ಭಟ್ಕಳ: ತಾಲೂಕಿನ ಅಳಿವೆಕೋಡಿ ಸಮುದ್ರ ತೀರದಲ್ಲಿ ಚಿಪ್ಪಿಕಲ್ಲು ತೆಗೆಯಲು ತೆರಳಿದ್ದ ವೇಳೆ ಸಂಭವಿಸಿದ ದುರಂತದಲ್ಲಿ ಮೃತಪಟ್ಟವರ ಪೈಕಿ 8 ಮಂದಿಯ ಶವಗಳ ಸಾಮೂಹಿಕ ಅಂತ್ಯಸಂಸ್ಕಾರ ಸೋಮವಾರ ಭಾವುಕ ವಾತಾವರಣದಲ್ಲಿ ನೆರವೇರಿತು. ಗ್ರಾಮದಲ್ಲಿ ಎಲ್ಲೆಡೆ ಶೋಕದ ಛಾಯೆ ಆವರಿಸಿತ್ತು.
ಸಮುದ್ರದ ಅಲೆಗೆ ಸಿಲುಕಿ ಮೃತಪಟ್ಟವರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಅಂತ್ಯಸಂಸ್ಕಾರದ ವೇಳೆ ಮನಕಲಕುವ ದೃಶ್ಯಗಳು ಕಂಡುಬಂದವು. ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಪೂರ್ಣಗೊಂಡ ಬಳಿಕ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು. ನಂತರ ಅಳಿವೆಕೋಡಿಯಲ್ಲಿ ಸಾಮೂಹಿಕ ಅಂತ್ಯಸಂಸ್ಕಾರ ನೆರವೇರಿಸಲಾಯಿತು.
ಒಂದೇ ಗ್ರಾಮದ ಹಲವರು ದುರಂತದಲ್ಲಿ ಮೃತಪಟ್ಟಿರುವುದು ಗ್ರಾಮಸ್ಥರನ್ನು ಕಂಬನಿ ಮಿಡಿಯುವಂತೆ ಮಾಡಿತು.
ಮೃತರ ಅಂತಿಮ ದರ್ಶನಕ್ಕೆ ಸ್ಥಳೀಯರು, ಸಂಬಂಧಿಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಅಂತಿಮ ನಮನ ಸಲ್ಲಿಸಿದರು.
ಒಂದೇ ಕುಟುಂಬದ ಎಂಟು ಮಂದಿಯ ಅಂತ್ಯಸಂಸ್ಕಾರ ಒಂದೇ ಸ್ಥಳದಲ್ಲಿ ನಡೆದಿದ್ದು ಅತ್ಯಂತ ಹೃದಯವಿದ್ರಾವಕ ದೃಶ್ಯಕ್ಕೆ ಸಾಕ್ಷಿಯಾಯಿತು. ಪರಿವಾರದವರ ಹಾಗೂ ಗ್ರಾಮಸ್ಥರ ಆಕ್ರಂದನ ಮನಕಲಕುವಂತಿತ್ತು. ದಂಪತಿಯೊಬ್ಬರ ಮೃತದೇಹವನ್ನು ಒಂದೇ ಚಿತೆಯಲ್ಲಿ ಇರಿಸಿ ಅಂತ್ಯಸಂಸ್ಕಾರ ನೆರವೇರಿಸಿದ ದೃಶ್ಯ ಅಲ್ಲಿದ್ದವರ ಕಣ್ಣೀರನ್ನು ತರಿಸಿತು.
ದುರಂತ ನಡೆದ ದಿನ 10 ಮೃತದೇಹಗಳು ಪತ್ತೆಯಾಗಿದ್ದವು. ಸೋಮವಾರ ಬೆಳಗ್ಗೆ ನಾಪತ್ತೆಯಾಗಿದ್ದ ಮಾದೇವ ನಾಯ್ಕ ಅವರ ಮೃತದೇಹವೂ ಪತ್ತೆಯಾಗಿದ್ದು, ಒಟ್ಟು ಸಾವಿನ ಸಂಖ್ಯೆ 11ಕ್ಕೆ ಏರಿದೆ. ಮೃತದೇಹ ಪತ್ತೆಯಾದ ಬಳಿಕ ಕುಟುಂಬಸ್ಥರ ದುಃಖ ಮತ್ತಷ್ಟು ಮಡುಗಟ್ಟಿತು.
ಉಸ್ತುವಾರಿ ಸಚಿವ ಮಂಕಾಳ ವೈದ್ಯ ಹಾಗೂ ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ ಅವರು, ಸರ್ಕಾರದಿಂದ ಅಗತ್ಯ ಪರಿಹಾರ ಹಾಗೂ ನೆರವು ನೀಡುವ ಭರವಸೆ ನೀಡಿದರು.
PublicNext
25/05/2026 03:30 pm
LOADING...