ಭೋಪಾಲ್: ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 15 ಮಂದಿ ಮೃತಪಟ್ಟು, 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ನಿಯಂತ್ರಣ ತಪ್ಪಿ ಡಿವೈಡರ್ ಹಾರಿ ಪಲ್ಟಿ ಹೊಡೆದ ಪಿಕಪ್ ವಾಹನವೊಂದು ಎಸ್ಯುವಿ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.
ಬುಧವಾರ ರಾತ್ರಿ 10:30ರ ಸುಮಾರಿಗೆ, ತಿರ್ಲಾ ಪೊಲೀಸ್ ಠಾಣೆ ವ್ಯಾಪ್ತಿಯ ಚಿಕ್ಲಿಯಾ ಬೈಪಾಸ್ ಬಳಿಯ ಇಂದೋರ್-ಅಹಮದಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಸುಮಾರು 46 ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಪಿಕಪ್ ವಾಹನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ.
ದಿನಗೂಲಿ ಕಾರ್ಮಿಕರು ಲೆಬಾದ್ ಪಟ್ಟಣದಿಂದ ಕೆಲಸ ಮುಗಿಸಿ ತಿರ್ಲಾ ಬಳಿಯ ಸೆಮ್ಲಿಪುರ ಗ್ರಾಮಕ್ಕೆ ಹಿಂತಿರುಗುತ್ತಿದ್ದಾಗ ಈ ದುರಂತ ಸಂಭವಿಸಿದೆ. ಪಿಕಪ್ ವಾಹನ ಡಿವೈಡರ್ ಹಾರಿ, ಹೆದ್ದಾರಿಯ ಇನ್ನೊಂದು ಬದಿಗೆ ನುಗ್ಗಿ ಎದುರಿನಿಂದ ಬರುತ್ತಿದ್ದ ಎಸ್ಯುವಿ ಕಾರಿಗೆ ಡಿಕ್ಕಿ ಹೊಡೆದಿದೆ. ಎಸ್ಯುವಿ ಕಾರಿನಲ್ಲಿದ್ದವರಿಗೆ ಯಾವುದೇ ಹಾನಿಯಾಗಿಲ್ಲವಾದರೂ, ಪಿಕಪ್ನಲ್ಲಿದ್ದ ಅನೇಕ ಕಾರ್ಮಿಕರು ವಾಹನದ ಅಡಿಯಲ್ಲಿ ಸಿಲುಕಿ ಮೃತಪಟ್ಟಿದ್ದಾರೆ ಎಂದು ಇಂದೋರ್ (ಗ್ರಾಮೀಣ) ಡಿಐಜಿ ಮನೋಜ್ ಕುಮಾರ್ ಸಿಂಗ್ ತಿಳಿಸಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಈ ಘಟನೆಯ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಸ್ಥರು ಹಾಗೂ ಗಾಯಾಳುಗಳಿಗೆ ಆರ್ಥಿಕ ನೆರವನ್ನು ಘೋಷಿಸಿದ್ದಾರೆ. "ಮಧ್ಯಪ್ರದೇಶದ ಧಾರ್ನಲ್ಲಿ ನಡೆದ ಅಪಘಾತದಲ್ಲಿ ಜೀವಹಾನಿಯಾದ ಸುದ್ದಿ ಕೇಳಿ ತೀವ್ರ ನೋವುಂಟಾಗಿದೆ.
ಈ ಅಪಘಾತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಮೃತರ ಸಂಬಂಧಿಕರಿಗೆ ಪಿಎಂ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ 50,000 ರೂ. ಆರ್ಥಿಕ ನೆರವು ನೀಡಲಾಗುವುದು" ಎಂದು ಮೋದಿ ಎಕ್ಸ್ನಲ್ಲಿ ತಿಳಿಸಿದ್ದಾರೆ.
PublicNext
30/04/2026 02:57 pm