ಬೆಳಗಾವಿ: ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನ ಯರಡಾಲ ಕ್ರಾಸ್ ಬಳಿ ಶನಿವಾರ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಚಲಿಸುತ್ತಿದ್ದ ಲಾರಿಯಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡ ಪರಿಣಾಮ, ನೂರಾರು ಚೀಲ ಗೋವಿನಜೋಳ ಬೆಂಕಿಗೆ ಆಹುತಿಯಾಗಿದೆ. ಚಾಲಕ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ನರಗುಂದದಿಂದ ಬೆಳಗಾವಿ ಕಡೆಗೆ ಸುಮಾರು 620 ಚೀಲ ಗೋವಿನಜೋಳ ತುಂಬಿಕೊಂಡು ಬರುತ್ತಿದ್ದ ಲಾರಿಯಲ್ಲಿ ಈ ಅವಘಡ ನಡೆದಿದೆ. ಹುಬ್ಬಳ್ಳಿ ಮೂಲದ ಶರೀಫ ಅಹ್ಮದ್ ಮುಲ್ಲಾ ಅವರಿಗೆ ಸೇರಿದ ಲಾರಿ ಇದಾಗಿದ್ದು, ಬ್ಯಾಟರಿ ಶಾರ್ಟ್ ಸರ್ಕ್ಯೂಟ್ನಿಂದಾಗಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ಬಿಸಿಲಿನ ತಾಪ ಹೆಚ್ಚಿದ್ದರಿಂದ ಬೆಂಕಿ ಕ್ಷಣಾರ್ಧದಲ್ಲಿ ಲಾರಿಯನ್ನೆಲ್ಲಾ ಆವರಿಸಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಧಾನ್ಯ ಸಂಪೂರ್ಣ ಸುಟ್ಟು ಕರಕಲಾಗಿದೆ.
ಸಮಯಪ್ರಜ್ಞೆ ಮೆರೆದ ಚಾಲಕ: ಲಾರಿಯಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಚಾಲಕ ತಕ್ಷಣ ಕೆಳಕ್ಕೆ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾನೆ. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಬೈಲಹೊಂಗಲ ಪೊಲೀಸರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಘಟನೆಯಿಂದಾಗಿ ಹೆದ್ದಾರಿಯಲ್ಲಿ ದಟ್ಟವಾದ ಹೊಗೆ ಆವರಿಸಿ ಸಂಚಾರಕ್ಕೆ ತುಸು ಅಡಚಣೆಯಾಗಿತ್ತು. ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
02/05/2026 07:56 pm
LOADING...