ತುಮಕೂರು: ಮೇ 3 ರಂದು ನಡೆಯಲಿರುವ ನೀಟ್(ಯುಜಿ)–2026 ಪರೀಕ್ಷೆಯನ್ನು ಯಾವುದೇ ಅಡಚಣೆ ಇಲ್ಲದೆ ಪಾರದರ್ಶಕವಾಗಿ ಹಾಗೂ ವ್ಯವಸ್ಥಿತವಾಗಿ ನಡೆಸಲು ಅಗತ್ಯವಿರುವ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ನೀಟ್(ಯುಜಿ)–2026 ಪರೀಕ್ಷೆಯನ್ನು ತುಮಕೂರು ಜಿಲ್ಲೆಯ 13 ಪರೀಕ್ಷಾ ಕೇಂದ್ರಗಳಲ್ಲಿ ಸುಸೂತ್ರ, ಶಾಂತಿಯುತ ಹಾಗೂ ಪಾರದರ್ಶಕವಾಗಿ ನಡೆಸುವ ಸಂಬಂಧ ಸೋಮವಾರ ನಡೆದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಿಶೇಷವಾಗಿ ಪರೀಕ್ಷಾ ಕೇಂದ್ರಗಳ ಪ್ರವೇಶ ದ್ವಾರಗಳ ಬಳಿ ಅನಧಿಕೃತ ವ್ಯಕ್ತಿಗಳು, ಅನಗತ್ಯ ಗುಂಪು ಸೇರುವಿಕೆ ಅಥವಾ ಅಕ್ರಮ ಚಟುವಟಿಕೆಗಳಿಗೆ ಅವಕಾಶ ನೀಡದಂತೆ ಶಿಕ್ಷಣ ಇಲಾಖೆ ಮತ್ತು ಪೊಲೀಸ್ ಇಲಾಖೆಗೆ ಕಟ್ಟುನಿಟ್ಟಿನ ಭದ್ರತಾ ಕ್ರಮ ಜರುಗಿಸಲು ನಿರ್ದೇಶನ ನೀಡಿದರು.
ಅಲ್ಲದೆ, ಪರೀಕ್ಷಾರ್ಥಿಗಳು ನಿಗದಿತ ಸಮಯದೊಳಗೆ ಪರೀಕ್ಷಾ ಕೇಂದ್ರಗಳಿಗೆ ಸುಗಮವಾಗಿ ಆಗಮಿಸಿ ಪರೀಕ್ಷೆಗೆ ಹಾಜರಾಗಲು ಅಗತ್ಯ ಸಾರಿಗೆ, ಮಾರ್ಗದರ್ಶನ ಹಾಗೂ ಪರೀಕ್ಷಾ ಕೇಂದ್ರಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸುವಂತೆ ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಿದರು.
ಪರೀಕ್ಷಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆ ಉಂಟಾಗದಂತೆ ಎಲ್ಲಾ ಇಲಾಖೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ನೀಟ್ (ಯುಜಿ)–2026 ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸುವಂತೆ ಜಿಲ್ಲಾಧಿಕಾರಿಗಳು ತಿಳಿಸಿದರು.
ಕೇಂದ್ರೀಯ ವಿದ್ಯಾಲಯದ ಪ್ರಾಂಶುಪಾಲ ಮನೀಶ್ ಅವರು ನೀಟ್ ಪರೀಕ್ಷೆ ಯಶಸ್ವಿ ನಿರ್ವಹಣೆಗೆ ಕೈಗೊಳ್ಳಬೇಕಾದ ಕ್ರಮಗಳು, ಪರೀಕ್ಷಾ ಕೇಂದ್ರಗಳ ಸಿದ್ಧತೆ, ಭದ್ರತಾ ವ್ಯವಸ್ಥೆ ಹಾಗೂ ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ ನಿರ್ಮಾಣ ಕುರಿತಾದ ಹಲವಾರು ವಿಷಯಗಳನ್ನು ಸಭೆಯ ಗಮನಕ್ಕೆ ತಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ, ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.
PublicNext
28/04/2026 08:45 am