ಚಿಕ್ಕಮಗಳೂರು: ಕಾಫಿನಾಡಿನ ರೈತರು ಸಕಾಲಕ್ಕೆ ಯೂರಿಯಾ ಗೊಬ್ಬರ ಸಿಗದೆ ಸಂಕಷ್ಟ ಎದುರಿಸುತ್ತಿರುವ ಬೆನ್ನಲ್ಲೇ, ಮಧ್ಯವರ್ತಿಗಳು ಅಕ್ರಮವಾಗಿ ಗೊಬ್ಬರ ದಾಸ್ತಾನು ಮಾಡಿರುವುದು ಪತ್ತೆಯಾಗಿದ್ದು ಅಕ್ರಮ ದಂಧೆಕೋರರಿಗೆ ಕೃಷಿ ಇಲಾಖೆ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಜಿಲ್ಲೆಯ ಕೆಸವಿನಮನೆ ಗ್ರಾಮದಲ್ಲಿರುವ ಕೋಳಿ ಫಾರ್ಮ್ ಮೇಲೆ ಕೃಷಿ ಇಲಾಖೆ ಅಧಿಕಾರಿ ತಿರುಮಲೇಶ್ ಅವರ ನೇತೃತ್ವದಲ್ಲಿ ಮಿಂಚಿನ ದಾಳಿ ನಡೆಸಲಾಗಿದ್ದು, ಈ ವೇಳೆ ಕೃಷಿ ಬಳಕೆಯ ರಸಗೊಬ್ಬರವನ್ನು ಅಕ್ರಮವಾಗಿ ಸಂಗ್ರಹಿಸಿರುವುದು ಬೆಳಕಿಗೆ ಬಂದಿದೆ.
ದಾಳಿಯ ಸಂದರ್ಭದಲ್ಲಿ ಸುಮಾರು 181 ಚೀಲ ಮೂಲ ಯೂರಿಯಾ ಹಾಗೂ ಕೈಗಾರಿಕಾ ಉದ್ದೇಶಕ್ಕಾಗಿ ರೀಪ್ಯಾಕಿಂಗ್ ಮಾಡಲಾಗಿದ್ದ 218 ಚೀಲಗಳು ಸೇರಿದಂತೆ ಒಟ್ಟು 399 ಯೂರಿಯಾ ಚೀಲಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಕೋಳಿ ಫಾರ್ಮ್ ಮಾಲೀಕ ರಾಜೇಶ್ ಎಂಬಾತ ಕೃಷಿ ಬಳಕೆಯ ಯೂರಿಯಾವನ್ನು ಲಾಭದ ಉದ್ದೇಶಕ್ಕಾಗಿ ಅಕ್ರಮವಾಗಿ ದಾಸ್ತಾನು ಮಾಡಿ ರೀಪ್ಯಾಕಿಂಗ್ ಮಾಡುತ್ತಿದ್ದ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಆರೋಪಿ ರಾಜೇಶ್ ವಿರುದ್ಧ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೃಷಿ ಇಲಾಖೆ ಅಧಿಕಾರಿಗಳು ಕಠಿಣ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ.
Kshetra Samachara
30/04/2026 12:47 pm
LOADING...