ಬೆಂಗಳೂರು: ಎಂಜಿನಿಯರಿಂಗ್ ವಿದ್ಯಾರ್ಥಿಗಳು ನಡುರಸ್ತೆಯಲ್ಲಿ ಮದ್ಯಸೇವನೆ ಮಾಡುತ್ತಿದ್ದನ್ನು ಪ್ರಶ್ನಿಸಿದ್ದ ಅಮೃತಹಳ್ಳಿ ಪೊಲೀಸ್ ಕಾನ್ಸ್ಟೇಬಲ್ ರುದ್ರಪ್ಪ ಮೇಲೆ ಹಲ್ಲೆ ನಡೆಸಿದ್ದ ಆರೋಪ ಹಿನ್ನೆಲೆ ಇಬ್ಬರ ಬಂಧನವಾಗಿದೆ. ದಾಸರಹಳ್ಳಿ ಮುಖ್ಯರಸ್ತೆಯಲ್ಲಿ
ಕಳೆದ ಮೇ 1 ರಂದು ಮುಂಜಾನೆ ಸುಮಾರು 3 ಗಂಟೆ ಸುಮಾರಿಗೆ ನೈಟ್ ಬೀಟ್ ಡ್ಯೂಟಿಯಲ್ಲಿದ್ದ ಅಮೃತಹಳ್ಳಿ ಕಾನ್ಸ್ಟೇಬಲ್ ರುದ್ರಪ್ಪ ಅವರು, ದಾಸರಹಳ್ಳಿ ಮುಖ್ಯರಸ್ತೆಯಲ್ಲಿ ಪಜೆರೋ ಕಾರ್ ನಿಲ್ಲಿಸಿ ನಾಲ್ವರು ಯುವಕರು ಮದ್ಯಸೇವನೆ ಮಾಡುತ್ತಿರುವುದನ್ನು ಗಮನಿಸಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ ಮಾಡುವುದನ್ನು ಪ್ರಶ್ನಿಸಿದಾಗ, ಕುಡಿದ ಮತ್ತಿನಲ್ಲಿದ್ದ ಯುವಕರು ರುದ್ರಪ್ಪ ಜೊತೆಗೆ ವಾಗ್ವಾದಕ್ಕಿಳಿದು ಹಲ್ಲೆ ನಡೆಸಿದ್ದಾರೆ.
ಕುಡಿದ ಅಮಲಿನಲ್ಲಿದ್ದ ನಾಲ್ವರು ಪುಂಡರು, ಕಾನ್ಸ್ಟೇಬಲ್ ರುದ್ರಪ್ಪ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಅಷ್ಟೇ ಅಲ್ಲದೆ, ಕರ್ನಾಟಕ ಪೊಲೀಸರ ಬಗ್ಗೆ ಅವಾಚ್ಯ ಪದಗಳಿಂದ ನಿಂದಿಸಿ, ಅವರ ಬೈಕ್ ಕೀ ಕಸಿದುಕೊಂಡು, ಕೈ ತಿರುಚಿ ದೈಹಿಕವಾಗಿ ಹಲ್ಲೆ ಮಾಡಿದ್ದಾರೆ.
ಘಟನೆ ಸಂಬಂಧ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ. ಹಲ್ಲೆ ನಡೆಸಿದ ನಾಲ್ವರ ಪೈಕಿ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಉಳಿದ ಇಬ್ಬರು ಆರೋಪಿಗಳ ಪತ್ತೆಗಾಗಿ ಅಮೃತಹಳ್ಳಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ.
PublicNext
06/05/2026 11:27 am
LOADING...