ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಿಜೆಪಿಯಲ್ಲಿ ಮಹತ್ವದ ಬದಲಾವಣೆ : 4 ರಾಜ್ಯಗಳಿಗೆ ಹೊಸ ಸಾರಥಿಗಳ ನೇಮಕ!

ನವದೆಹಲಿ: ಭಾರತೀಯ ಜನತಾ ಪಕ್ಷ (ಬಿಜೆಪಿ) ನಾಲ್ಕು ರಾಜ್ಯಗಳಿಗೆ ನೂತನ ರಾಜ್ಯಾಧ್ಯಕ್ಷರನ್ನು ಘೋಷಿಸಿದೆ. ದೆಹಲಿ, ಪಂಜಾಬ್, ತ್ರಿಪುರ ಮತ್ತು ಹರಿಯಾಣ ರಾಜ್ಯಗಳಿಗೆ ಹೊಸ ಸಾರಥಿಗಳನ್ನು ನೇಮಕ ಮಾಡಿ ಪಕ್ಷ ಆದೇಶ ಹೊರಡಿಸಿದೆ. ಪಕ್ಷದ ಸಂಘಟನೆಗೆ ಹೊಸ ಚೈತನ್ಯ ತುಂಬುವ, ಕೇಂದ್ರ ಹಾಗೂ ರಾಜ್ಯ ಮಟ್ಟದಲ್ಲಿ ಪಕ್ಷವನ್ನು ಬಲಪಡಿಸುವ ಮತ್ತು ಮುಂಬರುವ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಬಿಜೆಪಿ ತಿಳಿಸಿದೆ. ಹೊಸ ಮುಖಗಳಿಗೆ ಅವಕಾಶ ನೀಡುವ ಮೂಲಕ ಪಕ್ಷದ ಕಾರ್ಯವೈಖರಿಗೆ ನವಚೈತನ್ಯ ತುಂಬುವ ಗುರಿಯನ್ನು ಬಿಜೆಪಿ ಹೊಂದಿದೆ.

ದೆಹಲಿ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಹರ್ಷ್ ಮಲ್ಹೋತ್ರಾ ಅವರನ್ನು ನೇಮಿಸಲಾಗಿದೆ. ಪ್ರಸ್ತುತ ಕೇಂದ್ರ ಸರ್ಕಾರದಲ್ಲಿ ರಾಜ್ಯ ಖಾತೆ ಸಚಿವರಾಗಿ ಕಾರ್ಯನಿರ್ವಹಿಸುತ್ತಿರುವ ಮಲ್ಹೋತ್ರಾ ರಾಜಕೀಯ ಮತ್ತು ಆಡಳಿತದಲ್ಲಿ ಅಪಾರ ಅನುಭವ ಹೊಂದಿದ್ದಾರೆ. ರಾಜಕೀಯವಾಗಿ ಅತ್ಯಂತ ಪ್ರಮುಖ ಕೇಂದ್ರವಾಗಿರುವ ದೆಹಲಿಯಲ್ಲಿ, ಅವರ ನೇಮಕಾತಿಯು ಪಕ್ಷಕ್ಕೆ ಹೊಸ ಶಕ್ತಿ ನೀಡುವ ಸಾಧ್ಯತೆ ಇದೆ.

ಪಂಜಾಬ್‌ಗೆ ಸರ್ದಾರ್ ಕೇವಲ್ ಸಿಂಹ ಡಿಲ್ಲೋ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಪಂಜಾಬ್‌ನ ಸೂಕ್ಷ್ಮ ರಾಜಕೀಯ ವಾತಾವರಣ, ಪ್ರಾದೇಶಿಕ ಮತ್ತು ಧಾರ್ಮಿಕ ಸಮೀಕರಣಗಳನ್ನು ಪರಿಗಣಿಸಿ ಈ ಆಯ್ಕೆ ಮಾಡಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ತ್ರಿಪುರಕ್ಕೆ ಶಾಸಕ ಅಭಿಷೇಕ್ ದೇಬ್ ರಾಯ್ ಅವರನ್ನು ಹೊಸ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಿಸಲಾಗಿದೆ. ಈಗಾಗಲೇ ಶಾಸಕರಾಗಿ ಜನಪ್ರತಿನಿಧಿಗಳಾಗಿ ಕಾರ್ಯನಿರ್ವಹಿಸುತ್ತಿರುವ ಅವರು, ತ್ರಿಪುರಾದ ನೆಲಮಟ್ಟದ ರಾಜಕೀಯ ಪರಿಸ್ಥಿತಿಯ ಬಗ್ಗೆ ಉತ್ತಮ ಅರಿವು ಹೊಂದಿದ್ದಾರೆ. ಈಶಾನ್ಯ ಭಾರತದ ಈ ಚಿಕ್ಕ ರಾಜ್ಯದಲ್ಲಿ ಬಿಜೆಪಿ ಇತ್ತೀಚಿನ ವರ್ಷಗಳಲ್ಲಿ ತನ್ನ ಹಿಡಿತವನ್ನು ಮತ್ತಷ್ಟು ಬಲಪಡಿಸಿದೆ.

ಹರಿಯಾಣಕ್ಕೆ ಡಾ. ಅರ್ಚನಾ ಗುಪ್ತಾ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಮಹಿಳಾ ನಾಯಕತ್ವಕ್ಕೆ ಹೆಚ್ಚಿನ ಆದ್ಯತೆ ನೀಡಿರುವ ಈ ನಿರ್ಧಾರವು, ರಾಜ್ಯದಲ್ಲಿ ಮಹಿಳಾ ಕಾರ್ಯಕರ್ತರ ಭಾಗವಹಿಸುವಿಕೆಯನ್ನು ಹೆಚ್ಚಿಸುವ ನಿರೀಕ್ಷೆಯಿದೆ.

Edited By :
PublicNext

PublicNext

28/05/2026 09:53 pm

Cinque Terre

2.34 K

Cinque Terre

0