ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ: ಅತ್ತೆಗೆ ಚಾಕು ಚುಚ್ಚಿ ವಾಟ್ಸಾಪ್ ಸ್ಟೇಟಸ್ ಹಾಕಿದ ಅಳಿಯ..!

ಬೆಳಗಾವಿ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಯ ತಾಯಿಗೆ ಯುವಕನೊಬ್ಬ ಚಾಕುವಿನಿಂದ ಇರಿದು ಬಳಿಕ ವಾಟ್ಸಾಪ್ ಸ್ಟೇಟಸ್ ನಲ್ಲಿ ವಿಕೃತವಾಗಿ ಬರೆದುಕೊಂಡಿರುವ ಘಟನೆ ಬೆಳಗಾವಿ ಸವದತ್ತಿ ತಾಲೂಕಿನ ಆಲದಕಟ್ಟಿ ಗ್ರಾಮದಲ್ಲಿ ನಡೆದಿದೆ.

ಮಹಾದೇವಿ ಕರಿಗಾರ (45) ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದು, ಆರೋಪಿ ಅರವಿಂದ ಗವಳಿ (26) ಎಂಬಾತನನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಸುಮಾರು ಒಂದೂವರೆ ವರ್ಷದ ಹಿಂದೆ ಮಹಾದೇವಿಯ ಮಗಳನ್ನು ಅರವಿಂದ ಗವಳಿಗೆ ಮದುವೆ ಮಾಡಲಾಗಿತ್ತು. ಎರಡು ತಿಂಗಳ ಹಿಂದೆ ಮಗಳಿಗೆ ಹೆರಿಗೆಯಾಗಿದ್ದು, ಅವಳು ತವರು ಮನೆಯಲ್ಲಿ ವಾಸವಾಗಿದ್ದಳು. ಈ ಮಧ್ಯೆ ಅರವಿಂದ ತನ್ನ ಪತ್ನಿಗೆ ಪದೇಪದೇ ವಿಡಿಯೋ ಕಾಲ್ ಮಾಡಿ ಮಗುವನ್ನು ತೋರಿಸುವಂತೆ ಒತ್ತಾಯ ಮಾಡುತ್ತಿದ್ದನೆಂದು ತಿಳಿದುಬಂದಿದೆ.

ಮನೆಯ ಕೆಲಸಗಳಲ್ಲಿ ನಿರತರಾಗಿದ್ದ ಕಾರಣ ನಿರಂತರವಾಗಿ ಮೊಬೈಲ್ ಬಳಸಲು ಸಾಧ್ಯವಿಲ್ಲ ಎಂದು ಮಹಾದೇವಿ ಅಳಿಯನಿಗೆ ತಿಳಿಸಿದ್ದಳು. ಈ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆ ವಾಗ್ವಾದ ಉಂಟಾಗಿ, ಅರವಿಂದ ಅವಾಚ್ಯವಾಗಿ ನಿಂದನೆ ನಡೆಸಿದ್ದಾನೆ ಎನ್ನಲಾಗಿದೆ. ಅಲ್ಲದೆ, ತನ್ನ ಮನೆಗೆ ಬಂದರೆ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಮಹಾದೇವಿ ಎಚ್ಚರಿಕೆ ನೀಡಿದ್ದಳು ಎಂದು ಹೇಳಲಾಗಿದೆ.

ಈ ಘಟನೆಗೆ ಸಂಬಂಧಿಸಿದಂತೆ ಸೇಡು ತೀರಿಸಿಕೊಳ್ಳಲು ನಿರ್ಧರಿಸಿದ ಅರವಿಂದ, ಆಲದಕಟ್ಟಿ ಗ್ರಾಮದಲ್ಲಿರುವ ಮಹಾದೇವಿಯ ಮನೆಗೆ ಬಂದು, ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ. ಘಟನೆಯ ನಂತರ ಗಾಯಗೊಂಡ ಮಹಾದೇವಿಯನ್ನು ತಕ್ಷಣವೇ ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಐಸಿಯು ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯರು ಅವರ ಸ್ಥಿತಿಯನ್ನು ಗಂಭೀರವಾಗಿ ಗಮನಿಸುತ್ತಿದ್ದಾರೆ.

ಘಟನೆಯ ಕುರಿತು ಮಾಹಿತಿ ಪಡೆದ ಮುರಗೋಡ ಪೊಲೀಸ್ ಠಾಣೆಯ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

Edited By :
PublicNext

PublicNext

05/05/2026 02:38 pm

Cinque Terre

9.91 K

Cinque Terre

0

ಸಂಬಂಧಿತ ಸುದ್ದಿ