ಬೆಳಗಾವಿ: ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಬೆಳಗಾವಿ ತಾಲೂಕಿನ ಕಾರ್ಲೆ ಗ್ರಾಮದ ವೀರ ಯೋಧ ಸ್ವ ಗ್ರಾಮಕ್ಕೆ ಆಗಮಿಸುತ್ತಿದ್ದ ವೇಳೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
ರಾಮಚಂದ್ರ ಪಾಟೀಲ್ ಮೃತ ಯೋಧ, ರಾಮಚಂದ್ರ ಅವರು ಹರಿಯಾಣಾದಲ್ಲಿ ಭಾರತೀಯ ಸೇನೆಯಲ್ಲಿ ಸುಬೇದಾರರಾಗಿ ಸೇವೆ ಸಲ್ಲಿಸುತ್ತಿದ್ದರು. ಹರಿಯಾಣದ ಅಂಬಾಲಾದಿಂದ ಶುಕ್ರವಾರ ತವರಿಗೆ ಕಾರಿನಲ್ಲಿ ಆಗಮಿಸುತ್ತಿದ್ದಾಗ ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯ ಗರೋಠ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಕಾರು ಮುಂದೆ ಚಲಿಸುತ್ತಿದ್ದ ಟ್ರಕ್ಗೆ ಹಿಂಬದಿಯಿಂದ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಅಪಘಾತದ ಸಮಯದಲ್ಲಿ ಅವರ ಮಾವ ಗೋವಿಂದ ಪಾಟೀಲ್ ಅವರು ಕಾರಿನಲ್ಲಿದ್ದರು. ಅವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮರಣೋತ್ತರ ಪರೀಕ್ಷೆಯ ನಂತರ ಯೋಧನ ಪಾರ್ಥಿವ ಶರೀರವನ್ನು ಆಂಬ್ಯುಲೆನ್ಸ್ ಮೂಲಕ ಇಂದು ಬೆಳಗಾವಿಗೆ ತರಲಾಯಿತು. ಯೋಧನ ಪಾರ್ಥಿವ ಶರೀರ ಕಾರ್ಲೆ ಗ್ರಾಮಕ್ಕೆ ಆಗಮಿಸುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತು. ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಆಗಮಿಸಿದ ಜನ ಜಯ ಘೋಷದೊಂದಿಗೆ ಅಂತಿಮ ನಮನ ಸಲ್ಲಿಸಿದರು. ಗ್ರಾಮದಲ್ಲಿ ಮೆರವಣಿಗೆ ನಡೆಸಿ ಪುಷ್ಪವೃಷ್ಟಿ ಸುರಿಸಲಾಯಿತು. ಸಕಲ ಸರ್ಕಾರಿ ಗೌರವದೊಂದಿಗೆ ಅಂತಿಮ ವಿಧಿವಿಧಾನ ನಡೆಸಲಾಯಿತು.
PublicNext
03/05/2026 09:20 pm
LOADING...