ಕೋಟ: ನೀಟ್ ಪರೀಕ್ಷೆಯಲ್ಲಿ ಅಂಕ ಕಡಿಮೆ ಬರಬಹುದೆಂಬ ಭೀತಿಯಲ್ಲಿ ನಾಪತ್ತೆಯಾಗಿದ್ದ ವಿದ್ಯಾರ್ಥಿಯನ್ನು ಕ್ಷಿಪ್ರ ಕಾರ್ಯಾಚರಣೆ ಮೂಲಕ ಕೋಟ ಪೊಲೀಸರು ಸಕಲೇಶಪುರದಲ್ಲಿ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.
ವಿದ್ಯಾರ್ಥಿಯನ್ನು ಕೋಟ ಮೂರುಕೈ ನಿವಾಸಿ ಅಭಿಷೇಕ್(17) ಎಂದು ಗುರುತಿಸಲಾಗಿದೆ.
ದ್ವಿತೀಯ ಪಿಯುಸಿ ವಿದ್ಯಾರ್ಥಿಯಾಗಿದ್ದ ಈತ ಹಾಸ್ಟೆಲ್ನಲ್ಲಿ ವಾಸವಾಗಿದ್ದನು. ಅಭಿಷೇಕ್ ಮೇ 3ರಂದು ಉಡುಪಿಯಲ್ಲಿ ನೀಟ್ ಪರೀಕ್ಷೆ ಬರೆದಿದ್ದು, ಮೇ 4ರಂದು ಹಾಸನದಲ್ಲಿರುವ ತಾಯಿಗೆ ಕರೆ ಮಾಡಿ ಮನೆಯಿಂದ ಮಣಿಪಾಲಕ್ಕೆ ಹೋಗುವುದಾಗಿ ತಿಳಿಸಿದ್ದನು.ಸಂಜೆಯಾದರೂ ಆತ ಮನೆಗೆ ವಾಪಸ್ಸು ಬಾರದ ಬಗ್ಗೆ ಆತಂಕಗೊಂಡ ಪೋಷಕರು ಹುಡುಕಾಟ ಆರಂಭಿಸಿದರು. ಈ ವೇಳೆ ಆತ ಮನೆಯಲ್ಲಿ ಬರೆದಿಟ್ಟ ಪತ್ರ ಪತ್ತೆಯಾಗಿದ್ದು, ಅದರಲ್ಲಿ ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ ಬರಬಹುದು ಎಂಬ ಭೀತಿಯನ್ನು ವ್ಯಕ್ತಪಡಿಸಿದ್ದಾನೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ತನಿಖೆ ನಡೆಸಿ, ಅಭಿಷೇಕ್ನನ್ನು ಸಕಲೇಶಪುರದಲ್ಲಿ ಪತ್ತೆ ಹಚ್ಚಿದ್ದಾರೆ. ನೀಟ್ ಪರೀಕ್ಷೆಗೆ ಕಡಿಮೆ ಅಂಕ ಸಿಗಬಹುದೆಂಬ ಭೀತಿಯಲ್ಲಿ ಮಾನಸಿಕ ಖಿನ್ನತೆಗೆ ಒಳಗಾದ ಅಭಿಷೇಕ್ ಮನೆ ಬಿಟ್ಟು ಧರ್ಮಸ್ಥಳಕ್ಕೆ ಹೋಗಿ ಅಲ್ಲಿಂದ ಸಕಲೇಶಪುರದ ಕಡೆ ತೆರಳುತ್ತಿದ್ದನು. ಈ ಬಗ್ಗೆ ಮಾಹಿತಿ ತಿಳಿದ ಪೊಲೀಸರು ಆತನನ್ನು ಪತ್ತೆ ಹಚ್ಚಿ ವಾಪಸ್ಸು ಕರೆದುಕೊಂಡು ಬರುತ್ತಿದ್ದಾರೆ ಎಂಬ ಮೂಲಗಳು ತಿಳಿಸಿವೆ.
Kshetra Samachara
05/05/2026 09:41 pm
LOADING...