ಚಳ್ಳಕೆರೆ: ಮಧ್ಯ ಕರ್ನಾಟಕ ಭಾಗದ ಐತಿಹಾಸಿಕ ಪುಣ್ಯಕ್ಷೇತ್ರವಾದ ನಾಯಕನಹಟ್ಟಿಯ ಗುರುತಿಪ್ಪೇರುದ್ರಸ್ವಾಮಿ ದೇವಸ್ಥಾನಕ್ಕೆ ದಿನನಿತ್ಯ ಸಾವಿರಾರು ಭಕ್ತರು ಆಗಮಿಸುತ್ತಿದ್ದರೂ, ಬಸ್ ತಂಗುದಾಣದ ಬಳಿ ರಸ್ತೆ ಪಕ್ಕದಲ್ಲೇ ನಿಂತಿರುವ ಚರಂಡಿ ನೀರಿನ ದುರ್ವಾಸನೆ ಭಕ್ತರನ್ನು ಕಂಗೆಡಿಸುತ್ತಿದೆ ಎಂಬ ಆರೋಪ ಕೇಳಿಬಂದಿದೆ.
ಬಸ್ಸಿನಿಂದ ಇಳಿಯುತ್ತಿದ್ದಂತೆಯೇ ದುರ್ವಾಸನೆ ಸ್ವಾಗತ ಮಾಡುತ್ತಿರುವುದರಿಂದ ಭಕ್ತರು ಹಾಗೂ ಪ್ರಯಾಣಿಕರು ಮೂಗು ಮುಚ್ಚಿಕೊಂಡೇ ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬೇಸಿಗೆಯ ನಡುವೆಯೂ ಹರಿದುಬರುವ ಭಕ್ತರ ಅನುಕೂಲಕ್ಕಾಗಿ ಸ್ವಚ್ಛತೆ, ಶುದ್ಧ ಕುಡಿಯುವ ನೀರು ಹಾಗೂ ಚರಂಡಿ ನಿರ್ವಹಣೆಗೆ ಕ್ರಮ ಕೈಗೊಳ್ಳಬೇಕಾದ ಪಟ್ಟಣ ಪಂಚಾಯಿತಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಚರಂಡಿ ನೀರು ಹಸಿರು ಬಣ್ಣಕ್ಕೆ ತಿರುಗಿದ್ದು, ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಿದೆ ಎನ್ನಲಾಗಿದೆ.
ಇದರಿಂದ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದ್ದು, ಈಗಲಾದರೂ ಸಂಬಂಧಪಟ್ಟ ಅಧಿಕಾರಿಗಳು ಚರಂಡಿ ಸ್ವಚ್ಛತೆಗೆ ಮುಂದಾಗಿ ಭಕ್ತರ ಆರೋಗ್ಯ ಕಾಪಾಡುವ ಕೆಲಸ ಮಾಡಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.
PublicNext
15/05/2026 07:49 pm
LOADING...