ಬೆಂಗಳೂರು: ನೂತನ ಮುಖ್ಯಮಂತ್ರಿ ಆಯ್ಕೆಗಾಗಿ ನಡೆದ ಮಹತ್ವದ ಶಾಸಕಾಂಗ ಪಕ್ಷದ (CLP) ಸಭೆಯಲ್ಲಿ ಪಾಲ್ಗೊಳ್ಳಲು ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಹಾಗೂ ಎಂಎಲ್ಸಿ ಡಾ. ಯತೀಂದ್ರ ಸಿದ್ದರಾಮಯ್ಯ ಇಂದು ವಿಧಾನಸೌಧಕ್ಕೆ ಆಗಮಿಸಿದರು. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ, ಅವರ ಪುತ್ರ ಯತೀಂದ್ರ ಅವರಿಗೆ ಮುಂದಿನ ಸರ್ಕಾರದಲ್ಲಿ ಪ್ರಮುಖ ಹುದ್ದೆ ದೊರೆಯಲಿದೆ ಎಂಬ ವದಂತಿಗಳು ಹಬ್ಬಿದ್ದವು. ಈ ಹಿನ್ನೆಲೆಯಲ್ಲಿ ಅವರ ಈ ಭೇಟಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಸಭೆಗೆ ಆಗಮಿಸುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, "ನಾವು ಶಾಸಕಾಂಗ ಪಕ್ಷದ ಸಭೆಯಲ್ಲಿ ಭಾಗವಹಿಸಲು ಬಂದಿದ್ದೇವೆ. ಇಂದಿನ ಸಭೆಯ ಪ್ರಮುಖ ಕಾರ್ಯಸೂಚಿ ಎಂದರೆ ಶಾಸಕಾಂಗ ಪಕ್ಷದ ನೂತನ ನಾಯಕನನ್ನು ಆಯ್ಕೆ ಮಾಡುವುದಾಗಿದೆ. ಹೈಕಮಾಂಡ್ ಹಾಗೂ ಪಕ್ಷದ ನಿರ್ಧಾರಕ್ಕೆ ನಾವು ಸಂಪೂರ್ಣ ಬೆಂಬಲ ನೀಡಲಿದ್ದೇವೆ," ಎಂದು ಸ್ಪಷ್ಟಪಡಿಸಿದರು.
ಇದೇ ವೇಳೆ ಮಾಧ್ಯಮ ಪ್ರತಿನಿಧಿಗಳು, "ಹೊಸ ಸರ್ಕಾರದಲ್ಲಿ ನೀವು ಉಪಮುಖ್ಯಮಂತ್ರಿ (Deputy CM) ಆಗಲಿದ್ದೀರಾ?" ಎಂದು ನೇರ ಪ್ರಶ್ನೆ ಕೇಳಿದಾಗ, ಅದಕ್ಕೆ ನಸುನಗುತ್ತಲೇ ಉತ್ತರಿಸಿದ ಯತೀಂದ್ರ, "ಅದರ ಬಗ್ಗೆ ನನಗೇನೂ ಗೊತ್ತಿಲ್ಲ," ಎಂದು ಹೇಳಿ ಜಾರಿಕೊಂಡರು.
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಮುನ್ನವೇ ಹೈಕಮಾಂಡ್ ಎದುರು ತಮ್ಮ ಪುತ್ರನಿಗೆ ಸಚಿವ ಸಂಪುಟದಲ್ಲಿ ಸೂಕ್ತ ಸ್ಥಾನ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದವು. ಹೀಗಾಗಿ ಯತೀಂದ್ರ ಸಚಿವರಾಗುವುದು ಬಹುತೇಕ ಖಚಿತ ಎಂದು ಮೂಲಗಳು ತಿಳಿಸಿವೆ. ಆದರೆ, ಉಪಮುಖ್ಯಮಂತ್ರಿ ರೇಸ್ನಲ್ಲಿ ತಮ್ಮ ಹೆಸರು ಕೇಳಿಬರುತ್ತಿರುವ ಕುರಿತು ಸ್ವತಃ ಯತೀಂದ್ರ ಅವರೇ ನಿಗೂಢ ನಡೆ ಕಾಯ್ದುಕೊಂಡಿರುವುದು ಮತ್ತಷ್ಟು ಕುತೂಹಲ ಮೂಡಿಸಿದೆ.
PublicNext
30/05/2026 04:43 pm