ಸಾಗರ: ತಾಲೂಕಿನಾದ್ಯಂತ ದಿನದಿಂದ ದಿನಕ್ಕೆ ತಾಪಮಾನ ಏರಿಕೆಯಾಗುತ್ತಿದ್ದು, ಬಿಸಿಲ ಪ್ರಖರತೆಯಿಂದಾಗಿ ಸಾರ್ವಜನಿಕರು ಬಿಸಿಲಘಾತ (Heat Stroke) ಮತ್ತು ನಿರ್ಜಲೀಕರಣ (Dehydration) ಸಮಸ್ಯೆಗಳಿಗೆ ತುತ್ತಾಗುವ ಆತಂಕ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಸಾಗರ ತಾಲೂಕು ಆರೋಗ್ಯಾಧಿಕಾರಿ ಡಾ. ಶ್ರೀನಿವಾಸ್ ಅವರು ಪ್ರಮುಖ ಆರೋಗ್ಯ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದಾರೆ.
ಬಾಯಾರಿಕೆ ಇಲ್ಲದಿದ್ದರೂ ಆಗಾಗ ನೀರು ಕುಡಿಯುವುದು, ಎಳನೀರು, ಮಜ್ಜಿಗೆ ಹಾಗೂ ಹಣ್ಣಿನ ರಸಗಳ ಸೇವನೆಯ ಮೂಲಕ ದೇಹದ ಉಷ್ಣತೆಯನ್ನು ಕಾಪಾಡಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ. ಅಲ್ಲದೆ, ನೀರಿನಂಶ ಹೆಚ್ಚಿರುವ ಕಲ್ಲಂಗಡಿ ಮತ್ತು ಸೌತೆಕಾಯಿಯಂತಹ ಹಣ್ಣುಗಳನ್ನು ಆಹಾರದಲ್ಲಿ ಅಳವಡಿಸಿಕೊಳ್ಳಲು ವೈದ್ಯರು ಸಲಹೆ ನೀಡಿದ್ದಾರೆ.
ಬೇಸಿಗೆಯ ತೀವ್ರತೆಯಿಂದ ರಕ್ಷಿಸಿಕೊಳ್ಳಲು ಮಧ್ಯಾಹ್ನ 12 ರಿಂದ 3 ಗಂಟೆಯವರೆಗೆ ಅನಗತ್ಯವಾಗಿ ಹೊರಗೆ ಓಡಾಡುವುದನ್ನು ತಪ್ಪಿಸಬೇಕು ಮತ್ತು ಅನಿವಾರ್ಯ ಸಂದರ್ಭಗಳಲ್ಲಿ ಹತ್ತಿ ಬಟ್ಟೆ, ಛತ್ರಿ ಹಾಗೂ ಟೋಪಿಗಳನ್ನು ಬಳಸಬೇಕು ಎಂದು ತಿಳಿಸಲಾಗಿದೆ. ವಿಶೇಷವಾಗಿ ಮಕ್ಕಳು, ವಯೋವೃದ್ಧರು ಹೆಚ್ಚಿನ ಕಾಳಜಿ ವಹಿಸಬೇಕಾಗಿದ್ದು, ಕಾಫಿ, ಟೀ ಮತ್ತು ಆಲ್ಕೋಹಾಲ್ ಸೇವನೆ ಕಡಿಮೆ ಮಾಡುವಂತೆ ಸೂಚಿಸಲಾಗಿದೆ. ತಾಲೂಕಿನ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಓ.ಆರ್.ಎಸ್ (ORS) ಕಾರ್ನರ್ಗಳನ್ನು ತೆರೆಯಲಾಗಿದ್ದು, ನಿರ್ಜಲೀಕರಣದ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಚಿಕಿತ್ಸೆ ಪಡೆಯುವಂತೆ ಆರೋಗ್ಯ ಇಲಾಖೆ ಮನವಿ ಮಾಡಿದೆ.
ಜಮೀಲ್ ಸಾಗರ್ “ಪಬ್ಲಿಕ್ ನೆಕ್ಸ್ಟ್ ಸಾಗರ”
Kshetra Samachara
29/04/2026 05:39 pm
LOADING...