ಮಡಿಕೇರಿ : ಫಲಾನುಭವಿಗಳ ಹಿತರಕ್ಷಣೆ ಅಧಿಕಾರಿಗಳ ಆದ್ಯ ಕರ್ತವ್ಯ ಆಗಬೇಕು. ಆ ನಿಟ್ಟಿನಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಕರ್ತವ್ಯ ನಿರ್ವಹಿಸುವ ಮೂಲಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯನ್ನು ಸಮರ್ಪಕವಾಗಿ ತಲುಪಿಸುವಂತೆ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ತಾಲ್ಲೂಕು ಅಧ್ಯಕ್ಷರಾದ ಎಂ.ಜಿ.ಮೋಹನ್ ದಾಸ್ ಅವರು ಹೇಳಿದ್ದಾರೆ.
ನಗರದ ತಾಲ್ಲೂಕು ಪಂಚಾಯಿತಿ ಸಾಮಥ್ರ್ಯ ಸೌಧದಲ್ಲಿ ನಡೆದ ಮಡಿಕೇರಿ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದಂತೆ ಮಡಿಕೇರಿ ತಾಲ್ಲೂಕಿನಲ್ಲಿ ಒಟ್ಟು 38,270 ಪಡಿತರ ಚೀಟಿ ಇದ್ದು, 1,20,974 ಒಟ್ಟು ಫಲಾನುಭವಿಗಳಿದ್ದಾರೆ. ಅದರಲ್ಲಿ 1902 ಎಎವೈ ಪಡಿತರ ಚೀಟಿ ಇದ್ದು, 7569 ಎಎವೈ ಫಲಾನುಭವಿಗಳು ಇದ್ದಾರೆ. 21,697 ಪಿಹೆಚ್ಹೆಚ್ ಪಡಿತರ ಚೀಟಿ ಇದ್ದು, 70,196 ಫಲಾನುಭವಿಗಳು, 14,671 ಎನ್ಪಿಹೆಚ್ಹೆಚ್ ಪಡಿತರ ಚೀಟಿ ಇದ್ದು, 43,206 ಫಲಾನುಭವಿಗಳಿದ್ದಾರೆ ಎಂದು ಆಹಾರ ನಿರೀಕ್ಷಕರಾದ ವಿ.ಪಿ.ವೀಣಾ ಅವರು ಸಭೆಗೆ ಮಾಹಿತಿ ನೀಡಿದರು.
ಅಲ್ಲದೇ ಮಡಿಕೇರಿ ತಾಲ್ಲೂಕಿನಲ್ಲಿರುವ ಅನರ್ಹ ಫಲಾನುಭವಿಗಳ ಸಂಖ್ಯೆ 1375 ಆಗಿದ್ದು, ವೈದ್ಯಕೀಯ ಸೌಲಭ್ಯಕ್ಕಾಗಿ ಹೊಸ ಪಡಿತರ ಚೀಟಿಗಳಿಗೆ ಅರ್ಜಿ ಸಲ್ಲಿಸುವುದನ್ನು ಮತ್ತು ಈಗಾಗಲೇ ಪ್ರಸ್ತುತ ಚಾಲ್ತಿಯಲ್ಲಿರುವ ಪಡಿತರ ಚೀಟಿಗಳಲ್ಲಿ ವಿಳಾಸ ಬದಲಾವಣೆ, ಹೆಸರು ಸೇರ್ಪಡೆ ಮಾಡುವ ಪ್ರಕ್ರೀಯೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಆದಾಯ ತೆರಿಗೆ ಪಾವತಿದಾರರೆಂದು ಅನರ್ಹಗೊಂಡಿದ್ದ ಬಿಪಿಎಲ್ ಪಡಿತರ ಫಲಾನುಭವಿಗಳಲ್ಲಿ 168 ಫಲಾನುಭವಿಗಳು ಬಿಪಿಎಲ್ ಪಡಿತರ ಚೀಟಿ ಪಡೆಯಲು ಅರ್ಹರಾಗಿರುತ್ತಾರೆ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದ್ದು, ಅದರಲ್ಲಿ 151 ಪಡಿತರ ಚೀಟಿಗಳನ್ನು ಎಪಿಎಲ್ ಪಡಿತರ ಚೀಟಿಯಿಂದ ಬಿಪಿಎಲ್ ಪಡಿತರ ಚೀಟಿಗೆ ಬದಲಾಯಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ವಿ.ಪಿ.ವೀಣಾ ತಿಳಿಸಿದರು.
Kshetra Samachara
30/04/2026 06:47 am