ಹುಬ್ಬಳ್ಳಿ: ವಿದ್ಯಾರ್ಥಿಗಳಿಗೆ ಮೂಲಭೂತ ಸೌಕರ್ಯಗಳು ಸಮರ್ಪಕವಾಗಿ ದೊರೆಯುತ್ತಿಲ್ಲ ಎಂಬ ದೂರುಗಳ ಹಿನ್ನೆಲೆ ಹುಬ್ಬಳ್ಳಿ–ಧಾರವಾಡ ಅವಳಿನಗರದ 17 ವಸತಿ ನಿಲಯಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಬುಧವಾರ ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದರು.
ಲೋಕಾಯುಕ್ತ ಎಸ್ಪಿ ಸಿದ್ದಲಿಂಗಪ್ಪ ಅವರ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು, ಹುಬ್ಬಳ್ಳಿಯ ಲಿಂಗರಾಜನಗರದ ತೋಳನಕೇರಿಯಲ್ಲಿರುವ ವಸತಿ ನಿಲಯವನ್ನೂ ಅಧಿಕಾರಿಗಳು ಪರಿಶೀಲಿಸಿದರು. ಡಿವೈಎಸ್ಪಿ ವಿಜಯ ಬಿರಾದರ್ ನೇತೃತ್ವದ ತಂಡ ವಿದ್ಯಾರ್ಥಿಗಳಿಂದ ಮಾಹಿತಿ ಸಂಗ್ರಹಿಸಿತು.
ವಿದ್ಯಾರ್ಥಿಗಳು ‘ಸರಿಯಾದ ಊಟ ನೀಡುವುದಿಲ್ಲ, ವಸತಿ ಸೌಲಭ್ಯಗಳು ಸಮರ್ಪಕವಾಗಿಲ್ಲ’ ಎಂದು ಅಧಿಕಾರಿಗಳ ಮುಂದೆ ಅಳಲು ತೋಡಿಕೊಂಡರು. ಈ ಕುರಿತು ಸಂಪೂರ್ಣ ವರದಿಯನ್ನು ಲೋಕಾಯುಕ್ತ ಎಸ್ಪಿಗೆ ಸಲ್ಲಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಒಟ್ಟು 17 ತಂಡಗಳು ದಾಳಿ ನಡೆಸಿದ್ದು, ಅವುಗಳಲ್ಲಿ 7 ಬಿಸಿಎಂ ವಸತಿ ನಿಲಯಗಳು, 7 ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಗಳು ಹಾಗೂ 3 ಅಲ್ಪಸಂಖ್ಯಾತರ ವಸತಿ ನಿಲಯಗಳು ಸೇರಿವೆ.
ದಾವಣಗೆರೆ, ಹಾವೇರಿ, ಗದಗ, ಬೆಳಗಾವಿ ಹಾಗೂ ಧಾರವಾಡ ಜಿಲ್ಲೆಗಳ ಅಧಿಕಾರಿಗಳು ದಾಳಿಯಲ್ಲಿ ಭಾಗವಹಿಸಿದ್ದರು. ಹಾಸ್ಟೆಲ್ಗಳಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ ಬಗ್ಗೆ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡ ಲೋಕಾಯುಕ್ತ ಇಲಾಖೆ, ಉನ್ನತ ಅಧಿಕಾರಿಗಳ ಸೂಚನೆಯಂತೆ ಪರಿಶೀಲನೆ ನಡೆಸಿದೆ.
ಜೂನ್ ತಿಂಗಳಲ್ಲಿ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ ನೀಡಲಾಗಿದ್ದು, ಪ್ರಾಥಮಿಕ ವರದಿಯನ್ನು ಇಂದೇ ಎಸ್ಪಿಗೆ ಸಲ್ಲಿಸಲಾಗುತ್ತದೆ ಎಂದು ತಿಳಿದುಬಂದಿದೆ.
ಸಂತೋಷ್ ಪಬ್ಲಿಕ್ ನೆಕ್ಸ್ಟ್ ಹುಬ್ಬಳ್ಳಿ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
29/04/2026 02:29 pm
LOADING...