ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಿಡಿಓ ಮುಕ್ತಂ ಹುಸೇನ್ ಆತ್ಮಹತ್ಯೆ ಪ್ರಕರಣದ ಸಮಗ್ರ ತನಿಖೆ ಆಗ್ರಹಿಸಿ ಪ್ರತಿಭಟನೆ

ಧಾರವಾಡ : ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಮೇಲಿನ ಅಮಾನವೀಯ ಕೆಲಸದ ಒತ್ತಡ, ಬಾಕಿ ವೇತನ ಬಿಡುಗಡೆ ವಿಳಂಬ ಹಾಗೂ ಮಾನಸಿಕ ಕಿರುಕುಳದಿಂದಾಗಿ ಕೊತಬಾಲ ಗ್ರಾಮ ಪಂಚಾಯಿತಿ ಪಿಡಿಓ ಮುಕ್ತುಂಹುಸೇನ್ ಕರಡಿಗುಡ್ಡ ಆತ್ಮಹತ್ಯೆ ಪ್ರಕರಣದ ಸಮಗ್ರ ತನಿಖೆ ಆಗ್ರಹಿಸಿ ರಾಜ್ಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಧಾರವಾಡ ಜಿಲ್ಲಾ ಪಂಚಾಯಿತಿ ಎದುರು ಪ್ರತಿಭಟನೆ ನಡೆಸಿದ ಪಿಡಿಓಗಳು, ಇತ್ತೀಚೆಗೆ ತಾಲೂಕಿನ ಅಸೂಟಿ ಹಾಗೂ ಕೊತಬಾಲ ಎರಡು ಗ್ರಾಪಂ ಅಧಿಕಾರಿಯಾಗಿ (ಹೆಚ್ಚುವರಿ ಪ್ರಭಾರ ಸೇರಿ) ಕರ್ತವ್ಯ ನಿರ್ವಹಿಸುತ್ತಿದ್ದ ಮುಕ್ತುಂಹುಸೇನ್ ಕರಡಿಗುಡ್ಡ ಅತಿಯಾದ ಕೆಲಸದ ಒತ್ತಡ, ಹಿಂದಿನ ಪ್ರಕರಣವೊಂದರ ಮೇಲಿದ್ದ ಲೋಕಾಯುಕ್ತ ತನಿಖೆ ಹಾಗೂ ವೇತನವಿಲ್ಲದೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಈ ಹಿಂದೆ ಧಾರವಾಡ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾಗ ದಾಖಲಾಗಿದ್ದ ಪ್ರಕರಣದ ಹಿನ್ನೆಲೆಯಲ್ಲಿ ಅಮಾನತುಗೊಂಡು, ಕಳೆದ ಒಂಬತ್ತು ತಿಂಗಳುಗಳಿಂದ ಅವರಿಗೆ ಯಾವುದೇ ವೇತನವಾಗಿರಲಿಲ್ಲ. ಎರಡು ತಿಂಗಳುಗಳ ಹಿಂದೆಯಷ್ಟೇ ಅವರು ಕರ್ತವ್ಯಕ್ಕೆ ಹಾಜರಾಗಿದ್ದರು.

ವೇತನವಿಲ್ಲದೆ ಸಂಸಾರ ಸಾಗಿಸಲು ಕಷ್ಟವಾಗಿ, ಅವರ ಪತ್ನಿ ಉದ್ಯೋಗ ಅರಸಿ ಬೆಂಗಳೂರಿಗೆ ಹೋಗುವಂತಹ ಚಿಂತಾಜನಕ ಸ್ಥಿತಿ ಅವರ ಕುಟುಂಬಕ್ಕೊದಗಿತ್ತು.

ಇದಲ್ಲದೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತಿ ರಾಜ್ ಇಲಾಖೆಯ ನೌಕರರ ಮೇಲೆ ನಡೆಯುತ್ತಿರುವ ನಿರಂತರ ಒತ್ತಡಗಳು ಹಾಗೂ ಸಂಭವಿಸುತ್ತಿರುವ ಅಕಾಲಿಕ ಸಾವುಗಳ ಕುರಿತು ಅಧ್ಯಯನ ಮಾಡಲು ಕಳೆದ ಒಂದು ವರ್ಷದ ಹಿಂದೆ ಮಾನ್ಯ ಮೀನಾಕ್ಷಿ ಸುಂದರಂ ಅವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿತ್ತು. ಆದರೆ ಈ ಸಮಿತಿಯು ಇದುವರೆಗೂ ಸರ್ಕಾರಕ್ಕೆ ವರದಿ ಸಲ್ಲಿಸಿರುವುದಿಲ್ಲ ಎಂದು ಸಂಘವು ಸರ್ಕಾರಕ್ಕೆ ಸಲ್ಲಿಸಿದ ಮನವಿಯಲ್ಲಿ ತಿಳಿಸಲಾಗಿದೆ.

ವರದಿ: ಮಂಜುನಾಥ ಕವಳಿ ಪಬ್ಲಿಕ್ ನೆಕ್ಸ್ಟ್ ಧಾರವಾಡ.

Edited By : Vinayak Patil
Kshetra Samachara

Kshetra Samachara

04/05/2026 08:44 pm

Cinque Terre

46.96 K

Cinque Terre

1

ಸಂಬಂಧಿತ ಸುದ್ದಿ