ಭಸ್ಮವಾಗಿವೆ.
ಸಿಲಿಂಡರ್ ಸ್ಫೋಟದ ಭಾರೀ ಸದ್ದಿಗೆ ಸ್ಥಳೀಯರು ಆತಂಕಗೊಂಡು ಹೊರಗೆ ಓಡಿ ಬಂದರು. ಘಟನೆ ನಡೆದ ತಕ್ಷಣ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿದ್ದು, ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಲು ಹರಸಾಹಸ ಪಟ್ಟರು. ಕೆಲಕಾಲ ಕಾರ್ಯಾಚರಣೆ ನಡೆಸಿದ ಬಳಿಕ ಬೆಂಕಿಯನ್ನು ನಿಯಂತ್ರಣಕ್ಕೆ ತಂದು ಮತ್ತಷ್ಟು ಅನಾಹುತ ತಪ್ಪಿಸಲಾಯಿತು.
ಅಗ್ನಿ ಅವಘಡದಿಂದ ಮನೆಗೆ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ. ಘಟನೆಯಿಂದ ಸುತ್ತಮುತ್ತಲಿನ ಮನೆ ನಿವಾಸಿಗಳಲ್ಲೂ ಕೆಲಕಾಲ ಭಯದ ವಾತಾವರಣ ನಿರ್ಮಾಣವಾಗಿತ್ತು.
ಸುದ್ದಿ ತಿಳಿದು ಕಂಪ್ಲಿ ಪೊಲೀಸ್ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಿಲಿಂಡರ್ ಸ್ಫೋಟಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ಮಾಹಿತಿ ಕಲೆ ಹಾಕುತ್ತಿದ್ದಾರೆ. ಅನಿಲ ಸೋರಿಕೆ ಕಾರಣವಾಗಿರಬಹುದೆಂಬ ಶಂಕೆ ವ್ಯಕ್ತವಾಗಿದ್ದು, ಅಧಿಕಾರಿಗಳು ತನಿಖೆ ಮುಂದುವರೆಸಿದ್ದಾರೆ.
ಸಮಯೋಚಿತವಾಗಿ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ ಪರಿಣಾಮ ದೊಡ್ಡ ಮಟ್ಟದ ದುರಂತ ತಪ್ಪಿದಂತಾಗಿದೆ. ಘಟನೆ ಕಂಪ್ಲಿ ಪಟ್ಟಣದಲ್ಲಿ ಆತಂಕ ಮೂಡಿಸಿದೆ.
PublicNext
27/04/2026 02:05 pm
LOADING...